
ಕೊಪ್ಪಳ, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರ ಗ್ರಾಮದ ಅಂಜನಾದ್ರಿ ಬೆಟ್ಟದ ಮೇಲಿರುವ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 2 ಮತ್ತು 3 ರಂದು ಜರುಗಲಿರುವ ಹನುಮಾಲಾ ಕಾರ್ಯಕ್ರಮಕ್ಕೆ ಸಮಿತಿಗಳನ್ನು ರಚಿಸುವ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
ಹನುಮಾಲಾ ವಿಸರ್ಜನೆ ಕಾರ್ಯಕ್ರಮದ ನಿಮಿತ್ತ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಡಿ. 2 ಮತ್ತು 3 ರಂದು ದೇಶದ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಬಂದು ವಾಸ್ತವ್ಯ ಮಾಡಿ ನಂತರದಲ್ಲಿ ಕಾಲ್ನಡಿಗೆ ಮೂಲಕ ದೇವರ ದರ್ಶನ ಪಡೆಯಲಿದ್ದಾರೆ. ಅಲ್ಲದೇ ಗಂಗಾವತಿ ನಗರದಿಂದ ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ಹಾಗೂ ಡಿ. 3 ರಂದು ಮಾಲೆ ವಿಸರ್ಜನೆ ಮಾಡುವ ಕಾರ್ಯಕ್ರಮ ಜರುಗಲಿದೆ. ಈ ಪ್ರಯುಕ್ತ ಹನುಮಾಲಾ ವಿಸರ್ಜನೆ ಕಾರ್ಯಕ್ರಮಕ್ಕಾಗಿ ದೇಶದ ಭಾಗಗಳಿಂದ ಲಕ್ಷಾಂತರ ಸಾರ್ವಜನಿಕರು, ಭಕ್ತಾಧಿಗಳು, ಹನುಮ ಮಾಲಾಧಾರಿಗಳು ಆಗಮಿಸಲಿದ್ದು, ಕಾರ್ಯಕ್ರಮ ದಿನಗಳಂದು ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ಆಹಾರ ವ್ಯವಸ್ಥೆ, ಜನ ಸಂದಣಿ ನಿರ್ವಹಣೆ ಹಾಗೂ ಇನ್ನಿತರ ಕಾರ್ಯಗಳಿಗಾಗಿ ಸಮಿತಿಗಳನ್ನು ರಚನೆ ಮಾಡಿ ಆದೇಶಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ ಉಪವಿಭಾಗಾಧಿಕಾರಿಗಳು ಹಾಗೂ ಚಿಕ್ಕರಾಂಪೂರದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೂಲಭೂತ ಸೌಕರ್ಯ ಸಮಿತಿಯನ್ನು ರಚಿಸಿದ್ದು, ತೋಟಗಾರಿಕೆ ಇಲಾಖೆ ಉಪನಿರ್ದೇಶಕರು, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಗಳು, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಹಶೀಲ್ದಾರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಈ ಸಮಿತಿಯು ಭಕ್ತಾದಿಗಳ ಊಟದ ವ್ಯವಸ್ಥೆಯ ಸಲುವಾಗಿ ಹಾಗೂ ಅಗತ್ಯವಿರುವ ಸ್ಥಳಗಳಲ್ಲಿ ಪೆಂಡಾಲ್, ದೇವಸ್ಥಾನದ ಪಾದಗಟ್ಟಿ ಹತ್ತಿರ ಎಲ್ಇಡಿ ಪರದೆ, ದೇವಸ್ಥಾನದ ಮೆಟ್ಟಿಲುಗಳ ಮೇಲೆ ಧ್ವನಿ ವರ್ಧಕಗಳ ವ್ಯವಸ್ಥೆನ್ನು ಮಾಡಬೇಕು. ದೇವಸ್ಥಾನದ ಹತ್ತಿರ, ವಾಹನ ನಿಲುಗಡೆ ಸ್ಥಳ, ಬಸ್ ನಿಲ್ದಾನ ಹಾಗೂ ಇನ್ನಿತರ ಅಗತ್ಯವಿರುವ ಸ್ಥಳಗಳಲ್ಲಿ ಸಾರ್ವಜನಿಕ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸುವುದು, ಪೆಂಡಾಲ್ ಹಾಕಿಸುವುದು ಹಾಗೂ ಸಾರ್ವಜನಿಕ ಪ್ರಕಟಣೆ ಸಲುವಾಗಿ ಧ್ವನಿವರ್ಧಕಗಳ ವ್ಯವಸ್ಥೆ, ತುಂಗಭದ್ರಾ ನದಿ ಪಾತ್ರದಲ್ಲಿ ಹನುಮ ಮಾಲಾಧಾರಿಗಳಿಗೆ ಸ್ನಾನಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಆಹಾರ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ದೇವಸ್ಥಾನದ ಹಿಂಭಾಗದಲ್ಲಿರುವ ವೇದ ಪಾಠಶಾಲಾ ಹತ್ತಿರ ಆಹಾರ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ದೇವಸ್ಥಾನದ ಹತ್ತಿರ ವಾಹನ ನಿಲುಗಡೆ ಸ್ಥಳ ಹಾಗೂ ಅಗತ್ಯವಿರುವೆಡೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ದೇವರ ದರ್ಶನಕ್ಕೆ ಸರದಿಯಲ್ಲಿ ಹೋಗುವ ಭಕ್ತರಿಗೆ ಅವಶ್ಯಕತೆಗನುಗುಣವಾಗಿ ಅಗತ್ಯವಿರುವ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಭಕ್ತಾದಿಗಳಿಗೆ ಹಾಗೂ ಕರ್ತವ್ಯ ನಿರತ ಸಿಬ್ಬಂದಿ, ಸ್ವಯಂ ಸೇವಕರಿಗೆ ಅವಶ್ಯಕತೆಗನುಗುಣವಾಗಿ ಆಹಾರದ ಪ್ಯಾಕೆಟ್ಗಳನ್ನು ತಯಾರಿಸಿ ಸರಬರಾಜು ಮಾಡಬೇಕು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರ ಅಧ್ಯಕ್ಷತೆಯಲ್ಲಿ ರಸ್ತೆ ನಿರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಹೊಸಪೇಟೆ, ಗಂಗಾವತಿ ಹಾಗೂ ಕೊಪ್ಪಳ ಕಡೆಯಿಂದ ಅಂಜನಾದ್ರಿ ದೇವಸ್ಥಾನಕ್ಕೆ ಬರುವ ರಸ್ತೆಗಳಲ್ಲಿ ಇರುವ ತೆಗು, ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಬೇಕು. ದೇವಸ್ಥಾನದ ಸುತ್ತಮುತ್ತಲೂ ಹಾಗೂ ವಾಹನ ನಿಲುಗಡೆ ಸ್ಥಳ ಮತ್ತು ಅಗತ್ಯವಿರುವ ಸ್ಥಳಗಳಲ್ಲಿ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ರ್ವಹಣಾ ಸಮಿತಿಯನ್ನು ರಚಿಸಲಾಗಿದ್ದು, ಆರೋಗ್ಯ ಸಮಿತಿಯು ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನನೆಚ್ಚರಿಕಾ ಕ್ರಮ ವಹಿಸುವ ನಿಟ್ಟಿನಲ್ಲಿ ಕ್ರಿಮಿನಾಶಕ ಸಿಂಪಡಣೆ, ಅಗತ್ಯ ಔಷಧಿಗಳ ವ್ಯವಸ್ಥೆಯೊಂದಿಗೆ ದೇವಾಲಯದ ಆವರಣದಲ್ಲಿ ಹಗೂ ಅಗತ್ಯವಿರುವ ಸ್ಥಳಗಳಲ್ಲಿ ತಾತ್ಕಾಲಿಕ ತುರ್ತು ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಬೇಕು. ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳಿಗೆ ಅಗತ್ಯ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಅಗತ್ಯವಿರುವ ಎಲ್ಲ ತರಹದ ಔಷಧಿಗಳ ಸರಬರಾಜು ಮಾಡುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತುರ್ತು ಚಿಕಿತ್ಸೆಯ ಸಲುವಾಗಿ ಅಂಬ್ಯುಲೆನ್ಸ್ ವ್ಯವಸ್ಥೆಯನ್ನು ಮಾಡಬೇಕು. ದೇವಸ್ಥಾನದ ವತಿಯಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ತಯಾರಿಸಲಾಗಿರುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಿ ಪ್ರಮಾಣೀಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಸಮಿತಿಯನ್ನು ರಚಿಸಲಾಗಿದ್ದು, ಸ್ಚಚ್ಛತಾ ಸಮಿತಿಯು, ಗಂಗಾವತಿ ನಗರದಿಂದ ಹನುಮಮಾಲಾಧಾರಿಗಳ ಶೋಭಾ ಯಾತ್ರೆ ಆರಂಭವಾಗುವ ಕಾರಣ ನಗರದ ಎಲ್ಲ ಕಡೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಹನುಮಮಾಲಾಧಾರಿಗಳು ತಂಗುವ ಸ್ಥಳದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು, ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್, ಕುಡಿಯುವ, ಸ್ನಾನ, ಶೌಚಾಲಯ ಹಾಗೂ ಇನ್ನಿತರ ಬಳಕೆಗಾಗಿ ನೀರಿನ ವ್ಯವಸ್ಥೆ ಮಾಡಬೇಕು. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹನುಮಮಾಲಾಧಾರಿಗಳ ಕಾರ್ಯಕ್ರಮ ಪ್ರಾರಂಭವಾಗುವ ಪೂರ್ವದಲ್ಲಿ ಮತ್ತು ಕಾರ್ಯಕ್ರಮದ ನಂತರ ಗ್ರಾಮದ ವ್ಯಾಪ್ತಿಗೆ ಬರುವ ಮತ್ತು ದೇವಸ್ಥಾನದ ವ್ಯಾಪ್ತಿಗೆ ಬರುವ ಎಲ್ಲಾ ಚರಂಡಿಗಳನ್ನು ಗ್ರಾಮ ಪಂಚಾಯತಿ ಮತ್ತು ದೇವಸ್ಥಾನದ ವತಿಯಿಂದ ಸ್ವಚ್ಛಗೊಳಿಸಬೇಕು. ದೇವಸ್ಥಾನದ ಕೆಲಗೆ ಮೊಬೈಲ್ ಶೌಚಾಲಯಗಳನ್ನು ಮಾಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸ್ನಾನಗೃಹ ಶೌಚಾಲಯ ವ್ಯವಸ್ಥ ಮಾಡಬೇಕು. ಹನುಮಮಾಲಾಧಾರಿಗಳು ತಂಗುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಶೌಚಾಲಯ ಹಾಗೂ ಸ್ನಾನ ಗೃಹಗಳು ಇರುವ ಕಡೆಗೆ ವಿದ್ಯಾರ್ಥಿ ನಿಲಯಗಳು, ಇತರೆ ಸರ್ಕಾರಿ, ಖಾಸಗಿ ಕಟ್ಟಡಗಳನ್ನು ಗುರುತಿಸಿ, ಯಾವುದೇ ತರಹದ ಅನಾನುಕೂಲವಾಗದಂತೆ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಕೊಪ್ಪಳ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಸಾದ ವಿತರಣಾ ಸಮಿತಿಯನ್ನು ರಚಿಸಲಾಗಿದ್ದು, ಪ್ರಸಾದ ವಿತರಣಾ ಸಮಿತಿಯು ದೇವಸ್ಥಾನದ ಮುಂಭಾಗ ಹಾಗೂ ವೇದ ಪಾಠಶಾಲೆ ಹತ್ತಿರ ಲಡ್ಡು ವಿತರಣೆ ಮಾಡುವುದನ್ನು ಮೇಲ್ವಿಚಾರಣೆ ಮಾಡಬೇಕು. ಲಡ್ಡು ಪಡೆಯುವ ಸಲುವಾಗಿ ಸಂಗ್ರಹವಾಗುವ ಹಣಕಾಸಿನ ವ್ಯವಹಾರದ ಬಗ್ಗೆ ಮೇಲ್ವಿಚಾರಣೆ ಮಾಡಬೇಕು ಎಂದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರಿಗೆ ಸಮಿತಿಯನ್ನು ರಚಿಸಲಾಗಿದ್ದು, ಸಾರಿಗೆ ಸಮಿತಿಯು ಕೊಪ್ಪಳ, ಗಂಗಾವತಿ, ಹೊಸಪೇಟೆ ಹಾಗೂ ಇತರೆ ಅಗತ್ಯವಿರುವ ಸಾರಿಗೆ ಘಟಕಗಳಿಂದ ಅಂಜನಾದ್ರಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸೌಕರ್ಯವನ್ನು ಕಲ್ಪಿಸಬೇಕು. ವಾಹನ ನಿಲುಗಡೆ ಸ್ಥಳದಿಂದ ಅಂಜನಾದ್ರಿ ಬೆಟ್ಟಕ್ಕೆ ಭಕ್ತಾದಿಗಳ ಸಂಚಾರಕ್ಕೆ ಮಿನಿ ಬಸ್ಗಳ ವ್ಯವಸ್ಥೆಯನ್ನು ಮಾಡಬೇಕು ಎಂದರು.
ಜೆಸ್ಕಾಂ ಗಂಗಾವತಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಅಧ್ಯಕ್ಷತೆಯಲ್ಲಿ ವಿದ್ಯುತ್ ಸಮಿತಿಯನ್ನು ರಚಿಸಲಾಗಿದ್ದು, ವಿದ್ಯುತ್ ಸಮಿತಿಯು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮದ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲೂ ಯಾವುದೇ ತರಹದ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಹಾಗೂ ಯಾವುದೇ ತರಹದ ವಿದ್ಯುತ್ ಅವಘಡಗಳು ಉಂಟಾಗದಂತೆ ಕ್ರಮ ವಹಿಸಬೇಕು. 24/7 ಮಾದರಿಯಲ್ಲಿ ವಿದ್ಯುತ್ ಸೌಕರ್ಯದ ನಿರ್ವಹಣೆಗೆ ಅಗತ್ಯವಿರುವ ಎಲ್ಲ ಸಾಮಗ್ರಿಗಳುಳ್ಳ ಒಂದು ಮೊಬೈಲ್ ವಾಹನದ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಗಂಗಾವತಿ ಪೊಲೀಸ್ ಉಪ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಭದ್ರತಾ ಸಮಿತಿಯನ್ನು ರಚಿಸಲಾಗಿದ್ದು, ಭದ್ರತಾ ಸಮಿತಿಯು ನಿಗದಿಪಡಿಸಿದ ದಿನದಂದು ನೂಕುನುಗ್ಗಲು, ಗಲಾಟೆ ಹಾಗೂ ಘರ್ಷಣೆ ಆಗದಂತೆ ಕ್ರಮ ವಹಿಸಬೇಕು. ಅಗತ್ಯವಿರುವ ಸ್ಥಳಗಳಲ್ಲಿ ಭದ್ರತೆ ಹಿತದೃಷ್ಟಿಯಿಂದ ಸಿ.ಸಿ. ಕ್ಯಾಮೆರಾ ಅಳವಡಿಸಬೇಕು. ಜನ ಸಂದಣಿ ನಿರ್ವಹಣೆಯ ಸಲುವಾಗಿ ಸಮರ್ಪಕವಾಗಿ ಪೊಲೀಸ್ ಹಾಗೂ ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಹಾಗೂ ಹನುಮಮಾಲಾಧಾರಿಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ಹೇಳಿದರು.
ಜಿಲ್ಲಾ ವಾರ್ತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಚಾರ ಮತ್ತು ಮಾಧ್ಯಮ ಸಮಿತಿಯನ್ನು ರಚಿಸಲಾಗಿದ್ದು, ಪ್ರಚಾರ ಮತ್ತು ಮಾಧ್ಯಮ ಸಮಿತಿಯು ಹನುಮಮಾಲಾ ಕಾರ್ಯಕ್ರಮದ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಮಾಡಬೇಕು ಎಂದರು.
ಗಂಗಾವತಿ ತಹಶೀಲ್ದಾರ ಮತ್ತು ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಿಷ್ಟಾಚಾರ ಸಮಿತಿಯನ್ನು ರಚಿಸಲಾಗಿದ್ದು, ಶಿಷ್ಟಾಚಾರ ಸಮಿತಿಯು ಹನುಮಮಾಲಾ ಕಾರ್ಯಕ್ರಮಕ್ಕೆ ಆಗಮಿಸುವ ಮಂತ್ರಿಗಳು, ವಿ.ಐ.ಪಿಗಳು ಹಾಗೂ ಇತರೆ ಜನ ಪ್ರತಿನಿಧಿಗಳಿಗೆ ಸೂಕ್ತ ಶಿಷ್ಟಾಚಾರ ವ್ಯವಸ್ಥೆಯನ್ನು ಮಾಡಬೇಕು ಎಂದು ತಿಳಿಸಿದರು.
ಕೊಪ್ಪಳ ಅಬಕಾರಿ ಉಪ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಅಬಕಾರಿ ಸಮಿತಿಯನ್ನು ರಚಿಸಲಾಗಿದ್ದು, ಅಬಕಾರಿ ಸಮಿತಿಯು ಡಿಸೆಂಬರ್ 1ರ ಸಂಜೆ 4 ಗಂಟೆಯಿಂದ ಡಿ.3 ರ ಮಧ್ಯರಾತ್ರಿಯವರೆಗೆ ಆನೆಗುಂದಿ ಗ್ರಾಮ ವ್ಯಾಪ್ತಿಯಿಂದ ಸುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಪಾನ ನಿಷೇಧಿಸಬೇಕು. ಮದ್ಯಪಾನ ನಿಷೇಧಿತ ಅವಧಿಯಲ್ಲಿ ಯಾವುದೇ ಅನಧಿಕೃತ ಮದ್ಯ ಮಾರಾಟವಾಗದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಕೊಪ್ಪಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅರಣ್ಯ ಸಮಿತಿಯನ್ನು ರಚಿಸಲಾಗಿದ್ದು, ಅರಣ್ಯ ಸಮಿತಿಯು ಹನುಮಮಾಲಾ ಕಾರ್ಯಕ್ರಮದ ಸಂದರ್ಭದಲ್ಲಿ ಅಂಜನಾದ್ರಿ ಬೆಟ್ಟದಲ್ಲಿ ಭಕ್ತಾಧಿಗಳ ಮೇಲೆ ಯಾವುದೇ ತರಹದ ಪ್ರಾಣಿ ದಾಳಿಯಾಗದಂತೆ ನಿಗಾವಹಿಸಲು ಸೂಕ್ತ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.
ಕೊಪ್ಪಳ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಹಾಯವಾಣಿ ಕೇಂದ್ರ ಸಮಿತಿಯನ್ನು ರಚಿಸಲಾಗಿದ್ದು, ಸಹಾಯವಾಣಿ ಕೇಂದ್ರ ಸಮಿತಿಯು ಕೊಪ್ಪಳ ಜಿಲ್ಲಾ ಕೇಂದ್ರ ಸ್ಥಾನ ಹಾಗೂ ಗಂಗಾವತಿ ತಾಲ್ಲೂಕು ಕೇಂದ್ರ ಮತ್ತು ಅಂಜನಾದ್ರಿ ಬೆಟ್ಟದಲ್ಲಿ ನಿರ್ಮಿಸಲಾಗುವ ಸಹಾಯವಾಣಿ ಕೇಂದ್ರಗಳ ಮೇಲುಸ್ತುವಾರಿಯನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಎಲ್ಲಾ ಸಮಿತಿ ಅಧ್ಯಕ್ಷರು ಸಮರ್ಪಕ ನಿರ್ವಹಣೆಗಾಗಿ ಅಗತ್ಯವೆನಿಸಿದಲ್ಲಿ ತಮ್ಮ ಅಧಿನ ಕಚೇರಿ ಸಿಬ್ಬಂದಿಯನು ಕರ್ತವ್ಯಕ್ಕಾಗಿ ನಿಯೋಜನೆ ಮಾಡಿಕೊಳ್ಳಬಹುದು. ಹನುಮಮಾಲಾ ವಿಸರ್ಜನೆ ಕಾರ್ಯಕ್ರಮದ ನಿರ್ವಹಣೆಗಾಗಿ ರಚಿಸಲಾದ ಎಲ್ಲಾ ಸಮಿತಿಗಳ ಅಧಿಕಾರಿಗಳು, ಕೊಪ್ಪಳ ಉಪವಿಭಾಗಾಧಿಕಾರಿಗಳು ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿಗಳು, ಗಂಗಾವತಿ ತಹಶೀಲ್ದಾರರು ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಾರ್ವಜನಿಕರಿಗೆ, ಭಕ್ತಾಧಿಗಳಿಗೆ ಯಾವುದೇ ತರಹದ ಅನನುಕೂಲವಾಗದಂತೆ ಕರ್ತವ್ಯ ನಿರ್ವಹಿಸಬೇಕು. ನಿಯೋಜಿತ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಯಾವುದೇ ತರಹದ ಲೋಪವೆಸಗಿದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್