ರಾಯಚೂರು , 16 ಜೂನ್ (ಹಿ.ಸ.) :
ಆ್ಯಂಕರ್ : ಜನ ಜೀವನದ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಇರಬೇಕು. ಈ ನಿಟ್ಟಿನಲ್ಲಿ ಬೇರೆ ಜಿಲ್ಲೆಗಳಿಗೆ ಮಾದರಿಯಾಗುವ ಹಾಗೆ ಪ್ರತಿಯೊಂದು ಯೋಜನೆಗಳು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಲು ಮುತುವರ್ಜಿ ವಹಿಸಬೇಕು ರಾಯಚೂರು ಲೋಕಸಭಾ ಸದಸ್ಯರಾದ ಜಿ ಕುಮಾರ ನಾಯಕ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜೂನ್ 16ರಂದು ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚಿಕಿತ್ಸೆ ಸಿಗುತ್ತಿಲ್ಲ ಅನ್ನುವ ಕಾರಣಕ್ಕೆ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಗರ್ಭಿಣಿಯರು ಸಾವಿಗೀಡಾಗುವ ಪ್ರಕರಣಗಳು ವರದಿಯಾಗಬಾರದು. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತೆ ವಹಿಸಬೇಕು. ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮಮಟ್ಟದ ಎಲ್ಲ ಕಡೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸಂಸದರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಶಿಶುಮರಣ ಮತ್ತು ತಾಯಿಮರಣ ಪ್ರಮಾಣವು ಶೂನ್ಯಕ್ಕಿಳಿಸಬೇಕು ಎಂದರು.
ಬಾಲ್ಯವಿವಾಹ ಪದ್ದತಿಯು ನಿಷೇಧವಿದ್ದರೂ ಇನ್ನು ಗ್ರಾಮೀಣ ಭಾಗದ ಅಲ್ಲಲ್ಲಿ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗುತ್ತಿವೆ. ಕಾನೂನುಕ್ರಮಗಳನ್ನು ಬಿಗಿಗೊಳಿಸಿ ಈ ಪದ್ದತಿಯನ್ನು ತೊಲಗಿಸಬೇಕು. ಇದಕ್ಕೆ ಪ್ರೋತ್ಸಾಹಿಸುವವರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಸಂಸದರು ಸೂಚನೆ ನೀಡಿದರು.
ಗ್ರಾಮೀಣ ಭಾಗದಲ್ಲಿ ಇತ್ತೀಚೆಗೆ ಸಾರ್ವಜನಿಕರಲ್ಲಿ ಅಧಿಕ ರಕ್ತದೊತ್ತಡ, ಶುಗರ್ ಹೆಚ್ಚುತ್ತಿವೆ. ಈ ಬಗ್ಗೆ ಗ್ರಾಮಮಟ್ಟದ ವೈದ್ಯಾಧಿಕಾರಿಗಳು ಗಮನ ಹರಿಸಬೇಕು. ಗ್ರಾಮೀಣ ಜನರಲ್ಲಿ ಹೆಚ್ಚುತ್ತಿರುವ ಬಿಪಿ, ಶುಗರ್ ತಡೆಗಾಗಿ ಇದುವರೆಗೆ ಆರೋಗ್ಯ ಇಲಾಖೆ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಬೇಕು ಎಂದು ಸಂಸದರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಎಂಬಿಬಿಎಸ್ ಪದವೀಧರರು ಖಾಲಿ ಇರುವ ಹುದ್ದೆಗಳಿಗೆ ಬಾರದಿರಲು ಇರುವ ತೊಡಕುಗಳನ್ನು ಕೂಡಲೇ ಸರಿಪಡಿಸಲು ಕ್ರಮ ವಹಿಸಬೇಕು. ಜನತೆಗೆ ಸರಿಯಾದ ಚಿಕಿತ್ಸೆ ಸಿಗುವ ನಿಟ್ಟಿನಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಸಮರ್ಪಕ ಪ್ರಮಾಣದಲ್ಲಿ ಔಷಧಿ, ಸಲಕರಣೆಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಸಂಸದರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್