ಬೆಂಗಳೂರು ಕಾಲ್ತುಳಿತ ಪ್ರಕರಣ : ಆರ್​ಸಿಬಿ, ಕೆಎಸ್ಸಿಎಗೆ ನೋಟಿಸ್
ಬೆಂಗಳೂರು, 17 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕ
Court


ಬೆಂಗಳೂರು, 17 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಹಾಗೂ ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ ಪ್ರೈ. ಲಿ. ಎಂಬ ಸಂಸ್ಥೆಗಳನ್ನು ಪ್ರತಿವಾದಿಗಳಾಗಿ ಸೇರಿಸಿರುವ ನ್ಯಾಯಪೀಠ, ಅವರಿಗೆ ನೋಟಿಸ್ ಜಾರಿ ಮಾಡಿದೆ. ನಿಗದಿತ ಸಮಯದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ. ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ಹಂಗಾಮಿ ಪೀಠ ಈ ಆದೇಶ ನೀಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಐಪಿಎಲ್ ಪಂದ್ಯದಲ್ಲಿ ಜಯಗಳಿಸಿದ ಆರ್ ಸಿಬಿ ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ 11 ಮಂದಿ ದುರ್ಮರಣಕ್ಕೊಳಗಾದ ಪ್ರಕರಣ ಕುರಿತು ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿತ್ತು.

ವಿಚಾರಣೆ ವೇಳೆ ಸರ್ಕಾರದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಘಟನೆ ಸಂಬಂಧ ಮಾಹಿತಿ ಒಳಗೊಂಡ ವಸ್ತುಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಆದರೆ, ಅರ್ಜಿ ಸಲ್ಲಿಸಿರುವ ವಕೀಲರು ಇದನ್ನು ಆಕ್ಷೇಪಿಸಿ, “ಇದರಿಂದ ಪಾರದರ್ಶಕತೆ ಕಾಯ್ದುಕೊಳ್ಳಲಾಗದು ವರದಿ ಬಹಿರಂಗವಾಗಿರಬೇಕು,” ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಯಾಗಿ ಸರ್ಕಾರ, “ಮ್ಯಾಜಿಸ್ಟೇರಿಯಲ್ ಹಾಗೂ ನ್ಯಾಯಾಂಗ ತನಿಖೆ ಪ್ರಕ್ರಿಯೆಯಲ್ಲಿರುವ ಕಾರಣ ಸಂಪೂರ್ಣ ಮಾಹಿತಿಯನ್ನು ಈಗ ಬಹಿರಂಗಪಡಿಸಲಾಗದು. ಆದರೆ, ಅಂತಿಮ ವರದಿಯು ನ್ಯಾಯಾಲಯಕ್ಕೆ ಸಾರ್ವಜನಿಕವಾಗಿ ಸಲ್ಲಿಸಲಾಗುವುದು,” ಎಂದು ಸ್ಪಷ್ಟಪಡಿಸಿತು.

ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂಬ ಮನವಿಯನ್ನೂ ಅರ್ಜಿ ಪರ ವಕೀಲರು ಮುಂದಿಟ್ಟಿದ್ದಾರೆ. ಮತ್ತೊಂದು ಅರ್ಜಿಯ ಪರ ವಕೀಲರು, “ವಿಧಾನಸೌಧ, ಕಸ್ತೂರಬಾ ರಸ್ತೆ ಇತ್ಯಾದಿ ಪ್ರದೇಶಗಳು ನಿಷೇಧಿತ ವಲಯವಾಗಿದ್ದರೂ ಇಷ್ಟು ಮಂದಿ ಹೇಗೆ ಸೇರಿದರು? ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ,” ಎಂದು ನ್ಯಾಯಪೀಠದ ಗಮನ ಸೆಳೆದರು.

ಅರ್ಜಿ ವಿಚಾರಣೆ ಸಂಬಂಧ ಹಿರಿಯ ವಕೀಲ ಉದಯ್ ಹೊಳ್ಳ ಅವರನ್ನು ಸರ್ಕಾರದ ಪರವಾಗಿ ವಾದ ಮಂಡಿಸಲು ನೇಮಕ ಮಾಡಲಾಗಿದೆ. ಪ್ರಕರಣದಲ್ಲಿ ನ್ಯಾಯಾಲಯದ ನೆರವಿಗೆ ಅಮೈಕಸ್ ಕ್ಯೂರಿಯನ್ನು ನೇಮಿಸುವ ಅಗತ್ಯವಿದೆ ಎಂದು ಪೀಠ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಸೋಮವಾರ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande