
ಬೆಳಗಾವಿ, 11 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ರೈತರ ಪ್ರಮುಖ ಬೇಡಿಕೆಗಳ ಬಗ್ಗೆ ಚರ್ಚಿಸಿ, ಪರಿಹಾರ ಕ್ರಮಗಳನ್ನು ಘೋಷಿಸಿದರು. ಕಬ್ಬು, ಮೆಕ್ಕೆಜೋಳ, ಹಾಲು ಉತ್ಪಾದಕರು ಸೇರಿದಂತೆ ಎಲ್ಲಾ ವಿಭಾಗದ ರೈತರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸಭೆಯ ಪ್ರಮುಖ ಅಂಶಗಳು ಹೀಗಿವೆ:
ಕಬ್ಬು ಬೆಳೆಗಾರರು ಸೇರಿ ಎಲ್ಲಾ ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ. ಬೇಡಿಕೆಗಳನ್ನು ಪರಿಶೀಲಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.
ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ ₹5 ಪ್ರೋತ್ಸಾಹಧನ ಮುಂದುವರಿದಿದ್ದು, ಸರ್ಕಾರ ಪ್ರತಿದಿನ ಒಂದು ಕೋಟಿ ಲೀಟರ್ ಹಾಲಿಗೆ ಸುಮಾರು ₹5 ಕೋಟಿ ನೆರವು ನೀಡುತ್ತಿದೆ.
ಕಬ್ಬಿನ ತೂಕದಲ್ಲಿ ಮೋಸ ತಡೆಯಲು ಮತ್ತು ಇಳುವರಿ ನಿಗದಿಯನ್ನು ವೈಜ್ಞಾನಿಕಗೊಳಿಸಲು ಕ್ರಮ ಆರಂಭವಾಗಿದೆ.
ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿದ ತಿದ್ದುಪಡಿ ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಇದಲ್ಲದೆ ರೈತ ಸಂಘಟನೆಗಳ ಇತರೆ ಬೇಡಿಕೆಗಳಾದ, ನೀರಾವರಿ ಪಂಪ್ಗಳಿಗೆ 12 ಗಂಟೆಗಳ ನಿರಂತರ ವಿದ್ಯುತ್ ಪೂರೈಕೆ,
ಅಕ್ರಮ–ಸಕ್ರಮ ಯೋಜನೆ ಪುನಾರಂಭ, ಕಾಡುಪ್ರಾಣಿ ಹಾನಿ ಪರಿಹಾರ ಹೆಚ್ಚಳ, ರೈತರ ಉತ್ಪನ್ನ ಖರೀದಿಗೆ ಕಾರ್ಪಸ್ ಫಂಡ್, ಪಂಚಾಯತ್ ಮಟ್ಟದಲ್ಲಿ ಪಶುವೈದ್ಯರ ನೇಮಕ, ಬೆಳಗಾವಿಯ ಸಕ್ಕರೆ ಆಯುಕ್ತರ ಕಚೇರಿಗೆ ಅಗತ್ಯ ಸಿಬ್ಬಂದಿ ನಿಯೋಜನೆ ಕುರಿತು ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa