ಬೆಂಗಳೂರು, 10 ಮಾರ್ಚ್ (ಹಿ.ಸ.) :
ಆ್ಯಂಕರ್ : ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಯಾವುದೇ ಕಾರಣಕ್ಕೂ ಬೇರೆ ಸ್ಥಳಗಳಲ್ಲಿ ಕೆಲಸ ನಿರ್ವಹಿಸುವಂತಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.
ವಿಧಾನಪರಿಷತ್ನಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯೆ ಬಲ್ಕಿಶ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುವ ವೈದ್ಯರು ತಮ್ಮ ಕರ್ತವ್ಯದ ಸಂದರ್ಭದಲ್ಲೇ ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕರ್ತವ್ಯಕ್ಕೆ ಹಾಜರಾದರೆ ಸಂಜೆ 4 ಗಂಟೆವರೆಗೂ ಸರ್ಕಾರಿ ಆಸ್ಪತ್ರೆಗಳಲ್ಲೇ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದರು.
ಈ ಮೊದಲು 2 ಗಂಟೆಗಳ ನಂತರ 1 ಗಂಟೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿತ್ತು. ಆದರೆ ವೈದ್ಯರು 1 ಗಂಟೆ ಮುಂಚಿತವಾಗಿ ಹೋಗುವುದು ಇಲ್ಲವೇ 1 ಗಂಟೆ ತಡವಾಗಿ ಬರುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ. ಈ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದನ್ನು ತಡೆಗಟ್ಟಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.
ಈಗಾಗಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಅಧಿಸೂಚನೆ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದ್ದಾರೆ.
ಇನ್ನು ಮುಂದೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾದ ವೇಳೆ ನಾಲ್ಕು ಬಾರಿ ಬಯೋಮೆಟ್ರಿಕ್ಗೆ ತಮ್ಮ ಹಸ್ತಮುದ್ರೆ ಹಾಕಬೇಕು. ಬೆಳಗ್ಗೆ 9 ಗಂಟೆ, ಮಧ್ಯಾಹ್ನ 2, 3 ಮತ್ತು 4 ಗಂಟೆಗೆ ಕಡ್ಡಾಯವಾಗಿ ಹಾಕಲೇಬೇಕು. ಇದರ ಆಧಾರಿತವಾಗಿಯೇ ಸಂಬಳವನ್ನು ನೀಡಲಾಗುವುದು. ಈ ಕುರಿತು ಮುಖ್ಯಸ್ಥರ ಜೊತೆಯೂ ಚರ್ಚೆ ಮಾಡಲಾಗಿದೆ. ರೋಗಿಗಳಿಗೆ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಡಾ. ಪಾಟೀಲ್ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa