ಬೆಂಗಳೂರು, 19 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಪ್ರಸ್ತುತ ವಸತಿ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ನಗರ ಹಾಗೂ ಗ್ರಾಮೀಣಾಭಿವೃದ್ಧಿಯ ಎಲ್ಲಾ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಲಭಿಸುತ್ತಿದ್ದ ಶೇಕಡಾ 10 ಮೀಸಲಾತಿಯನ್ನು ಈಗ ಶೇಕಡಾ 15ಕ್ಕೆ ಹೆಚ್ಚಿಸಲಾಗುತ್ತಿದೆ.
ಈ ಕುರಿತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಂಡಿಸಿದ್ದ ಪ್ರಸ್ತಾವನೆಗೆ, ಸಂಪುಟ ಒಪ್ಪಿಗೆ ನೀಡಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ ಮೊದಲಾದ ಎಲ್ಲಾ ಅಲ್ಪಸಂಖ್ಯಾತರಿಗೆ ಈ ಹೆಚ್ಚುವರಿ ಮೀಸಲಾತಿ ಅನ್ವಯವಾಗಲಿದೆ.
ಈ ಕುರಿತು ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ , ಸಮಾಜದಲ್ಲಿ ಸಮಾನತೆಯನ್ನು ತರಲು ಹಾಗೂ ಬಡ ಅಲ್ಪಸಂಖ್ಯಾತರಿಗೆ ವಾಸಸ್ಥಳ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ರಾಜಕೀಯ ಅಲ್ಲ, ಸಾಮಾಜಿಕ ನ್ಯಾಯದ ಭಾಗ, ಎಂದು ಸ್ಪಷ್ಟಪಡಿಸಿದ್ದು, ಈ ನಿರ್ಧಾರವು ಸಾಚಾರ್ ಸಮಿತಿ ವರದಿ, ಕೇಂದ್ರದ ಮಾರ್ಗಸೂಚಿ, ಹಾಗೂ ಸಾಮಾಜಿಕ ನ್ಯಾಯ ತತ್ವಗಳ ಆಧಾರದ ಮೇಲೆ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa