ಬೆಂಗಳೂರು, 31 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದ ಜಿಲ್ಲೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮವಾಗಿ ಇಂದು ಲೋಕಾಯುಕ್ತ ಅಧಿಕಾರಿಗಳು ಭಾರೀ ದಾಳಿ ನಡೆಸಿದ್ದಾರೆ.
ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಬಳ್ಳಾರಿ, ಉಡುಪಿ, ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ಈ ದಾಳಿಗಳು ನಡೆದಿದ್ದು, ಹಲವಾರು ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ.
ಗದಗ ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ್ ಶಿರೋಳ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಆರು ಕಡೆಗಳಲ್ಲಿ ಲೋಕಾಯುಕ್ತ ಎಸ್ಪಿ ಹಣಮಂತರಾಯ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕುಟುಂಬದ ಸದಸ್ಯರ ಮನೆಗಳಲ್ಲಿಯೂ ಪರಿಶೀಲನೆ ನಡೆಸಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಸುಪರಿಡೆಂಟ್ ಇಂಜಿನಿಯರ್ ಅಮೀನ್ ಮುಕ್ತಾರ್ ಅವರ ಮನೆ ಮೇಲೆ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ರೂ. ಮೌಲ್ಯದ ಆಸ್ತಿ ಪತ್ರಗಳು, 25 ಎಕರೆ ಜಮೀನು ದಾಖಲೆ, ಪೆಟ್ರೋಲ್ ಬಂಕ್, ಕ್ರಶರ್ ಮಷೀನ್ ಲೈಸನ್ಸ್ ಇತ್ಯಾದಿ ಪತ್ತೆಯಾಗಿವೆ.
ಉಡುಪಿ ಜಿಲ್ಲೆಯ ಕಾರ್ಕಳ ಮೆಸ್ಕಾಂ ವಿಭಾಗದ ಅಕೌಂಟ್ಸ್ ಅಧಿಕಾರಿ ಗಿರೀಶ್ ರಾವ್ ಮೆನೆ ವಿರುದ್ಧ ಆದಾಯಕ್ಕಿಂತ ಹೆಚ್ಚಾಗಿ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಐದು ಕಡೆ ದಾಳಿ ನಡೆಸಲಾಗಿದೆ.
ಧಾರವಾಡದಲ್ಲಿ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಎಚ್. ಸುರೇಶ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಹಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ಮೂಲಕ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದ ಪಿಡಿಓ ಕಚೇರಿ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿ ರಾಮಕೃಷ್ಣಪ್ಪ ಗುಡಗೇರಿಯ ಮನೆ ಮೇಲೆ ದಾಳಿ ನಡೆಸಲಾಗಿದೆ.
ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಲೆಕ್ಕಪತ್ರ ವಿಭಾಗದ ಪ್ರಥಮ ದರ್ಜೆ ಸಹಾಯಕ ಶ್ರೀಶೈಲ್ ತತ್ರಾಣಿ ಅವರ ಮನೆ ಹಾಗೂ ಜ್ಯುವೆಲ್ಲರಿ ಅಂಗಡಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಈ ದಾಳಿ ಬಾಗಲಕೋಟೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ವರ ಅವರ ನೇತೃತ್ವದಲ್ಲಿ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa