
ಪಾಟ್ನಾ, 06 ನವೆಂಬರ್ (ಹಿ.ಸ.) :
ಆ್ಯಂಕರ್ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ತಮ್ಮ ತವರು ಜಿಲ್ಲೆ ನಳಂದದ ಬಖ್ಯತಿಯಾರ್ಪುರದ ಮಂಜು ಸಿನ್ಹಾ ಪ್ರಾಜೆಕ್ಟ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಭಾಗವಹಿಸಿ ಮತ ಚಲಾಯಿಸಿದರು.
ಮತದಾನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರಜಾಪ್ರಭುತ್ವ ನಮ್ಮ ಹಕ್ಕು ಮಾತ್ರವಲ್ಲದೆ ನಮ್ಮ ಜವಾಬ್ದಾರಿಯೂ ಆಗಿದೆ. ಪ್ರತಿಯೊಬ್ಬರೂ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ, ಬಿಹಾರದ ಉಪ ಮುಖ್ಯಮಂತ್ರಿ ಹಾಗೂ ತಾರಾಪುರದ ಬಿಜೆಪಿ ಅಭ್ಯರ್ಥಿ ಸಾಮ್ರಾಟ್ ಚೌಧರಿ ಕೂಡ ಮುಂಗೇರ್ನಲ್ಲಿ ಮತ ಚಲಾಯಿಸಿದರು.
ಮತದಾನ ಬಳಿಕ ಮಾತನಾಡಿದ ಅವರು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ, ಬಿಹಾರದ ಪ್ರಗತಿಗೆ ಬೆಂಬಲ ನೀಡಿ. ಆಡಳಿತಾರೂಢ ಎನ್ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಮರಳುತ್ತದೆ ಎಂಬ ವಿಶ್ವಾಸ ನಮಗಿದೆ. ನಿತೀಶ್ ಕುಮಾರ್ ನಮ್ಮ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದರು.
ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, 18 ಜಿಲ್ಲೆಗಳ 121 ಸ್ಥಾನಗಳಿಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa