ಬೆಂಗಳೂರು, 29 ಮೇ (ಹಿ.ಸ.) :
ಆ್ಯಂಕರ್ : ಬಹು ನಿರೀಕ್ಷಿತ 'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಸುಗ್ರೀವಾಜ್ಞೆ ́ಗೆ ಅಂಕಿತ ದೊರೆತ ಹಿನ್ನೆಲೆಯಲ್ಲಿ, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಗಿಗ್ ಕಾರ್ಮಿಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ಅಭಿನಂದನೆಗಳನ್ನು ಸಲ್ಲಿಸಿದರು.
'ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ವಿಧೇಯಕಗಳ ಸುಗ್ರೀವಾಜ್ಞೆ ́ಗೆ ರಾಜ್ಯಪಾಲರು ಇತ್ತೀಚೆಗೆ ಸಹಿ ಹಾಕಿದ್ದರು.
ರಾಜ್ಯದಲ್ಲಿ ಪ್ಲಾಟ್ಫಾರಂ ಆಧಾರಿತ ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಸಂಬಂಧ ಪ್ರತ್ಯೇಕ ಮಂಡಳಿ ಸ್ಥಾಪನೆಗೆ ಸರ್ಕಾರದ ಹಾದಿ ಇದರಿಂದ ಸುಗಮವಾಗಿದೆ.
ಗಿಗ್ ಕಾರ್ಮಿಕರಿಗೆ ಅಪಘಾತ ಪರಿಹಾರ, ಶೈಕ್ಷಣಿಕ ಸಹಾಯಧನ, ವಸತಿ ಸೌಲಭ್ಯ ಸೇರಿದಂತೆ ಹಲವಾರು ಸಾಮಾಜಿಕ ಸೇವಾ ಸೌಲಭ್ಯಗಳನ್ನು ಈ ಮಂಡಳಿಯ ಮೂಲಕ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ.
ಅಗ್ರಿಗೇಟರ್ ಸಂಸ್ಥೆಗಳು ವಹಿವಾಟಿನಿಂದ ಪಡೆದ ಆದಾಯದಿಂದ ಮಂಡಳಿಯಲ್ಲಿ ನಿಧಿ ಸ್ಥಾಪಿಸಿ ಅದನ್ನು ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಬಳಸುವುದು ಸುಗ್ರೀವಾಜ್ಞೆಯ ಮುಖ್ಯ ಉದ್ದೇಶವಾಗಿದೆ.
ರಾಜ್ಯಪಾಲರ ಭೇಟಿ ವೇಳೆ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎನ್ ವಿ ಪ್ರಸಾದ್, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲ ಕೃಷ್ಣ, ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa