ಗದಗ, 12 ಜೂನ್ (ಹಿ.ಸ.) :
ಆ್ಯಂಕರ್ : ಬಾಲ ಕಾರ್ಮಿಕತೆಯಿಂದ ದುಷ್ಪರಿಣಾಮದ ಕುರಿತು ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಅರಿವು ಮೂಡಿಸಿ ಬಾಲ ಕಾರ್ಮಿಕತೆಯನ್ನು ನಿರ್ಮೂಲನೆ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ (ರಿ) ಗದಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಗದಗ ಹಾಗೂ ವಿವಿಧ ಇಲಾಖೆಗಳ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕುಟುಂಬದಲ್ಲಿನ ಬಡತನ, ಅನಕ್ಷರತೆ, ಶಿಕ್ಷಣದ ಮಹತ್ವದ ಕುರಿತು ಅರಿವಿಲ್ಲದಿರುವುದು, ವಲಸೆ ಹೋಗುವುದು, ತೀವ್ರತರಹದ ಕಾಯಿಲೆಯಿಂದ ಬಳಲುತ್ತಿರುವ ಪೋಷಕರು, ಅಸ್ಪೃಶ್ಯತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಶಾಲೆಗೆ ಹೋಗದೇ ಕೆಲಸಕ್ಕೆ ಹೋಗಿ ಬಾಲಕಾರ್ಮಿಕರಾಗುತ್ತಾರೆ. ಮಕ್ಕಳ ರಕ್ಷಣೆ ಒದಗಿಸುವುದು ಹಾಗೂ ಕಡ್ಡಾಯವಾಗಿ ಶಿಕ್ಷಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಕ್ಕಳಿಗೆ ಶಿಕ್ಷಣ ಒದಗಿಸುವುದು ಸಾಂವಿಧಾನಿಕ ಹಕ್ಕಾಗಿದೆ. ಮಕ್ಕಳಿಗೆ ಅವರ ಹಕ್ಕುಗಳ ಕುರಿತು ತಿಳುವಳಿಕೆ ನೀಡಬೇಕು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯ ಮಕ್ಕಳನ್ನು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಹಾಗೂ ಸರ್ವಾಂಗೀಣ ಪ್ರಗತಿಯ ಅವಕಾಶಗಳನ್ನು ತಡೆಗಟ್ಟುತ್ತದೆ. ಶಿಕ್ಷಣದಿಂದ ವಂಚಿತರಾದAತಹ ಹಾಗೂ ದುಡಿಮೆಯಲ್ಲಿ ತೊಡಗಿರುವ ಇಂತಹ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ ಎಂದರು.
ಬಾಲ ಕಾರ್ಮಿಕತೆಯನ್ನು ಅಧ್ಯಯನ ಮಾಡಿ ಅದನ್ನು ತಡೆಗಟ್ಟಲು 1979 ರಲ್ಲಿ ಆಗಿನ ಕೇಂದ್ರ ಸರ್ಕಾರ ಗುರುಪಾದಸ್ವಾಮಿ ಕಮಿಟಿಯನ್ನು ರಚಿಸಿತು. ನಂತರ 1986 ರಲ್ಲಿ ಬಾಲ ಕಾರ್ಮಿಕ ನಿರ್ಮೂಲನಾ ಕಾಯ್ದೆಯು ಜಾರಿಗೆ ಬಂದಿತು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986 ರನ್ವಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ ಅಪರಾಧವಾಗಿದೆ. ಒಂದು ವೇಳೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿAದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 20,000 ರಿಂದ 50,000 ಗಳವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ಧತಿಯನ್ನು ಪೋತ್ಸಾಹಿಸುವ ಪೋಷಕರಿಗೂ ಸಹ ಲಘು ಶಿಕ್ಷಾ ಪ್ರಾವಧಾನವಿದ್ದು, ಪುನರಾವರ್ತಿತ ಅಪರಾದಕ್ಕೆ ರೂ.10,000 ಗಳ ದಂಡ ವಿಧಿಸಬಹುದಾಗಿದೆ ಎಂದರು.
ತAದೆ ತಾಯಿಗಳು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು. ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದು ಪಾಲಕರ ಜವಾಬ್ದಾರಿಯಾಗಿದೆ. ಬಾಲ ಕಾರ್ಮಿಕತೆ ಕಂಡು ಬಂದಲ್ಲಿ ಅಥವಾ ಮಕ್ಕಳಿಗೆ ಏನಾದರೂ ತೊಂದರೆಯಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಸಿ.ಎಸ್.ಶಿವನಗೌಡ್ರ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ನಿಮಿತ್ತ ಪ್ರಮಾಣವಚನ ಬೋಧಿಸಿ ನಂತರ ಮಾತನಾಡಿ ಬಾಲ ಕಾರ್ಮಿಕತೆಗೆ ಅಸಹಾಯಕತೆ ಮುಖ್ಯ ಕಾರಣವಾಗಿದೆ. ಅರಿವೇ ಗುರು ಎಂಬ ನಾಣ್ನುಡಿಯಂತೆ ಮಕ್ಕಳಲ್ಲಿ ಅರಿವು ಮೂಡಿಸಿ ಅನ್ಯಾಯದ ವಿರುದ್ಧ ಹೋರಾಡುವ ಶಕ್ತಿ ಬೆಳೆಸಬೇಕು. ಸರ್ಕಾರವು ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಹಾಗೂ ಶ್ರೇಯೋಭಿವೃದ್ಧಿಗಾಗಿ ಹಲವಾರು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾದರೆ ಎಲ್ಲ ಸೌಲಭ್ಯಗಳಿಂದ ಅವರು ವಂಚಿತರಾಗದAತೆಯೇ ಆಗುತ್ತದೆ. ಬಾಲ ಕಾರ್ಮಿಕತೆ ಕುರಿತು ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿರುವವರಿಗೆ ಅರಿವು ಮೂಡಿಸಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆಗೆ 1098 ಗೆ ಕರೆ ಮಾಡಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಂ.ಎ.ನಾಯಕ ಅವರು ಮಾತನಾಡಿ ಪ್ರತಿ ಮಗುವಿಗೂ ಕಡ್ಡಾಯ ಶಿಕ್ಷಣ ಒದಗಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು. ಮಕ್ಕಳಿಗೆ ಉದ್ಯೋಗ ಆಧಾರಿತ ಶಿಕ್ಷಣ ರೂಢಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ನಿಮಿತ್ತ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಡಿಎಸ್ಪಿ ಮುರ್ತುಜಾ ಖಾದ್ರಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶ್ರೀಮತಿ ಜಯದೇವಿ ಕವಲೂರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಶ್ರೀಮತಿ ರಫೀಕಾ ಹಳ್ಳೂರ, ಕಾರ್ಮಿಕ ನಿರೀಕ್ಷಕರು, ಸೇರಿದಂತೆ ಶಾಸ್ತಿçÃಜಿ , ಸಿಡಿಓ, ಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.
ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಪ್ರತಿ ವರ್ಷ ಜೂನ್ 12 ರಂದು ಬಾಲ ಕಾರ್ಮಿಕ ಪದ್ಧತಿ ವಿರೋದಿ ದಿನಾಚರಣೆ ಆಚರಿಸಲಾಗುತ್ತಿದ್ದು ಬಾಲಕಾರ್ಮಿಕತೆಯಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಅರಿವು ಮೂಡಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸರ್ವರನ್ನು ಸ್ವಾಗತಿಸಿದರು. ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Lalita MP