ಬಳ್ಳಾರಿ, 13 ಜೂನ್ (ಹಿ.ಸ.) :
ಆ್ಯಂಕರ್ : ಧರ್ತಿ ಆಬ ಜನಜಾತೀಯ ಗ್ರಾಮ ಅಭಿಯಾನ ಯೋಜನೆಯಡಿ ಪಂಗಡ ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ತಾಲ್ಲೂಕುಗಳಿಂದ ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಇವರ ಆದೇಶದಂತೆ ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂಯ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಆರೋಗ್ಯ, ದೂರವಾಣಿ ಸಂಪರ್ಕ, ವಿದ್ಯುತ್ಚ್ಛಕ್ತಿ, ವಸತಿ ನಿರ್ಮಾಣ, ಅಂಗನವಾಡಿ ಕೇಂದ್ರಗಳ ಸ್ಥಾಪನೆ, ಆರೋಗ್ಯ ಕಾರ್ಡ್, ಜಾತಿ ಪ್ರಮಾಣ ಪತ್ರ, ಅರಣ್ಯ ಹಕ್ಕು ಯೋಜನೆಯಡಿ ಅರ್ಹರಿಗೆ ಹಕ್ಕು ಪತ್ರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಬುಡಕಟ್ಟು ಯುವಕರಿಗೆ ಕೌಶಲ್ಯಾಭಿವೃದ್ಧಿ ಯೋಜನೆಯಡಿ ತರಬೇತಿ ನೀಡುವ ಮೂಲಕ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವುದು ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮಗಳನ್ನು ಉನ್ನತೀಕರಿಸಲು ಈ ಯೋಜನೆಯು ಸಹಾಯಕವಾಗಿದೆ ಎಂದು ತಿಳಿಸಿದ್ದಾರೆ.
2024-25 ರಿಂದ 2025-26 ನೇ ಸಾಲಿಗೆ ಧರ್ತಿ ಆಬ ಜನಜಾತೀಯ ಗ್ರಾಮ ಅಭಿಯಾನ ಯೋಜನೆಯಡಿ ವಿವಿಧ 17 ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು.
ಈ ಯೋಜನೆಗೆ ಒಳಪಟ್ಟ 59 ಗ್ರಾಮದ ಬುಡಕಟ್ಟು ಜನರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್