



ಬಳ್ಳಾರಿ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ನಮ್ಮ ದೇಹವೇ ದೇಗುಲವಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರ ಸಂಸದ ಈ.ತುಕಾರಾಮ್ ಅವರು ಹೇಳಿದ್ದಾರೆ.
ಶುಕ್ರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಎನ್.ಎಂ.ಡಿ.ಸಿ ಯ ಸಿ.ಎಸ್.ಆರ್ ಅನುದಾನದಲ್ಲಿ 12 ಕೋಟಿ ರೂ. ವೆಚ್ಚದ ಎಂ.ಆರ್.ಐ ಸ್ಕ್ಯಾನಿಂಗ್ ಸೆಂಟರ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಪ್ರಸ್ತುತದಲ್ಲಿ ನಮ್ಮ ಜೀವನ ಶೈಲಿ ಬದಲಿಸಕೊಳ್ಳಬೇಕಿದೆ. ಪೌಷ್ಠಿಕ ಆಹಾರ ಸೇವನೆಯ ಜೊತೆಗೆ ನಿಯಮಿತ ವ್ಯಾಯಾಮ ಮಾಡುತ್ತಿರಬೇಕು. ಮನಸ್ಸನ್ನು ಆರೋಗ್ಯವಾಗಿಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
2014 ರಲ್ಲಿ ಪ್ರಧಾನಮಂತ್ರಿಯಾಗಿದ್ದ ಡಾ.ಮನಮೋಹನ್ ಸಿಂಗ್ ಅವರ ಕಾಲಾವಧಿಯಲ್ಲಿ ಯಾವ ಉದ್ಯಮಗಳು ಲಾಭ ಪಡೆಯುತ್ತಿದ್ದವೋ, ಆ ಉದ್ಯಮಗಳಿಂದ ಶೇ.02 ರಷ್ಟು ಸಿಎಸ್ಆರ್ ಅನುದಾನವನ್ನು ಶೈಕ್ಷಣಿಕ ಅಭಿವೃದ್ಧಿ, ಆರೋಗ್ಯ, ಕೌಶಲಾಭಿವೃದ್ಧಿಗೆ ಬಳಕೆ ಮಾಡುವಂತೆ ಕಾಯ್ದೆ ಜಾರಿಗೆ ತಂದರು. ಅದರಡಿ ಈಗಾಗಲೇ ಸಾಕಷ್ಟು ಅನುದಾನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಎಂಆರ್ಐ ಸ್ಕ್ಯಾನಿಂಗ್ ಯಂತ್ರ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲಿದ್ದು, ಬಿಪಿಎಲ್ ಕಾರ್ಡ್ ದಾರರಿಗೆ 1150 ರೂ. ಗಳಲ್ಲಿ ಸ್ಕ್ಯಾನಿಂಗ್ ಸೇವೆ ದೊರೆಯಲಿದೆ.
ಈ ಕುರಿತು ಎಲ್ಲಾ ತಾಲ್ಲೂಕು ಮಟ್ಟದಲ್ಲಿಯು ಸಹ ಹೆಚ್ಚಿನ ಪ್ರಚಾರ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಅವರು ಮಾತನಾಡಿ, ಜಿಲ್ಲಾಡಳಿತದ ಸಹಕಾರದೊಂದಿಗೆ ಸಂಸದರ ಇಚ್ಛಾಶಕ್ತಿಯಿಂದ ಅತ್ಯಾಧುನಿಕ ತಂತ್ರಜ್ಞಾನದ ಎಂಆರ್ಐ ಸ್ಕ್ಯಾನಿಂಗ್ ಯಂತ್ರವನ್ನು ಸಿಎಸ್ಆರ್ ಅನುದಾನದಡಿ ಎನ್ಎಂಡಿಸಿ ಯಿಂದ ನೀಡಲಾಗಿದೆ. ಮಾನವದ ದೇಹದೊಳಗೆ ಮೂಳೆ ಮತ್ತು ನರಗಳಿಗೆ ಸಂಬಂಧಿಸಿದಂತೆ ಸ್ಕ್ಯಾನ್ ಮಾಡಲು ಇದು ಅನುಕೂಲವಾಗಲಿದೆ. ಇದು ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳಲಿದ್ದು, ಪ್ರತಿದಿನ ನಿಯಮಿತವಾಗಿ ಸ್ಕ್ಯಾನಿಂಗ್ ಮಾಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಗುಣಮಟ್ಟದ ಸ್ಕ್ಯಾನಿಂಗ್ ಕವರ್ ಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.
ಈ ವೇಳೆ ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಎನ್ಎಂಡಿಸಿ ಯ ಜನರಲ್ ಮ್ಯಾನೇಜರ್ ಚಟರ್ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು, ಜಿಲ್ಲಾ ಆಸ್ಪತ್ರೆಯ ಅಧಿಕಾರಿ-ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.
ನಂತರ ನಗರದ ರಾಘವೇಂದ್ರ ಕಾಲೋನಿಯಲ್ಲಿ 2024-25ನೇ ಸಾಲಿನ ಸಂಸದರ 25 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಿರುವ ಬಳ್ಳಾರಿಯ ಆದರ್ಶ ಪಾರ್ಕ್ ನಲ್ಲಿ ಪೇವರ್ಸ್ ಅಳವಡಿಕೆ ಮತ್ತು ಪಿರಾಮಿಡ್ ಯೋಗಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್