ಕೊಪ್ಪಳ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದ್ದು, ಅರ್ಹ ಮತದಾರರಿಂದ ಹೆಸರು ನೋಂದಾಯಿಸಲು ಸೂಚಿಸಿದೆ.
ಭಾರತ ಚುನಾವಣಾ ಆಯೋಗವು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಅಧಿಕಾರಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ನಿಯೋಜಿತ ಅಧಿಕಾರಿಗಳನ್ನಾಗಿ ನೇಮಿಸಿರುತ್ತದೆ.
ಅರ್ಹತಾ ದಿನಾಂಕ: 01.11.2025 ಕ್ಕೆ ಅನ್ವಯಿಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ದಪಡಿಸುವ ಕಾರ್ಯವು ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗಿರುತ್ತದೆ. ಭಾರತ ಚುನಾವಣಾ ಆಯೋಗವು ದಿನಾಂಕ 12.09.2025 ರ ಪತ್ರದನ್ವಯ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19 ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆಂದು ನಿರ್ದೇಶನ ನೀಡಿರುತ್ತಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ನಮೂನೆ 19 ರಲ್ಲಿ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 6ರ ಗುರುವಾರ ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25 ರ ಮಂಗಳವಾರದಂದು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ರವರೆಗೆ ಅವಕಾಶ ಕಲ್ಪಸಿದೆ. ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಭಾರತದ ಪ್ರಜೆಯಾಗಿರುವ, ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025 ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದ ನಿರ್ದಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹರಾಗಿರುತ್ತಾರೆ. ಹಾಗೆಯೇ ನಿರ್ದಿಷ್ಟಪಡಿಸಿದ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯು ಆಯಾ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಲಭ್ಯವಿರುತ್ತದೆ.
ಖುದ್ದಾಗಿ ಅಥವಾ ಅಂಚೆ ಮುಖಾಂತರ ಗುಚ್ಚಗಳಲ್ಲಿ (ಬಲ್ಕ್) ಸಲ್ಲಿಸಿದ ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸತಕ್ಕದ್ದಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಮತದಾರರ ಸಿಬ್ಬಂದಿಯವರ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ನೋಂದಣಾಧಿಕಾರಿಗಳಿಗೆ ಕಳುಹಿಸಬಹುದು. ಒಂದೇ ಕುಟಂಬದ ಎಲ್ಲಾ ಸದಸ್ಯರು ನಮೂನೆ 19 ರಲ್ಲಿ ಅರ್ಜಿಗಳನ್ನು ಕುಟುಂಬದ ಯಾವುದಾದರೂ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ, ಪ್ರಮಾಣ ಪತ್ರವನ್ನು ಪರಿಶೀಲಿಸಿಕೊಳ್ಳತಕ್ಕದ್ದು.
ಅರ್ಜಿಯಲ್ಲಿನ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950 ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು. ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ನೇ ನಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಟ 3 ವರ್ಷ ಬೋಧನಾ ವೃತಿಯಲ್ಲಿ ನಿರತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ-2 ರಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.
ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಿದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತುಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುತ್ತಾರೆ. ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕøತಗೊಳ್ಳುತ್ತವೆ. ಗುಚ್ಚಗಳಲ್ಲಿ (ಬಲ್ಕ್) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಆಯೋಗವು ಮುಂಬರುವ ದಿನಗಳಲ್ಲಿ ನಮೂನೆ 19 ರ ಅರ್ಜಿಗಳನ್ನು ಇಖಒS ನಲ್ಲಿ ಅಳವಡಿಸಲು ಉದ್ದೇಶಿಸಿದೆ.
ಕರ್ನಾಟಕ ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸತಕ್ಕದ್ದು. ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಈ ಮೂಲಕ ಎಲ್ಲಾ ಅರ್ಹ ಮತದಾರರಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್