ರಾಯಚೂರು, 12 ಜೂನ್ (ಹಿ.ಸ.) :
ಆ್ಯಂಕರ್ : ಬಡತನದ ನೆಪವೊಡ್ಡಿ ಮಕ್ಕಳನ್ನು ಶಾಲೆಯಿಂದ ಹೊರಗುಳಿಸಿ ದುಡಿಮೆಗೆ ಹಚ್ಚುವುದು ಸಂವಿಧಾನ ವಿರೋಧಿ ನಡೆಯಾಗಲಿದೆ. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸುವುದು ಪೋಷಕರ ಮೂಲಭೂತ ಹಕ್ಕು ಆಗಿದೆ ಎಂದು ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ.ಸಾತ್ವಿಕ್ ಅವರು ಹೇಳಿದ್ದಾರೆ.
ಜೂನ್ 12ರಂದು ಗುರುವಾರ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಘಟಕ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಬಾಲಕಾರ್ಮಿಕ ಯೊಜನೆ ರಾಯಚೂರು ಅವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2025ರ ಅಂಗವಾಗಿ ನಡೆದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂವಿಧಾನವು ಮಕ್ಕಳಿಗೆ ಶಿಕ್ಷಣ ನೀಡುವುದು ಮೂಲಭೂತ ಹಕ್ಕು ಎಂದು ತಿಳಿಸುತ್ತದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತವಾಗದಂತೆ ಪೋಷಕರು ಎಚ್ಚರವಹಿಸಬೇಕು. 14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಹಚ್ಚುವುದು ಅಪರಾಧವಾಗಿದೆ. ಮಕ್ಕಳಿಗೆ ಶಿಕ್ಷಣ ಒದಗಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದರು.
ಮಕ್ಕಳನ್ನು ಕೃಷಿ ಸೇರಿದಂತೆ ಉದ್ಯಮ, ಹೋಟಲ್ಗಳಲ್ಲಿ ಬಳಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಘಟನೆಗಳು ಕಂಡು ಬಂದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಕ್ಕಳನ್ನು ಚೆನ್ನಾಗಿ ಓದಿಸಿ ಉನ್ನತ ಹುದ್ದೆಗಳಾದ ಐಎಎಸ್, ಐಪಿಎಸ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುವಂತೆ ಪೋಷಕರು ಮಕ್ಕಳಿಗೆ ಬೆಂಬಲ ನೀಡಬೇಕೆಂದರು.
ಇದೆ ವೇಳೆ, ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯ ಅಂಗವಾಗಿ ಪ್ರಮಾಣ ವಚನ ಬೋಧಿಸಲಾಯಿತು. ಬಾಲಕಾರ್ಮಿಕ ತರಬೇತಿ ಕೇಂದ್ರಗಳಲ್ಲಿ ವಿದ್ಯಾಭ್ಯಾಸ ಮಾಡಿ ಉತ್ತಮ ಸಾಧನೆ ಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾಧ್ಯಕ್ಷರಾದ ಮಂಗಳ ಹೆಗಡೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಿದ್ದಯ್ಯಲಿಂಗಸ್ವಾಮಿ ಹಿರೇಮಠ, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಅಮರೇಶ, ಕಾರ್ಮಿಕ ನಿರೀಕ್ಷಕರಾದ ಮಹ್ಮದ್ ಉಮರ್ ಅಬ್ದುಲ್ ಘನಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್