ಬೆಂಗಳೂರು, 18 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಮಳೆಯ ಅಬ್ಬರ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಎಚ್ಚರಿಕೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಜೂನ್ 21ರವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಕೆಂಪು ಎಚ್ಚರಿಕೆ, ಇತರ ಜಿಲ್ಲೆಗಳಿಗೆ ಕಿತ್ತಳೆ ಹಾಗೂ ಹಳದಿ ಎಚ್ಚರಿಕೆ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ತೀವ್ರ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಹಾಸನ, ದಾವಣಗೆರೆ, ಮೈಸೂರು, ಚಾಮರಾಜನಗರ ಸೇರಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಂಡ್ಯ, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಬಂಗಾಳ ಕೊಲ್ಲಿಯ ಚಂಡಮಾರುತದ ವಿಲೀನ ಹಾಗೂ ತೆಲಂಗಾಣ-ಆಂಧ್ರ ಕರಾವಳಿಯವರೆಗೆ ಹಬ್ಬಿದ ಮೇಲ್ಮುಖ ವಾಯು ಚಂಡಮಾರುತದ ಕಾರಣದಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ. ಕೆಲ ಕಡೆಗಳಲ್ಲಿ ಗಾಳಿಯ ವೇಗ ಗಂಟೆಗೆ 50 ಕಿ.ಮೀ. ತಲುಪುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲೂ ಮಳೆ ಮುಂದುವರಿಯಲಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಲು, ನದೀ ತಟಗಳು ಹಾಗೂ ಜಲಾವೃತ ಪ್ರದೇಶಗಳಿಗೆ ತೆರಳದೆ ಸುರಕ್ಷಿತ ಸ್ಥಳಗಳಲ್ಲಿ ಉಳಿಯಲು ಹವಾಮಾನ ಇಲಾಖೆ ಸಲಹೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa