ರಾಯಚೂರು, 04 ಮಾರ್ಚ್ (ಹಿ.ಸ.) :
ಆ್ಯಂಕರ್ : ಕರ್ತವ್ಯ ನಿರ್ವಹಣೆಯಲ್ಲಿ ಎಷ್ಟೇ ಒತ್ತಡಗಳಿದ್ದರು ವೈಯಕ್ತಿಕ ಆರೋಗ್ಯಕ್ಕೂ ಸಹ ನೌಕರರು ಗಮನ ನೀಡಬೇಕು. ಆರೋಗ್ಯದ ಹಿತದೃಷ್ಠಿಯಿಂದ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆರಂಭವಾದ ರಾಯಚೂರ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳು 2024-25ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆಗಳಿಂದ ನಮ್ಮ ಆರೋಗ್ಯ ಪರಿಸ್ಥಿತಿ ಸುಧಾರಿಸಲಿದೆ. ವೃತ್ತಿಜೀವನದಲ್ಲಿ ಎದುರಾಗುವ ಒತ್ತಡ ಸನ್ನಿವೇಶಗಳನ್ನು ಸಮರ್ಪಕವಾಗಿ ನಿಭಾಯಿಸುವ ಸಾಮರ್ಥ್ಯವನ್ನು ನೌಕರರು ಬೆಳೆಸಿಕೊಳ್ಳಬೇಕು. ಕ್ರೀಡಾಕೂಟದಿಂದ ನೌಕರರಲ್ಲಿ ಬಾಂಧವ್ಯ, ಹೊಂದಾಣಿಕೆ ಹೆಚ್ಚಾಗುತ್ತದೆ ಎಂದರು.
ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಈರೇಶ ನಾಯಕ ಅವರು ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರ ಮಾರ್ಗದರ್ಶನದಲ್ಲಿ ವಿವಿಧ ಸಮಿತಿಗಳು ಸತತ 15 ದಿನಗಳ ಕಾಲ ಪರಿಶ್ರಮವಹಿಸಿದ್ದರಿಂದ ಈ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಓಟ, ಎತ್ತರ ಜಿಗಿತ, ಗುಂಡು ಎಸೆತ, ಕಬಡ್ಡಿ, ಖೋ-ಖೋ, ವಾಲಿಬಾಲ್, ಥ್ರೋಬಾಲ್. ಕ್ರಿಕೆಟ್, ಹಾಕಿ, ಫುಟ್ಬಾಲ್, ಯೋಗಾಸನ, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಕೇರಂ, ಚದುರಂಗ, ಬಾಸ್ಕೆಟ್ ಬಾಲ್, ಈಜು ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ನೌಕರರಿಗೆ ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಜಾನಪದ ನೃತ್ಯ, ಜಾನಪದ ಗೀತೆ, ಶಾಸ್ತ್ರೀಯ ಗಾಯನ, ಶಾಸ್ತ್ರೀಯ ವಾದ್ಯ, ಶಾಸ್ತ್ರೀಯ ನೃತ್ಯ, ಕಿರು ನಾಟಕ, ಕರಕುಶಲ ವಸ್ತು ಪ್ರದರ್ಶನ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಭಾಗಿಯಾಗಲು ಸಾವಿರಕ್ಕಿಂತ ಹೆಚ್ಚು ನೌಕರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ಗುಂಪು ಆಟಗಳಲ್ಲಿ ಪ್ರಥಮ ಸ್ಥಾನ ಪಡೆದ ನೌಕರರು ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಹೊಂದಿರುತ್ತಾರೆ. ಈ ನೌಕರರ ಕ್ರೀಡಾಕೂಟದ ಯಶಸ್ವಿಗಾಗಿ ವಿವಿಧ ಸಮಿತಿಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಚಿಸಿದ್ದು, ಎಲ್ಲಾ ಸಮಿತಿಗಳಿಗೆ ಅವರದೇ ಆದ ಜವಾಬ್ದಾರಿ ನೀಡಲಾಗಿದೆ. ಈ ಕ್ರೀಡಾಕೂಟಕ್ಕೆ ನಿರ್ಣಾಯಕರನ್ನಾಗಿ ಒಟ್ಟು 60 ಜನ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ನೌಕರರು ಸಮಯಕ್ಕೆ ಸರಿಯಾಗಿ ಸ್ಪರ್ಧೆಗಳಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
7 ತಂಡಗಳು, 1020 ನೌಕರರು ಭಾಗಿ; ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಕಬ್ಬಡ್ಡಿ, ಖೋಖೋ, ವಾಲಿಬಾಲ್, ಚೆಸ್, ಬ್ಯಾಡ್ಮಿಂಟನ್, ಲಾಂಗ್ ಜಂಪ್, ಶಾಟಪುಟ್, ಡಿಸ್ಕಸ್ ಥ್ರೋ, ಜಾವಲಿನ್ ಥ್ರೋ, ರನ್ನಿಂಗ್ ಸೇರಿದಂತೆ ವಿವಿಧ ಸ್ಪರ್ಧೆಗಳು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜಿಲ್ಲೆಯ ದೇವದುರ್ಗ, ಸಿಂಧನೂರು, ಲಿಂಗಸೂಗೂರು, ರಾಯಚೂರು, ಮಸ್ಕಿ, ಮಾನವಿ ಹಾಗೂ ಸಿರವಾರ ಸೇರಿದಂತೆ 7 ತಂಡಗಳ ಸುಮಾರು 1020 ನೌಕರರು ಭಾಗವಹಿಸಲಿದ್ದಾರೆ.
ಅಪರ ಜಿಲ್ಲಾಧಿಕಾರಿ ಶಿವಾನಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತಗೇರಿ, ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಡಾ.ಶಂಕರಗೌಡ ಪಾಟೀಲ, ಸಂಘದ ವಿಭಾಗೀಯ ಉಪಾಧ್ಯಕ್ಷರಾದ ಚಂದ್ರಶೇಖರ ಹಿರೇಮಠ, ರಾಜ್ಯ ಸಂಘಟನಾ ಕಾರ್ಯದರ್ಶಿ ದೊಡ್ಡ ನಿಂಗಪ್ಪ, ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಭೀಮರಾಜ ಹವಾಲ್ದಾರ್, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮೇಶ ನಾಯಕ, ನೌಕರರ ಸಂಘದ ತಾಲೂಕಾಧ್ಯಕ್ಷರಾದ ಹನುಮಂತ್ರಾಯ ಶಾಖೆ, ಆರೀಫ್ ಮಿಯಾ, ಸುರೇಶ ಕುರ್ಡಿ, ಹಾಜಿ ಬಾಬು, ಪಂಪಾಪತಿ ಹೂಗಾರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್