


ಕುಡತಿನಿ, 13 ನವೆಂಬರ್ (ಹಿ.ಸ.) :
ಆ್ಯಂಕರ್ : ಕುಡತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ (ಬಿಟಿಪಿಎಸ್) ದಲ್ಲಿ ಜಿಲ್ಲಾಡಳಿತದ ಸಹಕಾರದೊಂದಿಗೆ ಕೇಂದ್ರದ ವಿಪತ್ತು ನಿರ್ವಾಹಣಾ ತಂಡದಿ0ದ ನಾಳೆ ಬೆಳಿಗ್ಗೆ 11 ಗಂಟೆಗೆ ಅಣಕು ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಎನ್ಡಿಆರ್ಎಫ್ ನೊಂದಿಗೆ ಏರ್ಪಡಿಸಲಾಗುವ ಪ್ರಸ್ತಕ ಸಾಲಿನ ಅಣುಕು ಪ್ರದರ್ಶನ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಣುಕು ಪ್ರದರ್ಶನದಲ್ಲಿ ಸಂಬ0ಧಿಸಿದ ಅಧಿಕಾರಿಗಳು ಹಾಜರಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ರಾಸಾಯನಿಕ ಸೋರಿಕೆ, ಕಟ್ಟಡ ಕುಸಿತ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದರು.
ಕಟ್ಟಡ ಕುಸಿತ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಾಗ ಕೈಗೊಳ್ಳಬಹುದಾದ ಕ್ರಮ, ಎಚ್ಚರಿಕೆ ಗಂಟೆ ನೀಡುವುದು, ಎಲ್ಲರನ್ನು ಸುರಕ್ಷಿತ ಸ್ಥಳಕ್ಕೆ ಬಂದು ಸೇರುವಂತೆ ಆಜ್ಞೆ ನೀಡುವ ಪರಿ, ಸಾರ್ವಜನಿಕರು-ಕಾರ್ಮಿಕರನ್ನು ರಕ್ಷಿಸಲು ಬೇಕಾದ ಸಾಮಾಗ್ರಿ ಕಿಟ್, ಇದಕ್ಕೆ ಬೇಕಾದ ಇಲಾಖೆಗಳ ಸಹಕಾರ ಸೇರಿದಂತೆ ಹಲವಾರು ಮಾಹಿತಿ ನೀಡಲು ಅಣಕು ಪ್ರದರ್ಶನ ಏರ್ಪಡಿಸಲಾಗುತ್ತಿದ್ದು, ಎಲ್ಲಾ ಅವಶ್ಯಕ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಟ್ಟಡ ಕುಸಿತದ ಅಣುಕು ಪ್ರದರ್ಶನ ನಡೆಯುವ ಸಂದರ್ಭದಲ್ಲಿ ಆ ಸ್ಥಳದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ ಒದಗಿಸಲು ವೈದ್ಯರು, ಆರೋಗ್ಯ ಸಿಬ್ಬಂದಿ ಒದಗಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಅಗ್ನಿ ಶಾಮಕದಳ, ವಾಹನ ದಟ್ಟಣೆ ಮತ್ತು ನಿಯಂತ್ರಣ ಹಾಗೂ ಸೂಕ್ತ ಬಂದೋಬಸ್ತ್ ವ್ಯವಸ್ಥೆಗೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ವಿಪತ್ತು ಸಂಭವಿಸಿದಾಗ ಅಧಿಕಾರಿಗಳು ಮತ್ತು ಸಾರ್ವಜನಿಕರು ಸ್ಪಂದಿಸಿದರೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ತಂಡವು ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳಲು ಸಾಧ್ಯ. ಹಾಗಾಗಿ ಅಣಕು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದು ಹೇಳಿದರು.
ನಾಳೆ ಕಾಲೇಜು ಮಟ್ಟದಲ್ಲಿ ಅಣಕು ಪ್ರದರ್ಶನ : ಪ್ರಸ್ತುತದಲ್ಲಿ ಸಂಭವಿಸುತ್ತಿರುವ ತತ್ಕ್ಷಣದ ಹೃದಯಾಘಾತ, ಆರೋಗ್ಯ ಸಮಸ್ಯೆ ಹಾಗು ಇತರೆ ಕುರಿತಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳಿಂದ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಮುನಿಸಿಪಲ್ ಕಾಲೇಜು ಮತ್ತು ಅಂಚೆ ಕಚೇರಿಯ ಪಕ್ಕದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಅಣಕು ಪ್ರದರ್ಶನ ಏರ್ಪಡಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರುವಂತೆ ಕ್ರಮ ವಹಿಸಬೇಕು ಎಂದು ಡಿಡಿಪಿಯು ಉಪನಿರ್ದೇಶಕರಿಗೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಕೇಂದ್ರದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಇನ್ಸ್ಪೆಕ್ಟರ್ ರಾಮ್ ಭಜ್, ಅಧಿಕಾರಿ ಸುಭಾಷ್ ಶಿಂಧೆ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪೊಲೀಸ್ ಪಾಟೀಲ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಣಿತ ಪರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್