ಬೆಂಗಳೂರು, 11 ಜೂನ್ (ಹಿ.ಸ.) :
ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರ್ಸಿಬಿ ಜಾಹಿರಾತು ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯ ನಾಳೆಗೆ ಮುಂದೂಡಿದೆ.
ನಿಖಿಲ್ ಸೋಸಲೆ ಹಾಗೂ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈವೇಟ್ ಲಿಮಿಟೆಡ್ನ ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಶಮಂತ್ ಮಾವಿನಕೆರೆ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ''ಅರ್ಜಿದಾರರನ್ನು ಬಂಧನ ಮಾಡುವ ಸಂಬಂಧ ಮಾಹಿತಿ ನೀಡುವಾಗಲೂ ಸಮಯದ ಉಲ್ಲೇಖಿಸಿಲ್ಲ. ಮೆಮೋ ನೀಡುವಾಗ ಸಮಯ ಉಲ್ಲೇಖಿಸುವುದು ಪೊಲೀಸರ ಕರ್ತವ್ಯ. ಹೀಗಾಗಿ, ಬಂಧನವೇ ಕಾನೂನುಬಾಹಿರ. ಕಾರ್ಯಕ್ರಮಕ್ಕೆ ಮುನ್ನ ಅನುಮತಿ ಪಡೆದಿಲ್ಲವೆಂದು ಆರೋಪಿಸಿದ್ದಾರೆ. ಕೆಎಸ್ಸಿಎ ಕಾರ್ಯಕ್ರಮದ ಮಾಹಿತಿ ನೀಡಿದಾಗ ಸರ್ಕಾರ ನಿರಾಕರಿಸಿಲ್ಲವೇಕೆ?'' ಎಂದು ಸರ್ಕಾರಿ ವಕೀಲರನ್ನು ಪ್ರಶ್ನಿಸಿದರು
ಸರಕಾರ ಪೊಲೀಸ್ ಆಯುಕ್ತರು, ಅಧಿಕಾರಿಗಳನ್ನು ಅಮಾನತು ಮಾಡಿದೆ. ಮುಖ್ಯಮಂತ್ರಿ ಕಾರ್ಯದರ್ಶಿ, ಗುಪ್ತಚರ ವಿಭಾಗದ ಮುಖ್ಯಸ್ಥರನ್ನು ಪ್ರಕರಣದಲ್ಲಿ ಕೈಬಿಟ್ಟಿದ್ದಾರೆ. ಆದರೆ ಇವರು ಯಾರನ್ನೂ ಪೊಲೀಸರು ಬಂಧಿಸಿಲ್ಲ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸಹ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಅವರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ'' ಎಂದು ವಾದ ಮಂಡಿಸಿದರು.
ವಾದ ಆಲಿಸಿದ ಪೀಠ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿತು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa