ಬೆಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ತುರ್ತಾಗಿ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಅವರು, ಮಳೆ ಹಾನಿಯ ಪ್ರಮಾಣವನ್ನು ಅರಿಯಲು ಹಾಗೂ ನಿರ್ವಹಣಾ ಕ್ರಮಗಳ ಬಗ್ಗೆ ಅವಲೋಕನೆ ನಡೆಸಲು ಸಂಜೆ ವೇಳೆಗೆ ಮಂಗಳೂರು ತಲುಪುವ ನಿರೀಕ್ಷೆಯಿದೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಪರಿಣಾಮವಾಗಿ ಹಲವೆಡೆ ವಿದ್ಯುತ್ ವ್ಯತ್ಯಯ, ರಸ್ತೆ ತಡೆ, ಮನೆಗಳಿಗೆ ನುಗ್ಗಿದ ನೀರು ಮತ್ತು ಭೂ ಕುಸಿತದಂತ ಸಮಸ್ಯೆಗಳು ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವರು ಜಿಲ್ಲಾಡಳಿತದ ಅಧಿಕಾರಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಿದ್ದಾರೆ.
ಇಂದು ರಾತ್ರಿ ಮಂಗಳೂರಿನಲ್ಲಿಯೇ ತಂಗಲಿರುವ ಸಚಿವರು, ನಾಳೆ ವಿವಿಧ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಸ್ಥಳದಲ್ಲೇ ವಿಪತ್ತು ನಿರ್ವಹಣಾ ಕ್ರಮಗಳನ್ನು ತ್ವರಿತವಾಗಿ ಜಾರಿಗೆ ತರಲು ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa