
ಹಾಸನ, 15 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಇಲಾಖೆಗಳ ಮೂಲಕ ನೀಡುವ ಸರ್ಕಾರದ ಸವಲತ್ತುಗಳನ್ನು ನೀಡುವಾಗ ವಿಕಲಚೇತನರಿಗೆ ಮೊದಲ ಆದ್ಯತೆ ನೀಡುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಕಲಚೇತನರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳಲ್ಲಿ ವಿಕಲಚೇತನರಿಗೆ ಶೇಕಡ 5 ರಷ್ಟು ಅನುದಾನ ಮೀಸಲಿಟ್ಟು ಅವರ ಬೆಳವಣಿಗೆಗೆ ಪೂರಕವಾಗಿ ಸದ್ಬಳಕೆಗೆ ಮಾಡುವಂತೆ ತಿಳಿಸಿದರು.
ಸಾರ್ವಜನಿಕ ಸ್ಥಳಗಳಲ್ಲಿ, ಕಲಾ ಭವನ, ಶಾಲೆ-ಕಾಲೇಜು, ಆಸ್ಪತ್ರೆಗಳಲ್ಲಿ ಎಲ್ಲಾ ಕಡೆಗಳಲ್ಲಿಯೂ ವಿಕಲಚೇತನರಿಗೆ ನೆರವಾಗುವಂತೆ ರ್ಯಾಂಪ್ ಇರಬೇಕು ಎಂದರು.
ಎಲ್ಲಾ ಸರ್ಕಾರಿ ಆಸ್ಪತ್ರೆಗಳ ನಾಮಫಲಕದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಅವರ ಹೆಸರು ಮೊಬೈಲ್ ನಂಬರ್ಗೆ ಸಂಬಂಧಿಸಿದ ಮಾಹಿತಿಯನ್ನು ಅಳವಡಿಸಲು ಸೂಚಿಸಿದರಲ್ಲದೆ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರ ಗ್ರಾಮ ಸಭೆ ನಡೆಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಮಾಜದಲ್ಲಿ ವಿಕಲಚೇತನರನ್ನು ಕಡೆಗಣಿಸದೆ ಸಮಾನತೆಯಿಂದ ನೋಡಬೇಕು. ಅವರ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಗಳು, ಶಿಕ್ಷಣ, ಆರೋಗ್ಯ ಸೌಲಭ್ಯಗಳನ್ನು ನಂತರ ಯಾರ ಮೇಲೂ ಅವಲಂಬಿತರಾಗದಂತೆ ಸ್ವಯಂ ಉದ್ಯೋಗವನ್ನು ಪಡೆದುಕೊಳ್ಳಲು ಕೌಶಲ್ಯ ತರಬೇತಿಗಳನ್ನು ನೀಡುವ ಮೂಲಕ ಉದ್ಯೋಗದಲ್ಲಿ ತೊಡಗಿಕೊಳ್ಳಲು ಉತ್ತೇಜನ ನೀಡಬೇಕು ಎಂದು ತಿಳಿಸಿದರು.
ವಿಶೇಷವಾಗಿ ಜಿಲ್ಲಾ ಮಟ್ಟದಲ್ಲಿ ವಿಶೇಷ ಚೇತನರಿಗಾಗಿಯೇ ಉದ್ಯೋಗ ಮೇಳ ಆಯೋಜಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa