ಕೊಪ್ಪಳ : ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಕೊಪ್ಪಳ, 12 ಜೂನ್ (ಹಿ.ಸ.) : ಆ್ಯಂಕರ್ : ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳಾಗಿರುವುದರಿಂದ ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸಮಾಜವನ್ನು ರೂಪಿಸಬೇಕು. ಸಮಾಜದ ಅನಿಷ್ಟ ಪದ್ದತಿಯಾದ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಈ ಕುರಿತು ಜನರಿಗೆ
ಕೊಪ್ಪಳ : ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ


ಕೊಪ್ಪಳ, 12 ಜೂನ್ (ಹಿ.ಸ.) :

ಆ್ಯಂಕರ್ : ಮಕ್ಕಳೇ ದೇಶದ ಭವಿಷ್ಯದ ಪ್ರಜೆಗಳಾಗಿರುವುದರಿಂದ ಅವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ನಮ್ಮ ಸಮಾಜವನ್ನು ರೂಪಿಸಬೇಕು. ಸಮಾಜದ ಅನಿಷ್ಟ ಪದ್ದತಿಯಾದ ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗಾಗಿ ಜನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಈ ಕುರಿತು ಜನರಿಗೆ ತಿಳಿ ಹೇಳಬೇಕಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದ್ದಾರೆ.

ಗುರುವಾರ ಜಿಲ್ಲಾ ಪಂಚಾಯತ್‍ನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಪೊಲೀಸ್, ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಹೊಸದಾಗಿ ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ನಮ್ಮ ಭಾಗದಲ್ಲಿ ಕೃಷಿ, ಹೋಟೆಲ್, ಗ್ಯಾರೇಜ್, ಆರೋಗ್ಯ ಕ್ಷೇತ್ರ ಸೇರಿದಂತೆ ಹಲವಾರು ಕಡೆಗಳಲ್ಲಿ ಬಾಲಕಾರ್ಮಿಕ ಮಕ್ಕಳು ಕಂಡುಬರುತ್ತಾರೆ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡಬಾರದು. ಇದರಿಂದ ಅವರ ಬಾಲ್ಯವನ್ನು ಕಸಿದುಕೊಂಡಂತಾಗುತ್ತದೆ. ದೇಶದ ಭವಿಷ್ಯವಾದ ಮಕ್ಕಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾಗುವಂತೆ ನಮ್ಮ ಸಮಾಜವನ್ನು ರೂಪಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪತ್ತೆಯಾದ 62 ಬಾಲಕಾರ್ಮಿಕ ಪ್ರಕರಣಗಳಲ್ಲಿ 13 ಬಾಲಕಾರ್ಮಿಕರ ಪ್ರಕರಣಗಳಿಗೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ಕಾರ್ಮಿಕ ಇಲಾಖೆ ಸೇರಿದಂತೆ ಇತರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಹೇಳಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಮಾತನಾಡಿ, ಉಚಿತ ಕಡ್ಡಾಯ ಶಿಕ್ಷಣ ಸೌಲಭ್ಯಗಳಿದ್ದರೂ ಜಿಲ್ಲೆಯಲ್ಲಿ ಬಾಲಕಾರ್ಮಿಕರು ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಕಂಡು ಬರುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಬಾಲ ಕಾರ್ಮಿಕರ ನಿರ್ಮೂಲನೆ ಕೇವಲ ಒಂದು ಇಲಾಖೆ ಕೆಲಸ ಮಾಡಿದರೆ ಸಾಲದು, ಇತರೆ ಇಲಾಖೆಗಳು, ಗ್ರಾಮ ಪಂಚಾಯತಿ ಪಿಡಿಓ ರಿಂದ ಹಿಡಿದು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರ ಮೇಲೆಯೂ ಜವಾಬ್ದಾರಿ ಇದೆ. ಮಕ್ಕಳು ಒಂದು ವಾರ ಶಾಲೆಗೆ ಬರದಿದ್ದರೆ ಯಾಕೆ ಬರಲಿಲ್ಲ. ಅವರಿಗೆ ಮದುವೆ ಮಾಡಲಾಗಿದೆಯೇ, ಕೆಲಸಕ್ಕೆ ಕಳಿಸಲಾಗಿದೆಯೆ ಅಥವಾ ಅವರ ಆರೋಗ್ಯ ಸರಿಯಾಗಿಲ್ಲವೆ ಎಂಬ ಮಾಹಿತಿಯನ್ನು ಶಿಕ್ಷಕರು ಸಂಗ್ರಹಿಸಬೇಕು. ಈ ಕುರಿತು ಪಾಲಕರಿಗೆ ಒಂದು ನೋಟಿಸ್ ನೀಡುವ ಕೆಲಸವನ್ನು ಶಿಕ್ಷಕರು ಮಾಡಬೇಕು. ಬಾಲಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿದಾಗ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಬೇಕು ಎಷ್ಟು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ, ಯಾರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನು ಜನರಿಗೆ ತಿಳಿಸಬೇಕೆಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ್ ಎಸ್. ದರಗದ ಅವರು ವಿಶ್ವ ಬಾಲಕಾರ್ಮಿಕ ವಿರೋಧಿ ದಿನ- 2025 ರ ಪ್ರಮಾಣ ವಚನ ಬೋಧಿಸಿ ಮಾತನಾಡಿ, ಈ ದಿನಾಚರಣೆ ಉದ್ದೇಶ ಮಕ್ಕಳು ಯಾರೂ ಬಾಲಕಾರ್ಮಿಕರಾಗಿ ಉಳಿಯಬಾರದು ಎಂಬುದಾಗಿದೆ. ಮಕ್ಕಳು ತಮ್ಮ ಬಾಲ್ಯದ ವಯಸ್ಸಿನಲ್ಲಿ ಹೇಗಿರಬೇಕೋ ಹಾಗೆಯೇ ಇರಬೇಕು. ದುಡಿಯುವುದಕ್ಕೆ ಕಳಿಸುವುದರಿಂದ ಅವರ ಬಾಲ್ಯವನ್ನು ಕಸಿದುಕೊಂಡಂತೆ ಆಗುತ್ತದೆ. ಇದು ಯಾಕೆ ಆಗುತ್ತದೆ ಎಂದರೆ ನಮ್ಮಲ್ಲಿ ಇನ್ನೂ ಜನರಿಗೆ ಸರಿಯಾದ ಸೂರಿಲ್ಲ. ಅವರು ತಮ್ಮ ಹೊಟ್ಟೆ ತುಂಬಿಸಲಾಗದೆ ಅವರ ಮಕ್ಕಳು ದುಡಿಮೆಗೆ ಕೈಜೋಡಿಸುತ್ತಿದ್ದಾರೆ. ಕೆಳವರ್ಗದ ಜನರಿಗೆ ಇನ್ನೂ ಬಹಳಷ್ಟು ಮೂಲಭೂತ ಸೌಲಭ್ಯಗಳನ್ನು ಕೊಡಬೇಕಿದೆ. ಮಕ್ಕಳಿಗೆ ಇನ್ನೂ ಅವರ ಆಧಾರ್ ಕಾರ್ಡ್‍ಗಳೇ ಇಲ್ಲ ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಮಕ್ಕಳಿಗೆ ಬಾಂಡ್‍ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ್ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪರಶುರಾಮ್ ವೈ. ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಯೋಜನೆ- ಯುನಿಸೆಫ್ ಕೊಪ್ಪಳದ ಸಂಯೋಜಕರಾದ ಹರೀಶ್ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಸುರೇಶ್ ಜಿ., ಕೊಪ್ಪಳ ವೃತ್ತದ ಕಾರ್ಮಿಕ ನಿರೀಕ್ಷಕರಾದ ಮಂಜುಳಾ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಮಕ್ಕಳು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande