ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಗದಗ ಜಿಲ್ಲೆಯ ಶ್ರೇಷ್ಠ ಸಾಧನೆಗೆ ಮೆಚ್ಚುಗೆ
ಗದಗ, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಗದಗ ಜಿಲ್ಲೆ ೯೩ ಶೇಕಡಾ ಸಾಧನೆ ದಾಖಲಿಸಿ ರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಗಳಿಸಿದೆ. ಈ ಸಾಧನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಸಿ.ಎನ್. ಕ
ಪೋಟೋ


ಗದಗ, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಗದಗ ಜಿಲ್ಲೆ ೯೩ ಶೇಕಡಾ ಸಾಧನೆ ದಾಖಲಿಸಿ ರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಗಳಿಸಿದೆ. ಈ ಸಾಧನೆಗೆ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಸಿ.ಎನ್. ಕುಂದಗೋಳ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

“ಆಯೋಗ ನಿಗದಿಪಡಿಸಿದ ಅವಧಿಯೊಳಗೆ ಗದಗ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಅತ್ಯಂತ ಶ್ರದ್ಧೆಯಿಂದ ಹಾಗೂ ಯೋಜಿತವಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ ೬,೦೦೦ ಕ್ಕೂ ಹೆಚ್ಚು ಎನ್‌ಎಸ್‌ಎಸ್ ವಿದ್ಯಾರ್ಥಿಗಳನ್ನು ಸಮೀಕ್ಷಾ ಕಾರ್ಯದಲ್ಲಿ ಬಳಸಿರುವುದು ಅತ್ಯಂತ ಶ್ಲಾಘನೀಯ. ಅವರು ಮನೆಮನೆಗೆ ತೆರಳಿ ಜನರ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಯ ಕುರಿತು ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷಾದಾರರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡುವಂತೆ ಮೊದಲೆ ಜಾಗೃತಿ ಮೂಡಿಸಿದ್ದು ಪ್ರಗತಿ ಸಾಧಿಸಲು ಸಹಕಾರಿಯಾಗಿದೆ. ಈ ರೀತಿಯ ಸಂಘಟಿತ ಮತ್ತು ಸಮನ್ವಯಿತ ಪ್ರಯತ್ನದಿಂದಲೇ ಗದಗ ಜಿಲ್ಲೆ ರಾಜ್ಯದ ಶ್ರೇಷ್ಠ ಜಿಲ್ಲೆಗಳ ಪೈಕಿ ಒಂದಾಗಿದೆ,” ಎಂದು ಹೇಳಿದರು.

ಅವರು ಮುಂದುವರಿದು, “ಸಮೀಕ್ಷೆಯಲ್ಲಿ ಸಹಕರಿಸಿದ ಜಿಲ್ಲಾಧಿಕಾರಿಗಳು, ಇಲಾಖಾ ಮುಖ್ಯಸ್ಥರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು. ಗದಗ ಜಿಲ್ಲೆಯ ಈ ಮಾದರಿ ಪ್ರಗತಿ ರಾಜ್ಯದ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಲಿ,” ಎಂದು ಹೇಳಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಸಭೆಯಲ್ಲಿ ಮಾತನಾಡಿ, “ಸಮೀಕ್ಷೆಯ ಯಶಸ್ಸಿಗೆ ಎಲ್ಲಾ ಇಲಾಖೆಗಳ ಸಂಯೋಜನೆ ಮುಖ್ಯ ಪಾತ್ರ ವಹಿಸಿದೆ. ನಗರಸಭೆಯ ವಾಹನಗಳಲ್ಲಿ ಜಿಂಗಲ್‌ಗಳ ಮೂಲಕ ಜನಜಾಗೃತಿ ಮೂಡಿಸಲಾಯಿತು. ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಸಮೀಕ್ಷಾ ಕಾರ್ಯಕ್ಕೆ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಸಮೀಕ್ಷೆಯಲ್ಲಿ ಒಟ್ಟು ೬೫ ಪ್ರಶ್ನೆಗಳಿದ್ದು, ಅವುಗಳನ್ನು ಜನರಿಗೆ ಸರಳವಾಗಿ ಅರ್ಥವಾಗುವಂತೆ ತಿಳಿಸಿ ಮಾಹಿತಿ ಸಂಗ್ರಹಿಸಲಾಗಿದೆ.

ಇದುವರೆಗೆ ೯೩ ಶೇಕಡಾ ಕಾರ್ಯ ಪೂರ್ಣಗೊಂಡಿದ್ದು, ಹೊಸ ೪ ಮತ್ತು ೫ನೇ ಆಪ್‌ ವರ್ಶನ್‌ಗಳ ಮೂಲಕ ಡೇಟಾ ಸಂಗ್ರಹ ಕಾರ್ಯ ಸರಳವಾಗಿ ಹಾಗೂ ನಿಖರವಾಗಿ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ಸಂಪೂರ್ಣ ಸಮೀಕ್ಷೆ ಮುಕ್ತಾಯಗೊಳ್ಳಲಿದೆ,” ಎಂದು ವಿವರಿಸಿದರು.

ಅವರು ಹೆಸ್ಕಾಂ ನೌಕರರ ಸಹಕಾರವನ್ನೂ ಶ್ಲಾಘಿಸಿದರು. “ತಮ್ಮದೇ ಇಲಾಖೆ ಕೆಲಸದ ನಡುವೆಯೂ ಸಮೀಕ್ಷೆ ಸಮಯಕ್ಕೆ ಪೂರ್ಣಗೊಳ್ಳುವಂತೆ ಕ್ಷೇತ್ರ ಮಟ್ಟದಲ್ಲಿ ಹೆಸ್ಕಾಂ ನೌಕರರು ಸಹಕಾರ ನೀಡಿದ್ದಾರೆ,” ಎಂದರು.

ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಸಿ.ಎನ್. ಕುಂದಗೋಳ ಅವರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು.

ಸಭೆಯಲ್ಲಿ ಸಮೀಕ್ಷೆಯ ಜಿಲ್ಲಾ ನೊಡಲ್ ಅಧಿಕಾರಿ ಸೈದಾ ಬಳ್ಳಾರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಸಹಾಯಕ ಆಯುಕ್ತ ಗಂಗಪ್ಪ ಎಂ., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಬಿಸಿಎಂ ಜಿಲ್ಲಾ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಸೇರಿದಂತೆ ಆರ್.ಎಸ್. ಬುರಡಿ, ಅಮಿತ್ ಬಿದರಿ, ಶ್ರೀಶೈಲ್ ಸೋಮನಕಟ್ಟಿ, ಕೆ. ಮಲ್ಲಯ್ಯ, ಡಾ. ನಂದಾ ಹಣಬರಟ್ಟಿ, ಡಾ. ಬಸವರಾಜ ಬಳ್ಳಾರಿ, ರಾಜಾರಾಮ ಪವಾರ್, ವಸಂತ ಮಡ್ಲೂರ, ತಹಶಿಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಬಿಇಓಗಳು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande