


ರಾಯಚೂರು, 26 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯು ನಗರದ ಜಲ ನಿರ್ಮಲ ಸಭಾಂಗಣದಲ್ಲಿ ನಡೆಯಿತು.
ಶಾಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಈ ಹಿಂದೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾದ ಪ್ರಬಂಧ ವಿಜೇತರು ಜಿಲ್ಲಾ ಮಟ್ಟದ ಸ್ಪರ್ಧೆಗಾಗಿ ಜಲನಿರ್ಮಲ ಸಭಾಂಗಣದಲ್ಲಿ ಸೇರಿದ್ದರು.
ಪ್ರಜಾಪ್ರಭುತ್ವದಲಿ ಮತದಾನ ಮತ್ತು ಚುನಾವಣೆ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧದ ವಿಷಯ ನೀಡಲಾಯಿತು.
ಪ್ರೌಢಶಾಲೆ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಮತ್ತು ಪದವಿ ಮತ್ತು ವಿಶ್ವವಿದ್ಯಾಲಯಗಳ ವಿಭಾಗವಾರು ಪ್ರತ್ಯೇಕ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರಬಂಧ ಬರೆದರು.
ಸಸಿಗೆ ನೀರು ಹಾಕಿ ಸ್ಪರ್ದೇ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಮಾತನಾಡಿ, ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ವಿಶ್ವದಲ್ಲಿಯೇ ಭಾರತದ ಸಂವಿಧಾನವು ಲಿಖಿತ ಸಂವಿಧಾನವಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ, ನಮಗೆ ಬೇಕಾಗಿರುವಂತ ಜನನಾಯಕನನ್ನು ಆಯ್ಕೆ ಮಾಡುವಂತಹ ಅಧಿಕಾರವು ಮತದಾರರಿಗೆ ಸಂವಿಧಾನಬದ್ಧವಾಗಿ ಬಂದಿದೆ.
ಮಹತ್ವದ ಮತದಾನದ ಅವಕಾಶವು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸಮಾನವಾಗಿ ಸಿಕ್ಕಿರುವುದು ಒಂದು ಸುವರ್ಣ ಅವಕಾಶ. ರಾಷ್ಟ್ರ ಮತ್ತು ರಾಜ್ಯ ಚುನಾವಣಾ ಆಯೋಗವು ಇಂತಹ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡುವುದರ ಮೂಲಕ ವಿದ್ಯಾರ್ಥಿಗಳಿಗೆ ಚುನಾವಣೆ ಮತ್ತು ಮತದಾನದ ಅರಿವು ಮೂಡಿಸುವಂತಹ ಕೆಲಸವನ್ನು ಮಾಡುತ್ತಿದೆ.
ಚುನಾವಣೆ ಮತ್ತು ಮತದಾನ ಸಂದರ್ಭದಲ್ಲಿ ಹಲವಾರು ರೀತಿಯ ಕಾರ್ಯ ಚಟುವಟಿಕೆಗಳು ನಡೆಯುತ್ತಿದ್ದು ಅವುಗಳ ಕುರಿತು ಅರಿವನ್ನು ಮೂಡಿಸುವಂತಹ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ. ಇಂಥ ಸ್ಪರ್ಧೆಗಳು ವಿದ್ಯಾರ್ಥಿಗಳ ಚುನಾವಣೆ ಮತ್ತು ಮತದಾನದ ಬಗ್ಗೆ ತಿಳಿದುಕೊಳ್ಳಲು ಅವಶ್ಯಕವಾಗಿವೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಕೆ.ಡಿ. ಬಡಿಗೇರ ಅವರು ಮಾತನಾಡಿ, ನಮ್ಮ ಮತದಾನ ವ್ಯವಸ್ಥೆಯು ಪ್ರಜಾಪ್ರಭುತ್ವದ ತಳಹದಿಯಾಗಿದೆ ಎಂದರು.
ಈ ಪ್ರಬಂಧ ಸ್ಪರ್ಧೆಯನ್ನು ರಾಯಚೂರ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಸಿ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಯಶಗೊಳಿಸಲು ಶ್ರಮಿಸಿರುವುದು ಅಭಿನಂದನಾರ್ಹ ಸಂಗತಿ ಎಂದರು.
ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮದ ಶಾಲಾ ಶಿಕ್ಷಣ ವಿಭಾಗದ ನೋಡಲ್ ಅಧಿಕಾರಿ ಡಾ. ದಂಡಪ್ಪ ಬಿರಾದಾರ ಮಾತನಾಡಿ, ನಮ್ಮ ದೇಶದಲ್ಲಿ ಚುನಾವಣೆಗಳು ಮತ್ತು ಮತದಾನ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತವೆ. ಒಂದು ಮತ ದೇಶಕೆ ಹಿತ. ನನ್ನ ಮತ ನನ್ನ ಧ್ವನಿ. ಮತದಾನಕ್ಕೆ ಮಹತ್ವ ಶಕ್ತಿ ಇದೆ ಎಂಬುದನ್ನು ಎಲ್ಲರೂ ಅರಿಯಬೇಕು ಎಂದು ತಿಳಿಸಿದರು.
ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ವಿಭಾಗದ ಮಂಜುನಾಥ್, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಚನ್ನಬಸವ, ಡಾ.ಶಂಕರನಂದಾ ಜಿ. ಉಪಸಿತರಿದ್ದರು.
ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಶಿಕ್ಷಣ ಸಂಯೋಜಕರಾದ ಸಿ ಪಿ ಓದಿಸೊವಮಠ ಸ್ವಾಗತಿಸಿ, ವಂದಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್