

ಕೊಪ್ಪಳ, 11 ಡಿಸೆಂಬರ್ (ಹಿ.ಸ.) :
ಆ್ಯಂಕರ್ : 2026ರ ಜನವರಿ 5ರಂದು ನಡೆಯಲಿರುವ ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಕ್ಷಿಣ ಭಾರತದ ಕುಂಭ ಮೇಳ ಎಂದೇ ಪ್ರಸಿದ್ದವಾದ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಲಕ್ಷ್ಯಾಂತರ ಭಕ್ತಾಧಿಗಳು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ. ಜನರಿಗೆ ಕುಡಿಯುವ ನೀರು, ವಾಹನಗಳಿಗೆ ಪಾರ್ಕಿಂಗ್, ಜಾತ್ರೆಗೆ ವಿದ್ಯುತ್ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌರ್ಯಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕ್ರಮ ಕೈಗೊಳ್ಳಬೇಕು. ಜಾತ್ರೆಯು ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ಜರುಗುವಂತೆ ಜಿಲ್ಲಾಡಳಿತದಿಂದ ಸಕಲ ರೀತಿಯ ಸಹಕಾರ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗುವುದು ಎಂದರು.
ರಥೋತ್ಸವ ದಿನದಂದು ಮತ್ತು ಇನ್ನುಳಿದ ದಿನಗಳಲ್ಲಿಯೂ ಸಹ ಪ್ರತಿ ದಿನ ಲಕ್ಷ್ಯಾಂತರ ಭಕ್ತರು ಶ್ರೀಮಠಕ್ಕೆ ಆಗಮಿಸುತ್ತಾರೆ. ಸೂಕ್ತ ಪೊಲೀಸ್ ಭದ್ರತೆ ಜೊತೆಗೆ ಸಿಸಿಟಿವಿ ಅಳವಡಿಕೆಗೆ ಕ್ರಮ ಕೈಗೊಳ್ಳಬೇಕು. ಮಠದ ಆವರಣದಲ್ಲಿ ಅಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ಕಾಯ್ದಿರಿಸಬೇಕು. ತುರ್ತು ಸಂದರ್ಭದಲ್ಲಿ ಅಂಬುಲೆನ್ಸ್ ಸಂಚರಿಸಲು ಅನುಕೂಲವಾಗುವಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ಜಾತ್ರೋತ್ಸವ ಹಿನ್ನೆಲೆಯಲ್ಲಿ ನಿರಂತರ ದಾಸೋಹ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ನಗರಸಭೆಯ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಪೌರ ಕಾರ್ಮಿಕರ ನಿಯೋಜನೆ ಮತ್ತು ಕುಡಿಯುವ ನೀರಿನ ಸೌಕರ್ಯಕ್ಕೆ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಜಾತ್ರೆಯಲ್ಲಿ ಯಾವುದೇ ರೀತಿಯ ವಿದ್ಯುತ್ ಅವಘಡಗಳಾಗದಂತೆ ಜೆಸ್ಕಾಂ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಮಹಾದಾಸೋಹಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ. ಜಿಲ್ಲಾ ಆರೋಗ್ಯ ಅಧಿಕಾರಿಗಳು ಹಾಗೂ ಆಹಾರ ಸುರಕ್ಷಾ ಅಧಿಕಾರಿಗಳು ಗವಿಮಠದ ಅಡುಗೆ ಸಿಬ್ಬಂದಿಯೊಂದಿಗೆ ವಿಶೇಷ ಸಭೆ ನಡೆಸಿ ಆಹಾರ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಾತ್ರೆ ನಡೆಯುವ ಸ್ಥಳದಲ್ಲಿ ತುರ್ತು ಆರೋಗ್ಯ ಘಟಕ ಸ್ಥಾಪಿಸಲು ಕರ್ತವ್ಯಕ್ಕೆ ತಜ್ಞವೈದ್ಯರನ್ನು ಮತ್ತು ಶುಶ್ರೂಕಿಯರನ್ನು ನಿಯೋಜಿಸಬೇಕು. ಮಹಾದಾಸೋಹ ಸಂಪರ್ಕ ರಸ್ತೆಗಳು, ಜಾತ್ರಾ ಅಂಗಡಿ, ತೇರು ಸಾಗುವ ಆವರಣ, ವಾಹನ ಪಾರ್ಕಿಂಗ್ ಸ್ಥಳಗಳಲ್ಲಿ ಕಸ ವಿಲೇವಾರಿ ಮಾಡಿ ಧೂಳು ಬಾರದಂತೆ ನೀರಿನ ವ್ಯವಸ್ಥೆ ಮಾಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್. ಎಲ್ ಅರಸಿದ್ದಿ ಮಾತನಾಡಿ, ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವು ಬಹುದೊಡ್ಡ ಪ್ರಮಾಣದಲ್ಲಿ ನಡೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುವುದು. ಇದರ ಜೊತೆಗೆ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ ಮತ್ತು ಟ್ರಾಫಿಕ್ ಸಮಸ್ಯೆಗಳಾಗದಂತೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿ, ಅದರ ಮಾಹಿತಿಯನ್ನು ಮುಂಚಿತವಾಗಿ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸುವ ಕೆಲಸ ನಮ್ಮ ಇಲಾಖೆಯಿಂದ ಮಾಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತರಾದ ಮಹೇಶ್ ಮಾಲಗಿತ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶ ಜಗದೀಶ, ಕೊಪ್ಪಳ ತಹಶಿಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ನಗರಸಭೆ ಪೌರಾಯುಕ್ತ ವೆಂಕಟೇಶ ನಾಗನೂರು ಮತ್ತು ಲೋಕೋಪಯೋಗಿ, ಸಾರಿಗೆ, ಜೆಸ್ಕಾಂ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್