
ಬೆಂಗಳೂರು, 14 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವ ಅನ್ನದಾತರ ಸಮಸ್ಯೆಗಳತ್ತ ತಿರುಗಿಯೂ ನೋಡದ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕಳೆದ 2.5 ವರ್ಷಗಳ ಕಾಂಗ್ರೆಸ್ ಆಡಳಿತಾವಧಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿ ಎರಡನೇ ಸ್ಥಾನದಲ್ಲಿರುವುದು ಸರ್ಕಾರದ ವೈಫಲ್ಯದ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. ಈ ಅವಧಿಯಲ್ಲಿ ಒಟ್ಟು 2,809 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ಆಘಾತಕಾರಿ ಮತ್ತು ದುರಂತಕಾರಿ ಸಂಗತಿ ಎಂದು ಅವರು ಕಿಡಿಕಾರಿದ್ದಾರೆ.
ಮೃತಪಟ್ಟ ರೈತರ 339 ಕುಟುಂಬಗಳಿಗೆ ಇಂದಿಗೂ ಸರ್ಕಾರ ಪರಿಹಾರ ನೀಡಿಲ್ಲ ಎಂದು ಆರೋಪಿಸಿರುವ ವಿಜಯೇಂದ್ರ, ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡಿ ಓಡಾಟ–ಹಾರಾಟ ನಡೆಸುವ ಮುಖ್ಯಮಂತ್ರಿಗಳಿಗೆ ರೈತ ಕುಟುಂಬಗಳ ಕಣ್ಣೀರು ಕಾಣಿಸುತ್ತಿಲ್ಲ. ಕನಿಷ್ಠ ಸಾಂತ್ವನ ಹೇಳಲು ಕೂಡ ಸರ್ಕಾರಕ್ಕೆ ಸಮಯವಿಲ್ಲ ಎಂದು ಟೀಕಿಸಿದ್ದಾರೆ.
ಜನಪರ ಆಡಳಿತದ ಘೋಷಣೆಗಳು ಕೇವಲ ಮಾತಿನ ಮಟ್ಟದಲ್ಲೇ ಉಳಿದಿವೆ. ರೈತರ ಹಿತಾಸಕ್ತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಅವರು, ತಕ್ಷಣವೇ ರೈತರಿಗೆ ಭರವಸೆ ಮೂಡುವಂತೆ ಸೂಕ್ತ ಪರಿಹಾರ ವಿತರಿಸಬೇಕು, ಖರೀದಿ ಕೇಂದ್ರಗಳನ್ನು ತೆರೆಯಬೇಕು ಹಾಗೂ ಬೆಂಬಲ ಬೆಲೆ ಖಾತ್ರಿಪಡಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa