
ಗದಗ, 29 ಡಿಸೆಂಬರ್ (ಹಿ.ಸ.);
ಆ್ಯಂಕರ್:
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಭವ್ಯವಾಗಿ ಆಯೋಜಿಸಲಾಯಿತು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು, ಕುವೆಂಪು ಅವರ ಭಾವ ಚಿತ್ರಕ್ಕೆ ಪುಷ್ಫಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರು ಪ್ರತಿಪಾದಿಸಿದ ವಿಶ್ವಮಾನವ ತತ್ವವು ಇಂದಿನ ಸಮಾಜಕ್ಕೆ ದಾರಿದೀಪವಾಗಿದೆ. ಮಾನವೀಯತೆ, ಸಮಾನತೆ, ಸಹಾನುಭೂತಿ ಹಾಗೂ ಸೌಹಾರ್ದತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಅವರು ಮುಂದುವರೆದು, ಜಾತಿ–ಮತ–ಭಾಷೆಗಳ ಅಂತರವನ್ನು ಮೀರಿ ಮಾನವತೆಯೇ ಧರ್ಮ ಎಂಬ ಸಂದೇಶವನ್ನು ಕುವೆಂಪು ತಮ್ಮ ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಯುವಜನತೆ ಕುವೆಂಪು ಅವರ ಚಿಂತನೆಗಳನ್ನು ಅರ್ಥಮಾಡಿಕೊಂಡು ಸಾಮಾಜಿಕ ಬದಲಾವಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ ಮಾತನಾಡಿ, ವಿಶ್ವಮಾನವನೆಂಬ ಧ್ಯೇಯವೇ ನಮ್ಮ ಬದುಕಿನ ದಾರಿಯಾಗಲಿ. ಎಲ್ಲರೂ ಸಮಾನರು, ಎಲ್ಲರಲ್ಲೂ ಮಾನವೀಯತೆಯೇ ಮೊದಲ ಧರ್ಮ. ಸತ್ಯ, ಪ್ರೀತಿ ಮತ್ತು ಸಹಾನುಭೂತಿಗಳಿಂದಲೇ ನಿಜವಾದ ಸಮಾಜ ನಿರ್ಮಾಣ ಸಾಧ್ಯ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಬಳಿಕ ನಡೆದ ಕಾರ್ಯಕ್ರಮ ದಲ್ಲಿ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ಕುವೆಂಪು ಅವರ ಸಾಹಿತ್ಯ, ದರ್ಶನ ಮತ್ತು ವಿಶ್ವಮಾನವ ತತ್ವದ ಪ್ರಸ್ತುತತೆಯ ಕುರಿತು ಮಾತನಾಡಿದರು.
ಹಿರಿಯ ಸಾಹಿತಿ ಚಂದ್ರಶೇಖರ ವಸ್ತ್ರದ ಉಪನ್ಯಾಸ ನಿಡುತ್ತಾ, ಭೂಮಿ ಮೇಲೆ ಹುಟ್ಟುವ ಪ್ರತಿ ಮಗು ವಿಶ್ವಮಾನವ. ಆ ನಂತರ ಆ ಮಗುವನ್ನು ಜಾತಿ,ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗ ಬಾರದು ಎಂದರು.
ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯಾತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ ಎಂದು ಅಭಿಮತ ವ್ಯಕ್ತಪಡಿಸಿದರು.
ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರ ಜನ್ಮದಿನವಾದ ಡಿಸೆಂಬರ್ 29ನ್ನು 'ವಿಶ್ವಮಾನವ ದಿನಾಚರಣೆ'ಯಾಗಿ ಆಚರಿಸಲಾಗುತ್ತದೆ. ಕುವೆಂಪು ಅವರು ನೀಡಿದ 'ಮನುಜ ಮತ ವಿಶ್ವಪಥ' ಎಂಬ ಸಂದೇಶವನ್ನು ಸಾರುವ ಈ ದಿನವು, ಮಾನವನ ಸರ್ವತೋಮುಖ ಬೆಳವಣಿಗೆ ಮತ್ತು ವಿಶ್ವ ಸಹೋದರತ್ವದ ಆಶಯವನ್ನು ಎತ್ತಿ ಹಿಡಿಯುತ್ತದೆ ಎಂದು ತಿಳಿಸಿದರು.
ಬುದ್ಧ ಮತ್ತು ಬಸವಣ್ಣನವರಂತೆ ಪ್ರತಿಯೊಬ್ಬ ವ್ಯಕ್ತಿಯೂ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಕುವೆಂಪು ಹೇಳಿದ್ದಾರೆ ಎಂದರು.
'ಮನುಜ ಮತ ವಿಶ್ವಪಥ' ಇದು ಕುವೆಂಪು ಅವರ ವಿಶ್ವಮಾನವ ಸಂದೇಶದ ತಿರುಳಾಗಿದೆ. ಅಂದರೆ, 'ಮನುಷ್ಯನ ಧರ್ಮವೇ ವಿಶ್ವದ ಪಥ' ಎಂದು ಸಾರುವ ಮೂಲಕ ಎಲ್ಲ ಮಾನವರೂ ಒಂದೇ ಎಂಬ ಭಾವನೆಯನ್ನು ಬೆಳೆಸುವುದಾಗಿದೆ ಎಂದು ಸಾಹಿತಿ ಚಂದ್ರಶೇಖರ ವಸ್ತ್ರದ ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡವಿಷಯದಲ್ಲಿ 125 ಕ್ಕೆ 125 ಅಂಕ ಪಡೆದ 20 ಮಕ್ಕಳನ್ನು ಹಾಗೂ ತಲಾ 10 ಹಿರಿಯ ಹಾಗು ಯುವ ಸಾಹಿತಿ ಕವಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಜಿಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ರಾಜ್ಯ ಜಾನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣನವರ, ಶರೀಫ್ ಬಿಳೆಯಲಿ, ಡಾ. ರಾಜೇಂದ್ರ ಗಡಾದ, ಮುತ್ತು ಬಿಳೆಯಲಿ, ಶ್ರೀನಿವಾಸನ್ ಮೂರ್ತಿ ಕುಲಕರ್ಣಿ, ಆರ್ ಎಸ್ ಬುರಡಿ, ಶ್ರೀಧರ ಚಿನಗುಡಿ ಇದ್ದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಅವರು ಅತಿಥಿಗಳಿಗೆ ಸ್ವಾಗತ ಕೋರಿದರು. ಪ್ರೊ. ಬಾಹುಬಲಿ ಜೈನರ್ ನಿರ್ವಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP