ಕೊಪ್ಪಳ, 13 ಜೂನ್ (ಹಿ.ಸ.) :
ಆ್ಯಂಕರ್ : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.
ಗಂಗಾವತಿಯ ಮಹಾವೀರ ಸರ್ಕಲ್ ಹತ್ತಿರ 2021ರ ಮಾರ್ಚ್ 27 ರಂದು ಅರ್ಬಾಜ್ಖಾನ್, ಅರ್ಬಾಜ್ ಖಾಜಿ ಹಾಗೂ ಹುಸೇನ್ ರಜಾಕ್ ಶೇಖ್ ಎಂಬ ಆರೋಪಿಗಳು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ, ದೈಹಿಕ ಹಲ್ಲೆ ನಡೆಸಿದ್ದರು. ಈ ಕುರಿತು ಗಂಗಾವತಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ನಗರಠಾಣೆಯ ಪಿಐ ವೆಂಕಟಸ್ವಾಮಿ.ಟಿ ಅವರು ನಡೆಸಿದ್ದು, ತನಿಖೆಯಲ್ಲಿ ಆರೋಪಿತರ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಗಂಗಾವತಿಯ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಸಾಕ್ಷಿ ಮತ್ತು ದಾಖಲೆಗಳನ್ನು ಪರಿಶೀಲಿಸಿ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿದ್ದು, ಆರೋಪಿತರಿಗೆ ಭಾರತೀಯ ದಂಡ ಸಂಹಿತೆ ಕಲಂ 323 ಅಪರಾಧಕ್ಕೆ 6 ತಿಂಗಳ ಕಾರಾಗೃಹ ವಾಸದ ಶಿಕ್ಷೆ ಹಾಗೂ ರೂ.1000 ಗಳ ದಂಡ, ದಂಡ ಕೊಡದೇ ಇದ್ದಲ್ಲಿ 15 ದಿವಸ ಸಾದಾ ಕಾರಾಗೃಹ ವಾಸದ ಶಿಕ್ಷೆ ಅನುಭವಿಸುವಂತೆ, ಭಾರತೀಯ ದಂಡ ಸಂಹಿತೆ ಕಲಂ. 504 ಅಪರಾಧಕ್ಕೆ 1 ತಿಂಗಳ ಶಿಕ್ಷೆ ಹಾಗೂ ರೂ.300/- ಗಳ ದಂಡ, ದಂಡ ಕೊಡದೇ ಇದ್ದಲ್ಲಿ 3 ದಿವಸ ಸಾದಾ ಕಾರಗೃಹ ವಾಸದ ಶಿಕ್ಷೆ ಅನುಭವಿಸುವಂತೆ ಮತ್ತು ಭಾರತೀಯ ದಂಡ ಸಂಹಿತೆ ಕಲಂ. 506 ಅಪರಾಧಕ್ಕೆ 3 ತಿಂಗಳ ಶಿಕ್ಷೆ ಹಾಗೂ ರೂ.500/- ಗಳ ದಂಡ, ದಂಡ ಕೊಡದೇ ಇದ್ದಲ್ಲಿ 7 ದಿವಸ ಸಾದಾ ಕಾರಗೃಹ ವಾಸದ ಶಿಕ್ಷೆ ವಿಧಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ನಾಗಲಕ್ಷ್ಮೀ ಎಸ್. ಅವರು ವಾದ ಮಂಡಿಸಿದ್ದರು. ಗಂಗಾವತಿ ನಗರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯವರಾದ ಶ್ರೀನಿವಾಸ್ ನಾಯ್ಕ ಮತ್ತು ವಿಶ್ವನಾಥ ರವರು ಪ್ರಕರಣದ ವಿಚಾರಣೆಯ ಸಮಯದಲ್ಲಿ ಸಾಕ್ಷಿಗಳನ್ನು ಸಮಯಕ್ಕೆ ಸರಿಯಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಸಾಕಷ್ಟು ಸಹಕಾರ ನೀಡಿದ್ದಾರೆ ಎಂದು ಗಂಗಾವತಿ ಸರಕಾರಿ ಅಭಿಯೋಜಕರ ಕಾರ್ಯಾಲಯದ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್