ಬಳ್ಳಾರಿ, 10 ಜೂನ್ (ಹಿ.ಸ.) :
ಆ್ಯಂಕರ್ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆದ ಮೇಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ - ಘನತೆಗಳು ಹೆಚ್ಚಾಗಿ ವಿಶ್ವಗುರು ಎನ್ನುವ ಪದವಿ ಸಿಗುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 11 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮೊದಲು ಭಾರತವನ್ನು ಭಿಕ್ಷುಕರ ದೇಶ, ಹಾವಾಡಿಗರ ದೇಶ ಎಂದು ಕರೆಯಲಾಗುತ್ತಿದ್ದು. ಈಗ, ವಿಶ್ವಮಟ್ಟದಲ್ಲಿ ಭಾರತದ ಸಾಮಥ್ರ್ಯ, ಶಕ್ತಿ ಮತ್ತು ಸಂಪನ್ಮೂಲಗಳ ಸಮಗ್ರ ಮಾಹಿತಿ ಅರ್ಥವಾಗಿ ಗೌರವ - ಘನತೆಗಳು ಸಹಜವಾಗಿಯೇ ಹೆಚ್ಚಾಗಿವೆ. ಅನೇಕ ರಾಷ್ಟ್ರಗಳು - ದೇಶಗಳು ಭಾರತದ ಜೊತೆ ಸ್ನೇಹಕ್ಕಾಗಿ ಸ್ವಯಂ ಮುಂದಾಗುತ್ತವೆ ಎಂದರು.
ನೆಹರು ಅವರ ಆಡಳಿತಾವಧಿಯಲ್ಲಿ ದೇಶದ ಗೌರವ - ಘನತೆಗಳು ಕುಗ್ಗಿದ್ದವು. ಇಂದಿರಾಗಾಂಧಿ ಅವರ ಆಡಳಿತಾವಧಿಯಲ್ಲಿ ಸರ್ವಾಧಿಕಾರಿ ಧೋರಣೆ ಆಡಳಿತದಲ್ಲಿತ್ತು. ರಾಹುಲ್ ಗಾಂಧಿ - ಸೋನಿಯಾ ಗಾಂಧಿ ಅವರ ಈ ದಿನಗಳಲ್ಲಿ ನ್ಯಾಷನಲ್ ಹೆರಾಲ್ಡ್ ಹಗರಣ ಬಯಲಾಗಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ದೇಶದಲ್ಲಿ ಭ್ರಷ್ಟಾಚಾರ ತುಂಬಿದೆ ಎಂದರು.
ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಎಂ.ಎಸ್. ಸೋಮಲಿಂಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು ಮೋಕ ಸೇರಿ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್