ಧಾರವಾಡ, 02 ಜೂನ್ (ಹಿ.ಸ.) :
ಆ್ಯಂಕರ್ : ಭಾರತವು ವಿಶ್ವದ ಶಕ್ತಿಶಾಲಿ ರಾಷ್ಟ್ರವಾಗಲು ಮಾನವ ಸಂಪನ್ಮೂಲದ ಸರಿಯಾದ ಬಳಕೆ ಅಗತ್ಯವಿದ್ದು, ಮಕ್ಕಳ ಶಿಕ್ಷಣ ಮತ್ತು ಕೌಶಲ್ಯ ತರಬೇತಿಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಧಾರವಾಡದಲ್ಲಿ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ನಿರ್ಮಿಸಿದ ದೀನದಯಾಳ್ ಉಪಾಧ್ಯಾಯ ವಿದ್ಯಾರ್ಥಿ ವಸತಿನಿಲಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
“ತಂತ್ರಜ್ಞಾನ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ವಿಷಯ ಆಯ್ಕೆ ಮಾಡಿಕೊಂಡು ಯಶಸ್ವಿಯಾಗಿ ಮುಂದುವರಿಯಬೇಕು. ಭಾರತದಲ್ಲಿ ಕಂಪನಿಗಳ ಸಂಖ್ಯೆಯು ಹೆಚ್ಚಾಗಿದ್ದು, ಉದ್ಯೋಗ ಅವಕಾಶಗಳು ಹೆಚ್ಚುತ್ತಿರುವುದು ಉತ್ಸಾಹಕರ” ಎಂದರು.
ವೈದ್ಯಕೀಯ ಶಿಕ್ಷಣದ ಕುರಿತು ಮಾತನಾಡಿದ ಅವರು, ಕಳೆದ ಕೆಲವು ವರ್ಷಗಳಲ್ಲಿ ಎಂ.ಬಿ.ಬಿ.ಎಸ್ ಪದವೀಧರರ ಸಂಖ್ಯೆ 50 ಸಾವಿರದಿಂದ 1.11 ಲಕ್ಷಕ್ಕೇರಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ವೈದ್ಯಕೀಯ ಶಿಕ್ಷಣ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.
ಕೌಶಲ್ಯಾಭಿವೃದ್ಧಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ‘ಮೇಕ್ ಇನ್ ಇಂಡಿಯಾ’, ‘ಸ್ಟಾರ್ಟ್ಅಪ್ ಇಂಡಿಯಾ’ ಯೋಜನೆಗಳಿಂದ ಭಾರತವು 4ನೇ ಶ್ರೇಣಿಯ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ರಕ್ಷಣಾ ಸಾಮಗ್ರಿಗಳ ರಫ್ತು ಮತ್ತು ಮೊಬೈಲ್ ಉತ್ಪಾದನೆಯಲ್ಲೂ ಭಾರತವು ಪ್ರಗತಿ ಸಾಧಿಸಿದೆ ಎಂದು ಅವರು ವಿವರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa