

ಕೊಪ್ಪಳ, 25 ನವೆಂಬರ್ (ಹಿ.ಸ.) :
ಆ್ಯಂಕರ್ : ಮಕ್ಕಳು ಒಳ್ಳೆಯ ಪ್ರಜೆಗಳಾಗಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಮಕ್ಕಳೇ ದೇಶದ ಮುಂಭವಿಷ್ಯ ಎಂದು ಡಾ.ಬಿ. ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಚಾರ್ಯ ಕೋಟ್ರಪ್ಪ ಹೆಚ್. ತಳವಾರ ಅವರು ಹೇಳಿದರು.
ಅವರು ಮೇಣದಾಳ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಲಾದ ಮಕ್ಕಳ ಮಾಸ ಮತ್ತು ದತ್ತು ಮಾಸಾಚರಣೆಯ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ಅಸಂಸ್ಥಿಕ) ಪ್ರಶಾಂತ್ ರೆಡ್ಡಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಕಾನೂನು ಬದ್ಧವಾಗಿ ಮಕ್ಕಳನ್ನು ದತ್ತು ಪಡೆಯಲು ಸರಕಾರವು ಹಲವಾರು ಕಾನೂನುಗಳ ಅವಕಾಶಗಳನ್ನು ಕಲ್ಪಿಸಿದೆ. ದತ್ತು ಬೇಕಾದ ವ್ಯಕ್ತಿ ಅಥವಾ ಪೋಷಕರು ಮಿಷನ್ ವಾತ್ಸಲ್ಯ ತಂತ್ರಾ0ಶದಲ್ಲಿ ಅರ್ಜಿಯನ್ನು ಸಲ್ಲಿಸುವ ಮೂಲಕ ಮಕ್ಕಳನ್ನು ದತ್ತು ಪಡೆಯಬಹುದಾಗಿದೆ. ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ತಿದ್ದುಪಡಿ-2021ರ ಕಲಂ 81ರ ಅನ್ವಯ ಮಕ್ಕಳ ಮಾರಾಟ ಮಾಡುವುದು ಅಥವಾ ಕೊಳ್ಳುವುದು ಶಿಕ್ಷಾರ್ಹ ಅಪರಾಧ ಈ ಕೃತ್ಯಕ್ಕೆ 5 ರ್ಷಗಳವರೆಗೆ ಜೈಲು ಮತ್ತು 1 ಲಕ್ಷ ರೂ. ದಂಡ ತಪ್ಪಿದಲ್ಲ. ಈ ರೀತಿಯ ಕೃತ್ಯದಲ್ಲಿ ಶಾಮೀಲಾದ ಆಸ್ಪತ್ರೆ, ನರ್ಸಿಂಗ್ ಹೋಂ, ಹೆರಿಗೆ ಆಸ್ಪತ್ರೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದು ವಿವರಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜಕಾರ್ಯಕರ್ತೆ ಪ್ರತಿಭಾ ಕಾಶಿಮಠ ಅವರು ಮಾತನಾಡಿ, ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆ -2006 ರನ್ನು ಜಾರಿಗೆ ತಂದಿರುತ್ತದೆ. ರಾಜ್ಯದಲ್ಲಿ ಬಾಲ್ಯವಿವಾಹ ಪ್ರಮಾಣಗಳು ಅಧಿಕವಾಗಿರುವುದನ್ನು ಗಮನಿಸಿ ಕರ್ನಾಟಕ ಸರ್ಕಾರವು ಮತ್ತಷ್ಟು ಪರಿಣಾಮಕಾರಿಯಾಗಿ ಈ ಕಾಯ್ದೆಯನ್ನು ಅನುಷ್ಠಾನಗೊಳಿಸಲು-2016ರಲ್ಲಿ ತಿದ್ದುಪಡಿಯನ್ನು ತಂದಿದ್ದು, ಅದರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆಯನ್ನು ಮಾಡಿದವರಿಗೆ ಭಾಗವಹಿಸಿದವರಿಗೆ ಮತ್ತು ಪ್ರೋತ್ಸಾಹಿಸಿದವರಿಗೆ ಕನಿಷ್ಠ ಒಂದು ವರ್ಷದಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಬಹುದಾಗಿದೆ.
ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಗರ್ಭಿಣಿಯರಾಗಿರುವ ಪ್ರಕರಣಗಳು ವರದಿಯಾಗಿವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ತಿದ್ದುಪಡಿ 2019 ರನ್ವಯ ಮಕ್ಕಳ ಮೇಲಿನ ಲೈಂಗಿಕ ಹಲ್ಲೆ, ದೌರ್ಜನ್ಯಗಳಿಗೆ ಕನಿಷ್ಠ 20 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಈ ರೀತಿಯಲ್ಲಿ ಶಿಕ್ಷೆ ವಿಧಿಸಿದ ಪ್ರಕರಣಗಳು ಸಹ ಜಿಲ್ಲೆಯಲ್ಲಿ ವರದಿಯಾಗಿವೆ. ಯುವಕರು ಈ ಕಾಯ್ದೆಯ ಕುರಿತು ಹೆಚ್ಚಿನ ಅರಿವು ಪಡೆದು ಸುರಕ್ಷತಾ ಜೀವನವನ್ನು ನಡೆಸುವಂತೆ ಹಾಗೂ ಬಾಲಕಿಯರು ಯಾವುದೇ ಆಸೆ ಆಮೀಷಗಳಿಗೆ ಒಳಗಾಗದೇ ಸುರಕ್ಷಿತವಾಗಿರುವಂತೆ ಮತ್ತು ಅಪ್ರಾಪ್ತ ವಯಸ್ಸಿನಲ್ಲಿ ಮದುವೆಯನ್ನು ಆಗಬೇಡಿ ಎಂದು ತಿಳಿಸಿದರು.
ಮಕ್ಕಳ ಸಹಾಯವಾಣಿ-1098 ಸಂಯೋಜಕ ಶರಣಪ್ಪ ಸಿಂಗನಾಳ ಅವರು ಮಕ್ಕಳ ಸಹಾಯವಾಣಿ-1098ರ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ದತ್ತು ಮಾಸಾಚರಣೆಯ ಹಿನ್ನಲೆ ಕುರಿತು ದತ್ತು ಸಂಕಲ್ಪ ಸಂದೇಶವನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಕೊಪ್ಪಳರವರು ಬೋಧಿಸಿದರು.
ಈ ಸಂದರ್ಭದಲ್ಲಿ ತಿಪ್ಪನಾಳ ಶ್ರೀ ಪಾರ್ವತಿಮ್ಮ ಶೇಖರಗೌಡ ಎಜುಕೇಶನ್ ಆಂಡ್ ರೂರಲ್ ಡೆವಲಪ್ಟೆಂಟ್ ಟ್ರಸ್ನ ಅಧ್ಯಕ್ಷ ಮಲ್ಲಿಕಾರ್ಜುನ, ಮಕ್ಕಳ ಸಹಾಯವಾಣಿ-1098ರ ಸಿಬ್ಬಂದಿ ರಾಘವೇಂದ್ರ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯ ಎಲ್ಲಾ ಮಕ್ಕಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್