ಗದಗ, 10 ಜೂನ್ (ಹಿ.ಸ.) :
ಆ್ಯಂಕರ್ : ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಇವರ ಅಧ್ಯಕ್ಷತೆಯಲ್ಲಿ ಗದಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕರ ವಸೂಲಾತಿ ಪ್ರಗತಿ ಕುಂಠಿತವಾಗಿದ್ದು, ಪ್ರತಿ ತಿಂಗಳು ಶೇ.10% ರಷ್ಟು ಗುರಿ ನಿಗದಿಪಡಿಸಿಕೊಂಡು ಪ್ರಗತಿ ಸಾಧಿಸಬೇಕು. ಜಿಲ್ಲೆಯಲ್ಲಿ ಗ್ರಂಥಾಲಯ ಉಪಕರ ವಸೂಲಾತಿ ಪ್ರಗತಿ ಕುಂಠಿತವಾಗಿದ್ದು, ಪ್ರತಿ ತಿಂಗಳು ಶೇ.10%ರಷ್ಟು ಗುರಿ ನಿಗದಿಪಡಿಸಿಕೊಂಡು ಪ್ರಗತಿ ಸಾಧಿಸಬೇಕು. ಇ-ಗ್ರಾಮಸ್ವರಾಜ್ ತಂತ್ರಾಂಶದಲ್ಲಿ ಅನುಮೋದಿತ ಕ್ರಿಯಾ ಯೋಜನೆಯನ್ನು ಅಳವಡಿಸುವುದು, ಇ-ಸ್ವತ್ತು- ಸುಮಾರು ಗ್ರಾಮ ಪಂಚಾಯತಿಗಳಲ್ಲಿ 30 ದಿನಗಳಿಗಿಂತ ಬಹಳಷ್ಟು ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಉಳಿಸಿಕೊಂಡಿದ್ದು ಈ ಕುರಿತು ಕ್ರಮ ವಹಿಸಬೇಕೆಂದು ಸೂಚಿಸಿದರು.
15 ನೇ ಹಣಕಾಸು ಯೋಜನೆಯಡಿ ಈಗಾಗಲೇ ಗ್ರಾಮ ಪಂಚಾಯತಿಗಳಿಗೆ ಬಿಡುಗಡೆಯಾದ ಅನುದಾನವನ್ನು ನಿಗದಿತ ಮಟ್ಟದಲ್ಲಿ ವೆಚ್ಚ ಭರಿಸದೇ ಬಹಳಷ್ಟು ಅನುದಾನ ಬಾಕಿ ಉಳಿಸಿಕೊಂಡಿದ್ದು, ಅನುದಾನ ವೆಚ್ಚ ಭರಿಸಬೇಕು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಮಹಿಳಾ ಗ್ರಾಮ ಸಭೆಗಳನ್ನು ಆಯೋಜಿಸಬೇಕು. ಟ್ರೈನಿಂಗ್ ಮ್ಯಾನೇಜ್ಮೆಂಟ್ ಪೋರ್ಟಲ್ ಈ ತಂತ್ರಾಂಶದಲ್ಲಿ ಗ್ರಾಮ ಪಂಚಾಯತಿಯ ಎಲ್ಲ ಚುನಾಯಿತ ಪ್ರತಿನಿಧಿಗಳ ಹಾಗೂ ಸಿಬ್ಬಂಧಿಗಳ ಆಧಾರ ಕಾರ್ಡ ವಿವರಗಳನ್ನು ಅಳವಡಿಸಬೇಕು.
ಈಗಾಗಲೇ ಕೆಲವು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಾರ್ಯನಿರ್ವಹಿಸಲು ಸ್ಥಳಾವಕಾಶವಿದ್ದು, ಇನ್ನುಳಿದ ಗ್ರಾಮ ಪಂಚಾಯತ ಕಟ್ಟಡದಲ್ಲಿ ಕಾರ್ಯನಿರ್ವಹಿಸಲು ಸ್ಥಳಾವಕಾಶ ಕಲ್ಪಿಸಬೇಕು ಎಂದರು.
ಸ್ವಚ್ಚ ಭಾರತ ಮಿಷನ್ (ಗ್ರಾ)- ಈ ಯೋಜನೆಯಡಿ ಈಗಾಗಲೇ ವಯಕ್ತಿಕ ಶೌಚಾಲಯ ನಿರ್ಮಾಣ ಮಾಡಲು ಕಾರ್ಯಾದೇಶ ನೀಡಿದ ಫಲಾನುಭವಿಗಳು ತುರ್ತಾಗಿ ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮ ವಹಿಸಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಸಂಬಂಧಿಸಿದಂತೆ 2025-26 ನೇ ಸಾಲಿನ ಮೇ-2025ರ ಮಾಹೆ ಕಳೆದರೂ ವಾರ್ಷಿಕ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸದೇ ಕನಿಷ್ಟ ಪ್ರಗತಿ ಸಾಧಿಸಿರುವ ಗ್ರಾಮ ಪಂಚಾಯತಿಗಳ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನ ಹರಿಸಿ ಕೂಲಿಕಾರರಿಗೆ ಸ್ಥಳೀಯವಾಗಿ ಕೆಲಸ ಒದಗಿಸಿ ಪ್ರಗತಿ ಸಾಧಿಸಬೇಕು. ಮಹಿಳಾ ಭಾಗವಹಿಸುವಿಕೆ ಪ್ರಮಾಣವನ್ನು ಸರಕಾರದಿಂದ ನಿಗದಿಪಡಿಸಿದ ಶೇ.60%ರಷ್ಟು ಗುರಿ ಸಾಧಿಸಲು ಹಾಗೂ ಬೂದು ನೀರು ನಿರ್ವಹಣೆ ಕಾಮಗಾರಿಗಳ ಡಿಪಿಆರ್ ಗಳನ್ನು ತಯಾರಿಸಿ ಸಲ್ಲಿಸಲು ಮತ್ತು ಜಿಲ್ಲೆಯಲ್ಲಿ ದಾಖಲಾಗಿರುವ ಸಾಮಾಜಿಕ ಲೆಕ್ಕ ಪರಿಶೋಧನಾ ಆಕ್ಷಪಣೆ ಮತ್ತು ವಸೂಲಾತಿ ಮಾಡಿ ಇತ್ಯರ್ಥಪಡಿಸಲು ಜಿ.ಪಂ. ಸಿ.ಇಓ ಭರತ್ ಎಸ್ ಸೂಚಿಸಿದರು.
ವಸತಿ ಯೋಜನೆ ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಮಂಜೂರಾದ ಮನೆಗಳಿಗೆ ತುರ್ತಾಗಿ ಮುಂದಿನ ಕ್ರಮ ವಹಿಸಲು ಸೂಚಿಸಲಾಯಿತು.
ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿ.ಪಂ. ಯೋಜನಾ ನಿರ್ದೇಶಕರು, ಮುಖ್ಯ ಯೋಜನಾಧಿಕಾರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Lalita MP