ಬೆಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ಕೋರಿದ್ದಾರೆ.
ಈ ಕುರಿತು ಅವರು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು ಕಂಡು ಬಂದಿದೆ ಎಂದು ಆರ್.ಅಶೋಕ ಪತ್ರದಲ್ಲಿ ದೂರಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 35 ಸಾವಿರ ಜನರು ಹೋಗಬಹುದು. ಆದರೆ ಉಚಿತ ಪಾಸ್ ಹಾಗೂ ತಪ್ಪಾದ ಘೋಷಣೆ/ಪ್ರಕಟಣೆಗಳಿಂದಾಗಿ ಅತ್ಯಧಿಕ ಸಂಖ್ಯೆಯಲ್ಲಿ ಜನರು ಬಂದು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಇಂತಹ ಬೃಹತ್ ಕಾರ್ಯಕ್ರಮದಲ್ಲಿ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಕೂಡ ಇತ್ತು. ಆಂಬ್ಯುಲೆನ್ಸ್, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ತಪ್ಪಿನಲ್ಲಿ ಆರ್ಸಿಬಿ, ಡಿಎನ್ಎ ಹಾಗೂ ಕ್ರಿಕೆಟ್ ಅಸೋಸಿಯೇಶನ್ನ ಪಾತ್ರವೂ ಇದೆ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.
ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಹಾಗೂ ಸರ್ಕಾರಿ ಸಂಸ್ಥೆಗಳು ಯಾವುದೇ ಸಿದ್ಧತೆ ಮಾಡಿಕೊಳ್ಳದಿರುವುದು ಕಂಡು ಬಂದಿದೆ. ಕಾರ್ಯಕ್ರಮಕ್ಕೆ ಬಂದವರಲ್ಲಿ ಹೆಚ್ಚಿನವರು ಯುವಜನರೇ ಆಗಿದ್ದು, ಅವರ ಸುರಕ್ಷತೆ ಹಾಗೂ ಬದುಕುವ ಹಕ್ಕನ್ನು ಕಿತ್ತುಕೊಂಡಂತಾಗಿದೆ. ಆದ್ದರಿಂದ ಈ ದುರಂತವನ್ನು ಸ್ವಯಂ ಪ್ರೇರಿತವಾಗಿ ದೂರಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರ್.ಅಶೋಕ ಮನವಿ ಮಾಡಿದ್ದಾರೆ.
ಸರ್ಕಾರದ ಇಲಾಖೆಗಳು, ಅಧಿಕಾರಿಗಳು ಹಾಗೂ ಖಾಸಗಿ ಸಂಸ್ಥೆಗಳ ಜವಾಬ್ದಾರಿ ಹಾಗೂ ಪಾತ್ರದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ತನಿಖೆ ಮಾಡಬೇಕಿದೆ. ತಪ್ಪು ಯಾರದ್ದು ಎಂದು ಪತ್ತೆ ಮಾಡಿ, ಹೊಣೆಗಾರಿಕೆಯನ್ನು ಗುರುತಿಸಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ. ಹಾಗೆಯೇ ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಸೂಕ್ತವಾದ ನಿಯಮ ಅಥವಾ ಮಾರ್ಗಸೂಚಿಯನ್ನು ನೀಡಬೇಕಿದೆ. ಈಗಾಗಲೇ ಸರ್ಕಾರದಿಂದ ತನಿಖೆ ನಡೆಯುತ್ತಿದ್ದರೂ, ಅದು ಪಾರದರ್ಶಕವಾಗಿರಲು, ಆಯೋಗದಿಂದ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಬೇಕಿದೆ. ಹೀಗಾದರೆ ಮಾತ್ರ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.
ಇದು ನಿಜಕ್ಕೂ ತಡೆಯಬಹುದಾದ ದುರಂತರವಾಗಿತ್ತು. ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಧ್ಯಪ್ರವೇಶದಿಂದಾಗಿ ನೊಂದ ಕುಟುಂಬಗಳಿಗೆ ನ್ಯಾಯ ಸಿಗುವುದರ ಜೊತೆಗೆ, ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬಹುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ