

ಬಳ್ಳಾರಿ, 28 ನವೆಂಬರ್ (ಹಿ.ಸ.) :
ಆ್ಯಂಕರ್ : ಬಡಜನರ ಸ್ವಾವಲಂಬನೆ ಬದುಕಿಗೆ ಬ್ಯಾಂಕ್ಗಳು ಸಹಕಾರಿಯಾಗಿ ನಿಲ್ಲಬೇಕು ಎಂದು ಬಳ್ಳಾರಿ ಲೋಕ ಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಹೇಳಿದ್ದಾರೆ.
ಶುಕ್ರವಾರ ನಗರದ ಜಿಪಂ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್ನ ತ್ರೈಮಾಸಿಕ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್ನವರ ಸರಿಯಾದ ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯವಾಗಿದೆ. ಬ್ಯಾಂಕ್ ಗಳ ವಿಶ್ವಾಸಾರ್ಹತೆ ಹೆಚ್ಚಾಗುವ ರೀತಿಯಲ್ಲಿ ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ನಡೆದುಕೊಳ್ಳಬೇಕು ಎಂದರು.
ರೈತರಿಗೆ ಸಾಲ ನೀಡುವಾಗ ವಿನಾ ಕಾರಣ ವಿಳಂಬ ಮಾಡಬಾರದು ಹಾಗೂ ಅವರು ಸಹಾಯಧನಕ್ಕಾಗಿ ಸಲ್ಲಿಸುವ ಅರ್ಜಿಗಳನ್ನು ಸಹ ಯಾವುದೇ ಕಾರಣವಿಲ್ಲದೇ ತಿರಸ್ಕಾರ ಮಾಡುತ್ತಿದ್ದೀರಿ ಇದು ಸರಿಯಾದ ನಡೆ ಅಲ್ಲ ಎಂದರು.
ಜಿಲ್ಲೆಯ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ಅನುದಾನ ನೀಡಬೇಕು. ಜಿಲ್ಲೆಯಲ್ಲಿ ಡಿಸಿ, ಜಿಪಂ ಸಿಇಒ ಅವರ ಆದೇಶದ ಮೇರೆಗೆ ಅನುದಾನ ಬಳಕೆಯಾಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ಎಜಿಎಂ ಅರುಣ್ ಕುಮಾರ್, ಕೆನರಾ ಬ್ಯಾಂಕ್ ನ ಪ್ರಾದೇಶಿಕ ವ್ಯವಸ್ಥಾಪಕ ಅರುಣ್ ಕುಮಾರ್ ಎ.ಜಿ., ಲೀಡ್ ಬ್ಯಾಂಕ್ ಮ್ಯಾನೇಜರ್ ಗಿರೀಶ್ ವಿ.ಕುಲಕರ್ಣಿ, ನಬಾರ್ಡ್ ನ ಎಜಿಎಂ ಯುವರಾಜ ಕುಮಾರ್ ಆರ್.ಎಸ್ ಸೇರಿದಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕ್ ಗಳ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್