
ಮಥುರಾ(ಉ.ಪ್ರ), 16 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ದೆಹಲಿ–ಆಗ್ರಾ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಸೋಮವಾರ ಮುಂಜಾನೆ ದಟ್ಟ ಮಂಜಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಬಸ್ಗಳು ಹಾಗೂ ಮೂರು ಕಾರುಗಳು ಪರಸ್ಪರ ಡಿಕ್ಕಿಯಾಗಿ ಬೆಂಕಿಗೆ ಆಹುತಿಯಾದ ಪರಿಣಾಮ ಆರು ಪ್ರಯಾಣಿಕರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ವಾಹನಗಳಿಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ, ಪೊಲೀಸ್ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಸ್ಥಳದಲ್ಲೇ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ನಡೆಸಿದರು.
ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ಮಾಹಿತಿ ನೀಡಿದ್ದು, ದಟ್ಟ ಮಂಜಿನ ಕಾರಣದಿಂದ ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿದ್ದು, ಅದರಿಂದಲೇ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಅಪಘಾತದಿಂದ ಸ್ಥಳದಲ್ಲಿ ಕೆಲಕಾಲ ಗೊಂದಲ ಉಂಟಾಗಿದ್ದರೂ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಬಹುತೇಕ ಪೂರ್ಣಗೊಂಡಿವೆ ಎಂದು ಅವರು ಹೇಳಿದರು.
ಸುಟ್ಟ ಗಾಯಗಳಿಂದ ಬಳಲುತ್ತಿರುವ 25ಕ್ಕೂ ಹೆಚ್ಚು ಗಾಯಾಳುಗಳನ್ನು ಸಮೀಪದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರಂತದ ಕುರಿತು ಮಾಹಿತಿ ಪಡೆದ ಉತ್ತರ ಪ್ರದೇಶ ಮುಖ್ಯಮಂತ್ರಿ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ಘೋಷಿಸಿದ್ದು, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಪಘಾತ ನಡೆದ ಎಕ್ಸ್ಪ್ರೆಸ್ವೇ ಭಾಗದಲ್ಲಿ ಕೆಲಕಾಲ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa