ಹೊಸಪೇಟೆ, 30 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲಾ ವ್ಯಾಪ್ತಿಯ ಶಾಲಾ-ಕಾಲೇಜು, ಬಸ್ ನಿಲ್ದಾಣ, ಪ್ರವಾಸಿ ತಾಣಗಳು ಸೇರಿ ನಿರ್ಬಂಧಿತ ಪ್ರದೇಶಗಳಲ್ಲಿ ಅಕ್ರಮ ತಂಬಾಕು ಮಾರಾಟಗಾರರ ಮೇಲೆ ಸೂಕ್ತ ಕಠಿಣ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು.
ಜಿಲ್ಲೆಯಲ್ಲಿ ತಡೆಗಟ್ಟಬಹುದಾದ ಕಾಯಿಲೆ ಮತ್ತು ಮರಣ ಕಾರಣಗಳಲ್ಲಿ ತಂಬಾಕು ಸೇವನೆ ಪ್ರಮುಖ ಕಾರಣವಾಗಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ಸೇವನೆಯಿಂದ ಮಾನವನ ದೇಹದ ಮೇಲೆ ಉಂಟಾಗುವ ದುಷ್ಟಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕಿದೆ. ತಂಬಾಕು ಸೇವನೆ ತ್ಯಜಿಸಲು ಅಗತ್ಯ ಆರೋಗ್ಯ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಮೂಲಕ ತಂಬಾಕು ಸೇವನೆಯನ್ನು ತ್ಯಜಿಸುವಂತೆ ಪ್ರೇರೇಪಿಸಬೇಕು. ಯುವಕರಿಗೆ ತಂಬಾಕು ಸೇವನೆ ಸಿಗದಂತೆ ಅಂಗಡಿಗಳಲ್ಲಿ ನಿಷೇಧಿಸಬೇಕು. ತಂಬಾಕು ಮಾರಾಟ ಮಾಡುವ ಅಂಗಡಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಯಾವುದೇ ಜಾಹೀರಾತು ಇರಬಾರದು. 18 ವರ್ಷದೊಳಗಿನ ಅಪ್ರಾಪ್ತ ವಯಸ್ಕರಿಗೆ ತಂಬಾಕು ಮಾರಾಟ ಮಾಡುವ ಯಾವುದೇ ಪುರಾವೆಗಳು ಹಳ್ಳಿಯಲ್ಲಿ ಕಂಡು ಬರಬಾರದು. 18 ವರ್ಷದೊಳಗಿನ ವ್ಯಕ್ತಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಿದೆ. ಉಲ್ಲಂಘಿಸಿದರೇ ಶಿಕ್ಷಾರ್ಹ ಎಂಬ ನಾಮಫಲಕವನ್ನು ಎಲ್ಲಾ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳಲ್ಲಿ ಅಳವಡಿಸಬೇಕು ಎಂದು ಸೂಚಿಸಿದರು.
ಈ ವೇಳೆ ಜಿಲ್ಲಾ ಆರೋಗ್ಯ ಅಧಿಕಾರಿ ಶಂಕರನಾಯ್ಕ್, ಆರ್ಸಿಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್