ಬಳ್ಳಾರಿ, 16 ಜೂನ್ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶವು ನಿಗದಿತ ಗುರಿ ತಲುಪಬೇಕು ಎನ್ನುವುದು ಮುಖ್ಯಮಂತ್ರಿಯವರ ಆಶಯವಾಗಿದ್ದು ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಅಧಿಕಾರಿಗಳು ಶಿಕ್ಷಕರು ಶ್ರಮಿಸಬೇಕು. ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಉತ್ತಮ ಫಲಿತಾಂಶಕ್ಕೆ ಈಗಿನಿಂದಲೇ ಹಂತ-ಹಂತವಾಗಿ ಕಾರ್ಯಯೋಜನೆ ರೂಪಿಸಬೇಕು. ಈ ಯೋಜನೆ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅಡಿಪಾಯ ಹಾಕಿದಂತಾಗುತ್ತದೆ ಎಂದು ಹೇಳಿದರು.
ಶಿಕ್ಷಕರು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು, ಅಧಿಕಾರಿಗಳು ತಾವು ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದೆವೆ ಎನ್ನುವ ರೀತಿಯಲ್ಲಿ ಕಾಳಜಿ ವಹಿಸಬೇಕು. ಇದರಿಂದ ಶಾಲೆಗಳು ಅಭಿವೃದ್ಧಿ ಹೊಂದಿ ಉತ್ತಮ ಫಲಿತಾಂಶವು ಲಭಿಸುತ್ತದೆ ಎಂದರು.
ಜಿಲ್ಲೆಯ ಎಲ್ಲಾ ಶಾಲೆಗಳಿಗೂ ಉಚಿತ ವಿದ್ಯುತ್ ಸಂಪರ್ಕ ಕಲ್ಪಿಸಿದೆ. ಇದರಿಂದ ಕಂಪ್ಯೂಟರ್ ಶಿಕ್ಷಣವೂ ಲಭಿಸುತ್ತಿದೆ. ಸಂಜೆಯ ವೇಳೆಯಲ್ಲಿ ವಿಶೇಷ ತರಗತಿ ನಡೆಸಲು ಅನುಕೂಲವಾಗುತ್ತಿದೆ. ಈ ಕುರಿತು ಸಾಕಷ್ಟು ಪ್ರಚಾರ ಮಾಡಬೇಕು. ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಹೊಂದಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಶೇ.94 ರಷ್ಟು ಪಠ್ಯಪುಸ್ತಕ ಸರಬರಾಜು ಮಾಡಲಾಗಿದೆ. ಜಿಲ್ಲೆಯಲ್ಲಿ 8 ಸಾವಿರ (9 ಮತ್ತು 10 ನೇ ತರಗತಿ) ವಿದ್ಯಾರ್ಥಿಗಳು ಎನ್.ಎಸ್.ಕ್ಯೂ.ಎಫ್ ಐಟಿ ವಿಷಯ ಓದುತ್ತಿದ್ದಾರೆ ಎಂದು ಸಭೆಗೆ ತಿಳಿಸಿದರು.
ಶಾಲಾ ಆಸ್ತಿ ನೋಂದಣಿಗೆ ಮುತುವರ್ಜಿ ವಹಿಸಿ : ಜಿಲ್ಲೆಯಲ್ಲಿ ಒಟ್ಟು 633 ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಕಳೆದ ವರ್ಷ 362 ಶಾಲೆಗಳ ಆಸ್ತಿ ನೋಂದಣಿ ಮಾಡಲಾಗಿದೆ. ಅದರಲ್ಲಿ 265 ಶಾಲಾ ಆಸ್ತಿ ನೋಂದಣಿ ಬಾಕಿ ಇದ್ದು, ಇದಕ್ಕೆ ಡಿಡಿಪಿಐ ಮತ್ತು ಡಿಡಿಪಿಯು ಅಧಿಕಾರಿಗಳು ಹೊಣೆಗಾರಿಕೆ ಹೊಂದಬೇಕು. ಆಯಾ ವ್ಯಾಪ್ತಿಯ ತಹಶೀಲ್ದಾರ್ ಅವರ ಜೊತೆ ಸಹಭಾಗಿತ್ವ ಹೊಂದಿ ನೋಂದಣಿಗೆ ಆದ್ಯತೆ ವಿಷಯವಾಗಿ ಪರಿಗಣಿಸಲು ಸೂಚಿಸಬೇಕು ಎಂದು ತಿಳಿಸಿದರು.
ಡಾ.ಆಕಾಶ್ ಶಂಕರ್ ಅವರು ಮಾತನಾಡಿ, “ನನ್ನ ಶಾಲೆ-ನನ್ನ ಜವಾಬ್ದಾರಿ” ಕಾರ್ಯಕ್ರಮದಡಿ ಜಿಲ್ಲೆಯ 719 ಶಾಲೆಗಳಲ್ಲಿ ವಿವಿಧ ಶಾಲೆಗಳು ಸೇರಿ 718 ವಾಟ್ಸ್ ಆಪ್ ಗುಂಪುಗಳನ್ನು ರಚಿಸಲಾಗಿದೆ. ಅದೇರೀತಿಯಾಗಿ “ನಮ್ಮ ಶಾಲೆ- ನನ್ನ ಕೊಡುಗೆ” ಕಾರ್ಯಕ್ರಮದಡಿ ಜಿಲ್ಲೆಯ 719 ಶಾಲೆಗಳಲ್ಲಿ 206 ಶಾಲೆಗಳು ಕೊಡುಗೆ ಸ್ವೀಕೃತವಾಗಿವೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲೆಯ ಶಾಲೆಗಳ ಅಭಿವೃದ್ಧಿ ಕಾಮಗಾರಿ ಮತ್ತು ದುರಸ್ತಿ ಕಟ್ಟಡ ಕಾಮಗಾರಿ, ವಿವಿಧ ಅನುದಾನ ಬಳಕೆಯ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಪಾಲಾಕ್ಷಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮಿ ಕಿರಣ್ ಸೇರಿದಂತೆ ಜಿಲ್ಲೆಯ ಎಲ್ಲ ಬಿಇಓ ಅಧಿಕಾರಿಗಳು, ಸಿಆರ್ಪಿ, ಬಿಆರ್ಪಿ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್