ಭೂ ಒತ್ತುವರಿ ಪ್ರಕರಣ ; ಕುಮಾರಸ್ವಾಮಿ ನಿರಾಳ
ಬೆಂಗಳೂರು, 19 ಜೂನ್ (ಹಿ.ಸ.) : ಆ್ಯಂಕರ್ : ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿ ಸುಮಾರು 14 ಎಕರೆ ಸರ್ಕಾರಿ ಭೂಮಿಯ ಅನಧಿಕೃತ ಒತ್ತುವರಿ ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಹೊರಡಿಸಿದ್ದ
Hdk


Hdk


ಬೆಂಗಳೂರು, 19 ಜೂನ್ (ಹಿ.ಸ.) :

ಆ್ಯಂಕರ್ : ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಸರ್ವೇ ನಂಬರ್ 8, 9, 10, 16, 17 ಮತ್ತು 79ರಲ್ಲಿ ಸುಮಾರು 14 ಎಕರೆ ಸರ್ಕಾರಿ ಭೂಮಿಯ ಅನಧಿಕೃತ ಒತ್ತುವರಿ ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಉಚ್ಚ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ.

ಈ ಆದೇಶದಿಂದ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧದ ಒತ್ತುವರಿ ಆರೋಪದದಲ್ಲಿ ನಡೆಯಲಿದ್ದ ವಿಚಾರಣೆಗೆ ತಾತ್ಕಾಲಿಕ ತಡೆ ಬಿದ್ದಿದ್ದು, ಸದ್ಯಕ್ಕೆ ಅವರು ನಿರಾಳರಾಗಿದ್ದಾರೆ.

ಸರ್ಕಾರಿ ಜಮೀನು ಒತ್ತುವರಿ ಆರೋಪ ಸಂಬಂಧ ತಮ್ಮ ವಿರುದ್ದ ವಿಚಾರಣೆಗೆ ಎಸ್‌ಐಟಿ ರಚನೆ ಮಾಡಿದ್ದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ವಿಶೇಷ ತನಿಖಾ ತಂಡ ರಚನೆ ಮಾಡುವ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಅಧಿಸೂಚನೆ ಹೊರಡಿಸದೇ ಎಸ್‌ಐಟಿ ರಚನೆ ಮಾಡಿರುವ ಆದೇಶಕ್ಕೆ ಮುಂದಿನ ಆದೇಶದವರೆಗೂ ತಡೆ ನೀಡುತ್ತಿರುವುದಾಗಿ ತಿಳಿಸಿ, ವಿಚಾರಣೆಯನ್ನು ಮುಂದೂಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ''ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದ ಬಳಿಕ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಹೀಗಾಗಿ, ಇದು ಸರ್ಕಾರದ ಆದೇಶವಾಗಿದ್ದು, ಅಧಿಸೂಚನೆ ಆಗುವುದಿಲ್ಲ. ಇದರ ಮುಂದುವರೆದ ಭಾಗವಾಗಿ ಎಸ್ಐಟಿ ಕೈಗೊಂಡಿರುವ ಕ್ರಮಗಳು ಕಾನೂನುಬಾಹಿರ. ಆದ್ದರಿಂದ ಎಸ್ಐಟಿ ರಚಿಸಿರುವ ಸರ್ಕಾರದ ಆದೇಶದ ನಂತರ ಕಂದಾಯ ಇಲಾಖೆಯ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳನ್ನು ಅಕ್ರಮ ಎಂದು ಘೋಷಿಸಬೇಕು. ಈ ಸಂಬಂಧ ಮೇ 29ರಂದು ನೀಡಿರುವ ಸಮನ್ಸ್ ರದ್ದುಪಡಿಸಬೇಕು'' ಎಂದು ಪೀಠಕ್ಕೆ ಕೋರಿದ್ದರು.

ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಒತ್ತುವರಿ ಆರೋಪದಲ್ಲಿ ಕುಮಾರಸ್ವಾಮಿ ವಿರುದ್ಧ ವಿಚಾರಣೆಗೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಬೆಂಗಳೂರಿನ ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಸದಸ್ಯರಾಗಿ ನೇಮಿಸಿ, ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್ ಅವರನ್ನು ಎಸ್ಐಟಿಯ ಸದಸ್ಯ ಕಾರ್ಯದರ್ಶಿಯಾಗಿ ನೇಮಿಸಿ ರಾಜ್ಯ ಸರ್ಕಾರವು ಜನವರಿ 28ರಂದು ಆದೇಶಿಸಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande