


ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದಿಂದ ನವೆಂಬರ್ 08 ರಂದು ಭಕ್ತ ಕನಕದಾಸರ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಅಚ್ಚುಕಟ್ಟಾಗಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾ ಕೇಂದ್ರದಲ್ಲಿ ಭಕ್ತ ಕನಕದಾಸರ ಜಯಂತಿ ಆಚರಣೆ ಕುರಿತು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಮಾತನಾಡಿ, ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ದತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನ.08 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಕುಮಾರಸ್ವಾಮಿ ದೇವಸ್ಥಾನ ಹತ್ತಿರದ ದಾಸಶ್ರೇಷ್ಠ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಪುತ್ಥಳಿಯ ಸುತ್ತಲಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಬಣ್ಣ ಹಚ್ಚುವ ಕಾರ್ಯ, ಹೂವಿನ ಅಲಂಕಾರ ಕೈಗೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.
ಬಳಿಕ ಬೆಳಿಗ್ಗೆ 10 ಗಂಟೆಗೆ ಕನಕದಾಸರ ಭಾವಚಿತ್ರದೊಂದಿಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತ- ಬೆಂಗಳೂರು ರಸ್ತೆ- ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ- ಜೈನ್ ಮಾರ್ಕೆಟ್ ರಸ್ತೆ- ಹೆಚ್.ಆರ್.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದ ವೇದಿಕೆಯವರೆಗೆ ಮೆರವಣಿಗೆ ಜರುಗುತ್ತದೆ ಹಾಗೂ ಮೆರವಣಿಗೆಯಲ್ಲಿ ವಿವಿಧ ಪ್ರಕಾರದ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.
ನಂತರ ಅಂದು ಮಧ್ಯಾಹ್ನ 12.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಆಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದಾಸ ಶ್ರೇಷ್ಠ ಕನಕದಾಸರು ಸಮಾಜದ ಒಳಿತಿಗಾಗಿ ಶ್ರಮಿಸಿದವರಾಗಿದ್ದು, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂತಹ ಮಹಾತ್ಮರ ಆಚರಣೆಗೆ ಎಲ್ಲರ ಸಹಕಾರ ಅಗತ್ಯವಿದೆ. ಹಾಗಾಗಿ ಜಯಂತಿ ಕಾರ್ಯಕ್ರಮಗಳಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಶಾಲಾ-ಕಾಲೇಜು ಮಕ್ಕಳು ಮತ್ತು ಸಾರ್ವಜನಿಕರು ಸ್ವ-ಇಚ್ಛೆಯಿಂದ ಭಾಗವಹಿಸಬೇಕು ಎಂದು ಹೇಳಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ-ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕು. ಈ ಕುರಿತು ಡಿಡಿಪಿಐ, ಡಿಡಿಪಿಯು ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದು ನಿರ್ದೇಶಿಸಿದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರು, ಜನಪ್ರತಿನಿಧಿ ಮತ್ತು ಸಂಘ-ಸAಸ್ಥೆಗಳ ಪದಾಧಿಕಾರಿಗಳನ್ನು ಆಹ್ವಾನಿಸಬೇಕು ಎಂದು ಸೂಚಿಸಿದ ಅವರು, ವೇದಿಕೆ ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ಶ್ರೇಷ್ಠ ಕನಕದಾಸರ ಕುರಿತು ನುರಿತರಿಂದ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಡಿ ಸಾಧನೆಗೈದ ಮಹನೀಯರ ಹೆಸರು ನೀಡಿದರೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಮುಖಂಡರ ಬಳಿ ಚರ್ಚಿಸಿದರು.
ವೇದಿಕೆ ಅಲಂಕಾರ, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಲಘು-ಉಪಹಾರ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಬ್ಯಾನರ್ ಅಳವಡಿಕೆ ಕುರಿತು ಅನುಮತಿ ಬಗ್ಗೆ ಮುಖಂಡರು ಪ್ರಸ್ತಾಪಿಸಿದಾಗ, ಯಾವುದೇ ರಸ್ತೆಗೆ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ತೊಂದರೆಯಾಗದ0ತೆ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿಯವರು ತಿಳಿಸಿದರು.
ಭಕ್ತ ಕನಕದಾಸರ ವಿಚಾರಧಾರೆಗಳನ್ನೊಳಗೊಂಡ ಕಿರುಹೊತ್ತಿಗೆ ನೀಡಬೇಕು ಎಂದು ಸಮುದಾಯದ ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್