ಬೆಂಗಳೂರು, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಂದೆ ನಡೆಯುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ–ಜೆಡಿಎಸ್ ಮೈತ್ರಿ ಅಬಾಧಿತವಾಗಿ ಮುಂದುವರಿಯುತ್ತದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲಾ, ತಾಲೂಕು, ಜಿಬಿಎ ಹಾಗೂ ವಿಧಾನ ಸಭೆ ಚುನಾವಣೆಗಳಲ್ಲಿ ಈ ಮೈತ್ರಿ ಮುಂದುವರಿಯಲಿದೆ. ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಆತಂಕವಿಲ್ಲ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನನ್ನ ಸಂಬಂಧ 10 ವರ್ಷಗಳಿಂದ ಉತ್ತಮವಾಗಿದೆ. ನಾನು ಯಾವತ್ತೂ ಮೋದಿ ಬಗ್ಗೆ ಲಘುವಾಗಿ ಮಾತನಾಡಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಕೇಂದ್ರ ಸರಕಾರದಿಂದ ಪರಿಹಾರ ದೊರಕಿಸಲು ಪ್ರಧಾನಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದು ಅಗತ್ಯ ಬಿದ್ದರ ಖುದ್ದು ಭೇಟಿಯಾಗಿ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಲು ಮನವೊಲಿಸುವುದಾಗಿ ದೇವೆಗೌಡ ಹೇಳಿದರು.
ಕೇಂದ್ರ ಸಚಿವ ಕುಮಾರಸ್ವಾಮಿ ಕುರಿತು ಮಾತನಾಡಿದ ಅವರು ಕೆಲವು ತಿಂಗಳು ಆರೋಗ್ಯ ಸಮಸ್ಯೆಯಿಂದ ರಾಜ್ಯದಲ್ಲಿ ಪ್ರವಾಸಕ್ಕೆ ಬಂದಿರಲಿಲ್ಲ. ಈಗ ಆರೋಗ್ಯ ಉತ್ತಮವಾಗಿದೆ. ವೈದ್ಯರು ಯಾವುದೇ ತೊಂದರೆ ಇಲ್ಲವೆಂದು ಹೇಳಿದ್ದು ಶೀಘ್ರದಲ್ಲೇ ಕುಮಾರಸ್ವಾಮಿ ರಾಜ್ಯ ಪ್ರವಾಸ ಆರಂಭಿಸುತ್ತಾರೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa