ಬೆಂಗಳೂರು, 19 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ವಿವರ...
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ರಮಾಕಾಂತ ಚವ್ಹಾಣ, ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.
*ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ*
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗ ಪ್ರವೇಶಕ್ಕೆೆ ನಿರ್ಭಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಭಂಧವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 8.21 ಕಿ.ಮೀ ಸಮುದ್ರ ತೀರದ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ. ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.
*ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ*
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಿದೆ.
*ಎ.ಆರ್.ಎಸ್ : ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ*
ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ಎ.ಆರ್.ಎಸ್) ಆಡಳಿತ/ ಸಾಮಾನ್ಯ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
*ಸ್ಪೋಕ್ ಯೋಜನೆಯ 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ*
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಪಾಶ್ವವಾಯು ಮತ್ತು ತಲೆಗೆ ತೀವ್ರ ಪೆಟ್ಟಾದ ರೋಗಿಗಳ ಆರೈಕೆಗಾಗಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಸ್ಪೋಕ್ ಆಗಿ ಕಾರ್ಯನಿರ್ವಹಿಸುವ ಯೋಜನೆಯ 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
*ಮರುನಾಮಕರಣ*
ಕಂದಾಯ ಇಲಾಖೆಯಡಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟ ಬಸಾಪೂರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆನರು ಮೊದಲಿನಿಂದ ಗೇರುಗುಡ್ಡ ಬಸಾಪೂರ ಎಂದು ಕರೆಯುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದರು.
*ಅನುಭವ ಮಂಟಪ ನಿರ್ಮಾಣ: ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ*
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. 612 ಕೋಟಿ ರೂ.ಗಳ ವೆಚ್ಚವಿತ್ತು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
*23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ*
ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು 23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
*ಗ್ರಂಥಾಲಯ ನಿರ್ಮಿಸಲು ರಿಯಾಯಿತಿ ದರದಲ್ಲಿ ನಿವೇಶನ*
ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಲಾವಣೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಸೇರಿದ 1200 ಚದರ ಅಡಿ ಅಳತೆಯ ಖಾಲಿ ನಿವೇಶನವನ್ನು ಶೇ 50 ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
*ಕನಕನಾಲಾ ಆಧುನೀಕರಣ ಯೋಜನೆಗೆ ಆಡಳಿತಾತ್ಮಕ ಅನುಮೋದನೆ*
ಜಲಸಂಪನ್ಮೂಲ ಇಲಾಖೆಯಡಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿನಾಲೆಯ ಮೇಲ್ಭಾಗದಲ್ಲಿ ಬ್ರಿಡ್ಜ್ –ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ 134.56 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಿನ್ನೀರಿನ ಮೇಲ್ಭಾಗದಲ್ಲಿರುವ ಬಾಧಿತ ಅಚ್ಚುಕಟ್ಟು ಪ್ರದೇಶಗಳಾದ ಆರ್ಯಭೋಗಾಪುರ, ಮುದಲಗುಂಡಿ, ವನರಳ್ಳಿ, ಕಿಲನೂರು, ಕಲ್ಮಳ್ಳಿ, ಅಮರಾಪುರ ತಾಂಡಾಗಳು ಕಿಲ್ಲರಹಟ್ಟಿ ಗ್ರಾಮಗಳಿಗೆ ಅನುಕೂಲ ಕಲಗಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
*ವಿಯರ್ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ*
ರಾಯಚೂರು ತಾಲ್ಲೂಕಿನ ಸಿಂಧನೂರು ತಾಲ್ಲೂಕಿನ ಚನ್ನಬಸವೇಶ್ವರ (ಒಳಬಳ್ಳಾರಿ) ಏತ ನೀರಾವರಿ ಯೋಜನೆಯ ಜಾಕ್ ವೆಲ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಮಾಡುವ 43.10 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
*ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳ ಅನುಷ್ಠಾನಕ್ಕೆ ನಿರ್ಣಯ*
ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.
*ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ 15 ರಷ್ಟು ಮೀಸಲಾತಿ ಹೆಚ್ಚಳ*
ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ. ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು ಗಮನಿಸಿ ಸೂಚನೆ ನೀಡಿದೆ. ನಮ್ಮ ಸರ್ಕಾರವು ಈ ಸಮುದಾಯದವರ ವಸತಿರಹಿತರನ್ನು ಹಾಗೂ ಸಾಮಾಜಿಕ ನ್ಯಾಯವನ್ನು ಗಮನದಲ್ಲಿರಿಸಿಕೊಂಡು ಮೀಸಲಾತಿ ಹೆಚ್ಚಿಸಲಾಗಿದೆ.
*ಮಾವು ಬೆಳೆಗಾರರಿಗೆ ಪರಿಹಾರಕ್ಕೆ ಕೇಂದ್ರವನ್ನು ಒತ್ತಾಯಿಸಲು ಕೃಷಿ ಸಚಿವರಿಗೆ ಸೂಚನೆ*
ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ. ಕೋಲಾರ, ಬೆಂಗಳೂರು ಗ್ರಾಮೀಣ ಭಾಗದವರು ಚರ್ಚಿಸಿದರು. ರೈತರಿಗೆ ಪರಿಹಾರ ನೀಡಲು ಕೋರಲಾಗಿ, ಮುಖ್ಯಮಂತ್ರಿಗಳು ಕೃಷಿ ಸಚಿವರಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದರೆ ಭೇಟಿ ನೀಡಲು ಹಾಗೂ ಸಾಧ್ಯವಾದಷ್ಟು ಹೆಚಿನ ಪರಿಹಾರವನ್ನು ನೀಡಲು ಕೇಂದ್ರವನ್ನು ಒತ್ತಾಯಿಸಬೇಕೆಂದು ಸೂಚನೆ ನೀಡಿದ್ದಾರೆ.
ಚಿತ್ತೂರು ಭಾಗದಲ್ಲಿ ರಾಜ್ಯದ ಮಾವಿನ ಹಣ್ಣುಗಳ ಪ್ರವೇಶಕ್ಕೆ ನಿರಾಕರಿಸಿರುವ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಪ್ರಸ್ತಾಪ ಮಾಡಿದರು ಎಂದು ತಿಳಿಸಿದರು.
*ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ*
ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜುಲೈ 16-17 ರಂದು ನಿಗದಿಯಾಗಬಹುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮುಂದೂಡಲು ಕಾರಣ ಕೇಳಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಚಿವರು ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಮುಂದೂಡಲಾಯಿತು ಎಂದರು.
*ಬಿಲ್ಲುಗಳ ಬಗ್ಗೆ ಚರ್ಚೆ*
ಕರ್ನಾಟಕ ಕ್ರೌಡ್ ಕಂಟ್ರೋಲ್ ಮ್ಯಾನೇಜಿಂಗ್ ಕ್ರೌಡ್ಅಟ್ ಇವೆಂಟ್ಸ್ ಅಂಡ್ ವೆನ್ಯೂ, ಮಾಸ್ ಗ್ಯಾದರಿಂಗ್ ಬಿಲ್ 2025, ಕರ್ನಾಟಕ ರೋಹಿತ್ ವೆಮುಲಾ ಬಿಲ್ 2025, ಕರ್ನಾಟಕ ಮಿಸ್ ಇನ್ಫರರ್ಮೇಷನ್, ಫೇಕ್ ನ್ಯೂಸ್ ಪ್ರಾಹಿಬಿಷನ್ ಬಿಲ್ 2025, ಕರ್ನಾಟಕ ಹೇಟ್ ಸ್ಪೀಚ್ ಅಂಡ್ ಹೇಟ್ ಕ್ರೈಂ ಪ್ರೆವೆನ್ಶನ್ ಬಿಲ 2025 ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು, ಕೆಲವು ಬಿಲ್ಲುಗಳಲ್ಲಿ ವಿವರವಾದ ಚರ್ಚೆಯಾಗಬೇಕೆಂದು ತೀರ್ಮಾನಿಸಿ ಮುಂದಿನ ಸಚಿವ ಸಂಪುಟಕ್ಕೆ ತರಲು ತೀರ್ಮಾನಿಸಲಾಗಿದೆ ಎಂದರು.
*ಕೆ.ಎ.ಟಿ ವ್ಯವಸ್ಥೆಯ ಬಗ್ಗೆ ಸರ್ಕಾರದ ಚಿಂತನೆ*
ಕೆ.ಎ.ಟಿ ಬಗ್ಗೆ ಸಾಕಷ್ಟು ಚರ್ಚೆ, ಆಕ್ರೋಶ ವ್ಯಕ್ತವಾಗಿದ್ದು, ಇದರ ವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು .
ಹಿಂದೂಸ್ತಾನ್ ಸಮಾಚಾರ್ / Rakesh Mahadevappa