
ಬೆಂಗಳೂರು, 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ರಸ್ತೆ, ಚರಂಡಿ ಹಾಗೂ ಮೂಲಸೌಕರ್ಯ ನಿರ್ಮಾಣದಿಂದ ಬಡವರ ಉದ್ಧಾರ ಆಗಿಲ್ಲ ಎಂಬ ಮನಸ್ಥಿತಿ ಕಾಂಗ್ರೆಸ್ ಸರ್ಕಾರದಲ್ಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಕಟುವಾಗಿ ಟೀಕಿಸಿದ್ದಾರೆ.
ಸಚಿವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, “ಅಭಿವೃದ್ಧಿ ಅಂದರೆ ಕೇವಲ ಮೂರು–ಆರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಜಮಾ ಮಾಡುವುದು, ಉಳಿದ ಸಮಯದಲ್ಲಿ ರಾಜಕೀಯ ಮಾಡುವುದು ಹಾಗೂ ಕುರ್ಚಿಗಾಗಿ ಕಿತ್ತಾಡುವುದೇ?” ಎಂದು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರಸ್ತೆ, ಚರಂಡಿ, ಮೂಲಸೌಕರ್ಯ ನಿರ್ಮಾಣವನ್ನೇ ನಿರಾಕರಿಸುವ ಮನಸ್ಥಿತಿಯಲ್ಲಿ ಇದ್ದರೆ, ಕರ್ನಾಟಕದ ಜನತೆ ಈ ಸರ್ಕಾರದಿಂದ ಇನ್ನೇನು ನಿರೀಕ್ಷಿಸಬೇಕು ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
“ರಸ್ತೆ, ಚರಂಡಿ ಬೇಡವೆಂದರೆ ತುಮಕೂರಿನವರೆಗೂ ಮೆಟ್ರೋ ಯೋಜನೆ ಯಾಕೆ ಬೇಕು? SCSP/TSP ಹಣವನ್ನು ದುರ್ಬಳಕೆ ಮಾಡುತ್ತಿರುವಂತೆ, ಮೆಟ್ರೋ ಕಾಮಗಾರಿಯ ಹಣವನ್ನೂ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡು ಬಿಡಿ” ಎಂದು ವ್ಯಂಗ್ಯವಾಡಿದ್ದಾರೆ.
ಒಟ್ಟಿನಲ್ಲಿ ಈ ‘ನಾಲಾಯಕ್’ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ರಾಜ್ಯದಲ್ಲಿ ಸಮಗ್ರ ಅಭಿವೃದ್ಧಿ ಅಸಾಧ್ಯ; ಇದು ಗ್ಯಾರೆಂಟಿ ಎಂದು ಅಶೋಕ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa