


ಕೊಪ್ಪಳ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನವೆಂಬರ್ 8 ರಂದು ನಡೆಯುವ ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಜನರನ್ನು ಸೇರಿಸುವುದರ ಜೊತೆಗೆ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜನೆ ಮಾಡಬೇಕೆಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಗುರುವಾರ ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂತಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಯುವಕರು ಹಾಗೂ ಸಮಾಜದ ಹಿರಿಯರು ತಮ್ಮ ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಯಾರನ್ನೂ ಕರೆತರುವ ಕೆಲಸ ಆಗಬಾರದು. ಈ ಸಲ ಕನಕದಾಸರ ಪುತ್ಥಳಿ ಹೊಸದಾಗಿ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಉದ್ಘಾಟನೆ ಆಗಿರುವುದರಿಂದ ಅಲ್ಲಿಂದಲೇ ಕನಕದಾಸರ ಭಾವಚಿತ್ರದ ಮೆರವಣಿಗೆ ಆರಂಭವಾಗಬೇಕು. ನವೆಂಬರ್ 8 ರಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆ ಆರಂಭವಾಗಿ ಸಾಹಿತ್ಯ ಭವನದವರೆಗೆ ನಡೆಯಲಿದ್ದು, ಸಾಹಿತ್ಯ ಭವನದಲ್ಲಿ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಕನಕದಾಸರ ಕುರಿತು ಒಳ್ಳೆಯ ಸಂದೇಶ ನೀಡುವ ಉಪನ್ಯಾಸಕರನ್ನು ಕಾರ್ಯಕ್ರಮಕ್ಕೆ ಕರೆಸಬೇಕು. ಕನಕದಾಸರ ಭಾವಚಿತ್ರದ ಮೆರವಣಿಗೆ ಸಂದರ್ಭದಲ್ಲಿ ಡೊಳ್ಳು ಕುಣಿತ ಸೇರಿದಂತೆ ಇತರೆ ಒಳ್ಳೆಯ ಕಲಾತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಕಾರ್ಯಕ್ರಮಕ್ಕೆ ತರಿಸಬೇಕೆಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಮಾತನಾಡಿ, ಕನಕದಾಸರ ಜಯಂತಿ ದಿನದಂದು ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಈ ಜಯಂತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗವಹಿಸಬೇಕು.
ಕನಕದಾಸರ ಕುರಿತು ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ವಿಜೇತರಾದ ಮಕ್ಕಳಿಗೆ ಸನ್ಮಾನಿಸಬೇಕೆಂದು ಸಂಬ0ಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾ. ಮಹೇಶ್ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ, ಕನಕದಾಸ ಸಮಾಜದ ಮುಖಂಡರಾದ ಕೆ. ಬಸವರಾಜ ಹಿಟ್ನಾಳ, ಹನುಮಂತಪ್ಪ ಕೌದಿ, ಮುದ್ದಣ್ಣ ಬೇವಿನಹಳ್ಳಿ, ಜಂಬಣ್ಣ ನಂದಾಪೂರ, ಕುಬೇರ ಮಜ್ಜಿಗಿ, ಪರಶುರಾಮ ಅಣ್ಣಿಗೇರಿ, ಆನಂದ ಕಿನ್ನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್