ಕೊಪ್ಪಳ, 23 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, ಬೆಂಗಳೂರು ರವರು ನಡೆಸುತ್ತಿರುವ 2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-2 ರ ಪರೀಕ್ಷೆಗಳು ಮೇ 26 ರಿಂದ ಜೂನ್ 02 ರವರೆಗೆ ನಡೆಯಲಿದ್ದು, ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಅಕ್ರಮ/ಅವ್ಯವಹಾರ ನಡೆಯದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಅಂತರ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಕೊಪ್ಪಳ-10, ಗಂಗಾವತಿ-06, ಕನಕಗಿರಿ-02, ಕಾರಟಗಿ-02, ಕುಷ್ಟಗಿ-08, ಯಲಬುರ್ಗಾ-04 ಹಾಗೂ ಕುಕನೂರಿನ-03 ಕೇಂದ್ರಗಳು ಸೇರಿದಂತೆ ಒಟ್ಟು 35 ಪರೀಕ್ಷಾ ಕೇಂದ್ರಗಳಲ್ಲಿ ಮೇ 26 ರಿಂದ ಜೂನ್ 02 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ.
ಆದೇಶದನ್ವಯ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ, ಮೊಬೈಲ್ ಪೇಜರ್, ಜೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಅಂತರದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ.
ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್