
ಗದಗ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯಡಿ ಕೂಲಿಕಾರರಿಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ರೋಣ ತಾಲೂಕಿನ ಹುಲ್ಲೂರ ಗ್ರಾಮ ಪಂಚಾಯತಿಯಲ್ಲಿ ಇ-ಕೆವೈಸಿ ಕಾರ್ಯಕ್ಕೆ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ. ಕಂದಕೂರ ಅವರು ಭೇಟಿ ನೀಡಿ, ಖುದ್ದು ಫೋಟೋ ತೆಗೆದು ಇ-ಕೆವೈಸಿ ಪ್ರಕ್ರಿಯೆಯನ್ನು ನಡೆಸಿ ಜಾಗೃತಿ ಮೂಡಿಸಿದರು.
ಹುಲ್ಲೂರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅವರು, ನರೇಗಾ ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿ, ಇ-ಕೆವೈಸಿ ಪ್ರಕ್ರಿಯೆಯನ್ನು ಅಕ್ಟೋಬರ್ 31, 2025 ರೊಳಗಾಗಿ ಪೂರ್ಣಗೊಳಿಸುವಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸೂಚಿಸಿದರು.
ಇ-ಕೆವೈಸಿ ಮಾಡಿಸದಿದ್ದರೆ ನರೇಗಾ ಉದ್ಯೋಗ ಚೀಟಿಗಳು ರದ್ದಾಗುವ ಸಾಧ್ಯತೆ ಇದೆ. ಇದರಿಂದ ಕೂಲಿಕಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸದ ಅವಕಾಶ ಕಳೆದುಕೊಳ್ಳುವ ಆತಂಕವಿದೆ. ಆದ್ದರಿಂದ ಎಲ್ಲರೂ ತಕ್ಷಣವೇ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು, ಎಂದು ಅವರು ಗ್ರಾಮಸ್ಥರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಅವರು ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಕೂಲಿಕಾರರನ್ನು ಒಟ್ಟುಗೂಡಿಸಿ, ಇ-ಕೆವೈಸಿ ಕಾರ್ಯಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಬೆಳಿಗ್ಗೆ ಮತ್ತು ಸಾಯಂಕಾಲದ ವೇಳೆಯಲ್ಲಿ ನೆಟ್ವರ್ಕ್ ಸಮಸ್ಯೆ ಕಡಿಮೆ ಇರುವುದರಿಂದ ಈ ಸಮಯದಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ವೇಗವಾಗಿ ನಡೆಸಲು ಸಿಬ್ಬಂದಿಗೆ ಸಲಹೆ ನೀಡಿದರು.
ರೋಣ ತಾಲೂಕಿನಲ್ಲಿ ಒಟ್ಟು 50090 ನರೇಗಾ ಕೂಲಿಕಾರರಿದ್ದು, ಈ ಪೈಕಿ ಸುಮಾರು 20758 ಇ-ಕೆವೈಸಿ ಪ್ರಕ್ರಿಯೆಯನ್ನು ಈಗಾಗಲೇ ಪೂರ್ಣಗೊಳಿಸಿದ್ದಾರೆ. ಉಳಿದ ಕೂಲಿಕಾರರಿಗೆ ಮುಂದಿನ ನಾಲ್ಕು ದಿನಗಳಲ್ಲಿ ಈ ಕಾರ್ಯವನ್ನು ಮುಗಿಸಲು ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳಿಗೆ ಚಂದ್ರಶೇಖರ ಅವರು ತಾಕೀತು ಮಾಡಿದರು.
ಈ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತಿ ವ್ಯವಸ್ಥಾಪಕರಾದ ದೇವರಾಜ ಸಜ್ಜನಶೆಟ್ಟರ, ಹುಲ್ಲೂರ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಗಣಕಯಂತ್ರ ನಿರ್ವಾಹಕರು, ನರೇಗಾ ಯೋಜನೆಯ ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಎಂಐಎಸ್ ಸಂಯೋಜಕರು, ಬಿಎಫ್ಟಿ, ಮತ್ತು ಗ್ರಾಮ ಕಾಯಕ ಮಿತ್ರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP