ಬಳ್ಳಾರಿ, 17 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ವಲಯಗಳ ಸೂಚ್ಯಂಕ ಆಧರಿಸಿ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪರಾಮರ್ಶಿಸಿ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪೆÇ್ರ.ಎಂ. ಗೋವಿಂದ ರಾವ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ.ಡಿ.ಎಂ.ನಂಜುಂಡಪ್ಪ ಅವರ 2002ರ ವರದಿಯಲ್ಲಿ ಅಂದಿನ 176 ತಾಲೂಕುಗಳನ್ನು ಹಿಂದುಳಿದ, ಅತಿ ಹಿಂದುಳಿದ, ಅತ್ಯಂತ ಹಿಂದುಳಿದ ಹಾಗೂ ಅಭಿವೃದ್ದಿ ಹೊಂದಿದ ತಾಲೂಕುಗಳೆಂದು 4 ವರ್ಗದಲ್ಲಿ ವರ್ಗೀಕರಿಸಿ ಅದಕ್ಕನುಗುಣವಾಗಿ ಅನುದಾನ ಹಂಚಿಕೆಗೆ ಶಿಫಾರಸ್ಸು ಮಾಡಿದ್ದರು. ಇದರನ್ವಯ ಗುರುತಿಸಲಾದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಸರ್ಕಾರ 31 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ ಎಂದರು.
ಅಸಮತೋಲನ ಹೆಚ್ಚಾದಾಗ ಪ್ರದೇಶಗಳು ಹಿಂದುಳಿಯಲಿವೆ. ಡಾ. ನಂಜುಂಡಪ್ಪ ವರದಿ ಅನುಷ್ಠಾನದಿಂದ ಹೇಗೆ ಅಭಿವೃದ್ದಿಯಾಗಿದೆ ಎಂಬುದನ್ನು ಸೂಚ್ಯಂಕದ ಅಧಾರದ ಮೇಲೆ ನೋಡಲಾಗುತ್ತದೆ. ತಲಾ ಆದಾಯ, ಶಿಕ್ಷಣ, ಆರೋಗ್ಯ ಇನ್ನಿತರ ಕ್ಷೇತ್ರಗಳಲ್ಲಿನ ಸುಧಾರಣೆ, ಬೆಳವಣಿಗೆಯ ಬಗ್ಗೆಯು ಸಮಿತಿಯು ಪರಿಶೀಲಿಸಲಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ 2024 ಸೆಪ್ಟಂಬರ್ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರ್ಥಿಕ ತಜ್ಞರನ್ನೊಳಗೊಂಡ ಸಮಿತಿ ರಚಿಸಿದ್ದು, ಈ ಸಮಿತಿಯು ಕೃಷಿ, ಕೈಗಾರಿಕೆ, ಆರ್ಥಿಕ ಮೂಲ ಸೌಲಭ್ಯ, ಸಾಮಾಜಿಕ ಸೌಲಭ್ಯ, ಹಣಕಾಸಿನ ಮತ್ತು ತಾಂತ್ರಿಕ ಮೂಲ ಸೌಲಭ್ಯ ಮುಂತಾದ ವಲಯಗಳ ಅಭಿವೃದ್ಧಿಯನ್ನು ಗುರುತಿಸಿ ಸೂಚ್ಯಂಕ ನಿಗದಿಪಡಿಸಲಿದೆ. ಬಳಿಕ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ ಎಂದರು.
ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿ ಬಹಳ ಮುಖ್ಯವಾಗಿದೆ. ಇಲ್ಲಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುವುದು ಹಾಗೂ ವಲಸೆ ಹೋಗುವುದನ್ನು ಕಡಿಮೆ ಮಾಡುವುದು ಬಹಳ ಮುಖ್ಯವಾಗಿದೆ. ಜಿಲ್ಲೆಯ ಸವಾರ್ಂಗೀಣ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ಇಲ್ಲಿಯ ಉತ್ಪನ್ನಗಳು - ಬೆಳೆಗಳಿಗೆ ಮೌಲ್ಯವರ್ಧನೆ ಆಗಬೇಕಿದೆ. ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ಕೊಡಲಾಗಿದೆ. ಟೆಕ್ಸ್ಟೈಲ್ಸ್ ಹಬ್, ಮೈನಿಂಗ್, ಕೃಷಿ ಆಧಾರಿತ ಕೈಗಾರಿಕೆಗಳು, ಕೋಲ್ಡ್ ಸ್ಟೋರೇಜ್ ಘಟಕಗಳು, ಬೆಳೆಗಳಿಗೆ ಬೆಂಬಲ ಬೆಲೆ, ನೀರಾವರಿ, ಆಧುನಿಕ ಆಸ್ಪತ್ರೆಗಳು, ಸಣ್ಣ ಉದ್ಯಮಗಳಿಗೂ ಹೆಚ್ಚಿನ ಉತ್ತೇಜನ, ಶಿಕ್ಷಣ ಸಂಸ್ಥೆಗಳಿಗೆ ಮೂಲ ಸೌಕರ್ಯ ಸೇರಿದಂತೆ ಇನ್ನಿತರ ಅಂಶಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲೆಗೆ ಸಂಬಂಧಿಸಿದಂತೆ ಶಿಕ್ಷಣ, ಆರೋಗ್ಯ, ಕೈಗಾರಿಕೆ, ಕೃಷಿ, ಮೂಲಸೌಕರ್ಯ, ತಂತ್ರಜ್ಞಾನ, ಅಭಿವೃದ್ಧಿ, ಸಮಸ್ಯೆಗಳ ಬಗ್ಗೆ ವಿಷಯಾಧಾರಿತ ಚರ್ಚೆ ನಡೆಸಿದ ಸಮಿತಿಯು ಅಧಿಕಾರಿಗಳಿಂದ, ಜಿಲ್ಲೆಯ ಸಂಘ ಸಂಸ್ಥೆಗಳ ಮುಖಂಡರಿಂದ ಮಾಹಿತಿ ಪಡೆದುಕೊಂಡರು. ಸಮಿತಿಯು ಗುರುತಿಸಿರುವ ವಿಷಯಗಳಲ್ಲದೇ ಜಿಲ್ಲೆಗೆ ಸಂಬಂಧಿಸಿದಂತೆ ಇನ್ನೂ ಅನೇಕ ವಿಷಯಗಳನ್ನು ಗಮನಿಸಲಿದೆ ಎಂದರು.
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಸದಸ್ಯರಾದ ಡಾ. ಎಸ್.ಟಿ. ಬಾಗಲಕೋಟಿ, ಡಾ. ಸಂಗೀತಾ ಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಜಂಟಿ ಕೃಷಿ ನಿರ್ದೇಶಕ ಕೆ.ಎಂ. ಸೋಮಸುಂದರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಉಮಾದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವಿವಿಧ ಸ್ಥಳೀಯ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್