


ಕೊಪ್ಪಳ, 18 ನವೆಂಬರ್ (ಹಿ.ಸ.) :
ಆ್ಯಂಕರ್ : ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕು ಕಾಯ್ದೆ-2009 ಅಡಿಯಲ್ಲಿ ಮಕ್ಕಳು ಶಿಕ್ಷಣದ ಹಕ್ಕಿನಿಂದ ವಂಚಿತರಾಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಹೇಳಿದರು.
ಅವರು ಮಂಗಳವಾರ ಕೊಪ್ಪಳ ಜಿಲ್ಲಾಡಳಿತ ಭವನದ ಕೃಷಿ ಇಲಾಖೆಯ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳೊಂದಿಗೆ “ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕು ಕಾಯ್ದೆ-2009ರ ಮೇಲ್ವಿಚಾರಣೆ ಮತ್ತು ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಕಡ್ಡಾಯ ಮತ್ತು ಉಚಿತ ಶಿಕ್ಷಣ ಹಕ್ಕು ಕಾಯ್ದೆ-2009 ಸೆಕ್ಷನ-31 ರನ್ವಯ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮೇಲ್ವಿಚಾರಣೆ ಮತ್ತು ಪ್ರಗತಿ ಪರಿಶೀಲನೆಯ ಅಧಿಕಾರವನ್ನು ಹೊಂದಿದೆ. ಭಾರತ ಸಂವಿಧಾನದ ಪರಿಚ್ಛೇಧ 21(ಎ)ರಡಿಯಲ್ಲಿ ದೇಶದ ಸಮಸ್ತ ಮಕ್ಕಳಿಗೂ ಶಿಕ್ಷಣವನ್ನು ಉಚಿತವಾಗಿ ದಯಪಾಲಿಸಿದೆ. ಮಕ್ಕಳು ಈ ಹಕ್ಕಿನಿಂದ ವಂಚಿತರಾಗದಂತೆ ಕ್ರಮವಹಿಸಬೇಕಾಗಿರುವುದು ನಮ್ಮೆಲ್ಲರ ಆಧ್ಯಕರ್ತವ್ಯವಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಕರೆತನ್ನಿ, ಅಶ್ಯವಿದ್ದಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಶಿಕ್ಷಣ ಕಾರ್ಯಪಡೆಯ ಸಹಾಯವನ್ನು ಪಡೆಯಿರಿ ಮತ್ತು ಈ ಸಮಿತಿಯನ್ನು ಸಕ್ರಿಯಗೊಳಿಸಿ ಎಂದರು.
ಮಕ್ಕಳು ಶಾಲೆಗೆ ಬರುವಂತೆ ವಾತಾವರಣ ನಿರ್ಮಾಣವು ನಮ್ಮೆಲ್ಲರ ಜವಾಬ್ದಾರಿಗಳಲ್ಲೊಂದು, ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಶಾಲೆಯಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಗಳನ್ನು ಕಲ್ಪಿಸುವುದು ಅತ್ಯವಶ್ಯಕವಾಗಿದೆ. ಇನ್ನೂ ಯಾವುದೇ ಶಾಲೆಗಳಲ್ಲಿ ಇಂತಹ ಮೂಲಭೂತ ಸೌಲಭ್ಯ ಇಲ್ಲದಿದ್ದಲ್ಲಿ, ಕೂಡಲೇ ಸೌಲಭ್ಯವವನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಶಾಲೆಯ ಆವರಣದಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನವನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ, ಕೋಟ್ಪಾ ಕಾಯ್ದೆಯನ್ವಯ ಶಾಲೆಯ ವ್ಯಾಪ್ತಿಯ 200 ಮೀಟರನೊಳಗೆ ಯಾರಾದರೂ ತಂಬಾಕು ಮತ್ತು ತಂಬಾಕು ಉತ್ಪನ್ನವನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಸ್ಥಳೀಯ ಸರಕಾರ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಅಂತಂಹ ಮಾರಾಟ ಕೇಂದ್ರಗಳನ್ನು ತಗೆದುಹಾಕಿಸಲು ಕ್ರಮ ಕೈಗೊಳ್ಳಿ, ಒಂದು ವೇಳೆ ಪ್ರಭಾವಿಗಳ ಒತ್ತಡ ಬಂದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮಾಹಿತಿಯನ್ನು ನೀಡಿ, ಈ ಬಗ್ಗೆ ಆಯೋಗದಿಂದ ಕ್ರಮವಹಿಸಲಾಗುವುದೆಂದು ಹೇಳಿದರು.
ಮಕ್ಕಳು ಶಾಲೆಯಿಂದ ಹೊರಗುಳಿದಲ್ಲಿ ಬಾಲ್ಯವಿವಾಹ, ಲೈಂಗಿಕ ಅಪರಾಧ, ಬಾಲ ಕಾರ್ಮಿಕತೆ, ಭಿಕ್ಷಾಟನೆ, ಮಾದಕ ವ್ಯಸನ,ಇನ್ನೀತರೆ ಅಪರಾಧಗಳಿಗೆ ಬಲಿಯಾಗಬಹುದಾಗಿರುತ್ತದೆ. ಮಕ್ಕಳು ಶಾಲೆಯಲ್ಲಿದ್ದರೆ, ಶಿಕ್ಷಣದೊಂದಿಗೆ ರಕ್ಷಣೆಯು ಲಭ್ಯವಾಗುತ್ತದೆ. ಆದ್ದರಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ. ಜಿಲ್ಲೆಯಲ್ಲಿ ಬಾಲ್ಯವಿವಾಹ, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012ರಡಿಯಲ್ಲಿ ದಾಖಲಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಆದ್ದರಿಂದ ಶಾಲೆಗಳಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳಿಗೆ ಸಂಬಂಧಿಸಿದ ಕಾನೂನುಗಳ ಕುರಿತು ಜಾಗೃತಿಯನ್ನು ಮೂಡಿಸಿ, ತನ್ಮೂಲಕ ಮಕ್ಕಳ ಮೇಲಾಗುವ ಹಲ್ಲೆ, ದೌರ್ಜನ್ಯ ಹಾಗೂ ಕಿರುಕುಳಗಳನ್ನು ತಡೆಗಟ್ಟಿ ಎಂದು ತಿಳಿಸಿದರು.
ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016ನ್ನು ಅನುಷ್ಠಾನಗೊಳಿಸುವುದು ಕಡ್ಡಾಯವಾಗಿರುತ್ತದೆ. ಪ್ರತಿ ಸಂಸ್ಥೆಯ ಮಕ್ಕಳ ರಕ್ಷಣಾ ನೀತಿಯನ್ನು ರಚಿಸಿ ಜಿಲ್ಲಾಧಿಕಾರಿಗಳಿಂದ ಅನುಮೋದನೆಯನ್ನು ಪಡೆದು ಜಾರಿಗೊಳಿಸುವಂತೆ ಕ್ರಮ ವಹಿಸಬೇಕು. ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ಸಹಾಯವಾಣಿ-1098ರ ಬಗ್ಗೆ ಶಾಶ್ವತಗೋಡೆಬರಹ, ಸಲಹಾ ಪೆಟ್ಟಿಗೆ, ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಿ ಸಕ್ರೀಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಶಾಲೆಗಳನ್ನು ಪೊಲೀಸ್ ಬೀಟ್ಗಳನ್ನಾಗಿ ಗುರುತಿಸಿ, ಪೊಲೀಸ್ ಗಸ್ತು ನಡೆಯುವಂತೆ ಪೊಲೀಸ್ ಇಲಾಖೆಗೆ ಆಯಾ ಸಂಸ್ಥೆಗಳ ಮುಖ್ಯಸ್ಥರಿಂದ ಕ್ರಮ ವಹಿಸಬೇಕು. ಪೊಲೀಸ್ ಇಲಾಖೆಯ “ತೆರೆದ ಮನೆ” ಕಾರ್ಯಕ್ರಮಕ್ಕೆ ಮಕ್ಕಳನ್ನು ಪೊಲೀಸ್ ಠಾಣೆಗಳಿಗೆ ಕರೆದುಕೊಂಡು ಹೋಗಿ ಅಥವಾ ಪೊಲೀಸ್ ಅಧಿಕಾರಿಗಳನ್ನು ಆಮಂತ್ರಿಸಿ ಕಾರ್ಯಕ್ರಮವನ್ನು ಆಯೋಜಿಸಿ ಎಂದರು.
ಅನುಮತಿಯನ್ನು ಪಡೆಯದೇಯೇ ವಸತಿ ಶಾಲೆಗಳನ್ನು ನಡೆಸುತ್ತಿರುವುದು, ಅಕ್ರಮವಾಗಿ ವಸತಿ ಶಾಲೆಗಳ ಪರೀಕ್ಷೆಗೆ ತರಬೇತಿ (ಕೋಚಿಂಗ) ಕೇಂದ್ರಗಳನ್ನು ನಡೆಸುತ್ತಿರುವುದು ಕಂಡುಬರುತ್ತಿದೆ. ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಂಸ್ಥೆಗಳು ವಿಫಲವಾಗುತ್ತಿವೆ. ಆದ್ದರಿಂದ ಇಂತಹ ಸಂಸ್ಥೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಂಡು ವರದಿಯನ್ನು ರಾಜ್ಯ ಮಕ್ಕಳ ರಕ್ಷಣಾ ಆಯೋಗಕ್ಕೆ ಸಲ್ಲಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.
ದತ್ತು ಪ್ರತಿಜ್ಞಾ ವಿಧಿ ಸ್ವೀಕಾರ: ದತ್ತು ಮಾಸಾರಣೆ ಮತ್ತು ಮಕ್ಕಳ ಮಾಸ ಅಂಗವಾಗಿ ದತ್ತು ಪ್ರತಿಜ್ಞಾ ವಿಧಿಯನ್ನು ಇದೇ ಸಂದರ್ಭದಲ್ಲಿ ಸ್ವೀಕರಿಸಲಾಯಿತು.
ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮೂಹ ಸಂಪನ್ಮೂಲ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್