ಮಾನ್ವಿ, 20 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆ ನಿರ್ಮೂಲನೆಯ ಆಟೋ ಪ್ರಚಾರದ ಜನಜಾಗೃತಿ ಸಂಚಾರಿ ವಾಹನಕ್ಕೆ ಮಾನವಿಯ ಗ್ರೇಡ್-2 ತಹಶೀಲ್ದಾರ ಅಬ್ದುಲ್ ವಾಹಿದ್ ಅವರು ಚಾಲನೆ ನೀಡಿದ್ದಾರೆ.
ನಂತರ ಅವರು ಮಾತನಾಡಿ, ಮಕ್ಕಳನ್ನು ಯಾವುದೇ ಕಾರಣಕ್ಕೂ ಕೆಲಸಕ್ಕೆ ಕಳುಹಿಸದೇ ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಮಕ್ಕಳು ತಮ್ಮ ಬಾಲ್ಯವನ್ನು ಶಿಕ್ಷಣ ಮತ್ತು ಆಟದ ಜೊತೆಗೆ ಕಳೆಯಬೇಕು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವುದು ಪೋಷಕರ ಆದ್ಯ ಕರ್ತವ್ಯವಾಗಿರುತ್ತದೆ ಎಂದು ತಿಳಿಸಿದರು.
ಈ ಸಂಚಾರಿ ಜನಜಾಗೃತಿ ವಾಹನವು ಎಸ್.ಸಿ ಮತ್ತು ಎಸ್.ಟಿ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮಾನವಿ ತಾಲೂಕಿನಾದ್ಯಂತ 02 ದಿನಗಳ ಕಾಲ ಸಂಚರಿಸಲಿದೆ. ಇದೆ ವೇಳೆ ಕರಪತ್ರಗಳನ್ನು ಹಂಚುವುದರ ಮೂಲಕ ಮತ್ತು ಸ್ಟಿಕ್ಕರ್ಗಳನ್ನು ಅಂಟಿಸುವ ಮುಖಾಂತರ ಜನಜಾಗೃತಿ ಮೂಡಿಸಲಾಗುತ್ತಿದೆ. ಮಕ್ಕಳನ್ನು ಕೆಲಸಕ್ಕೆ ಕಳುಹಿಸದೇ ಶಾಲೆಗೆ ಕಳುಹಿಸಬೇಕು ಎಂದು ಜನರಲ್ಲಿ ತಿಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ, ಮಾನವಿಯ ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ಶಿಕ್ಷಣ ಇಲಾಖೆಯ ಸೋಮಶೇಖರ ಹಾಗೂ ಹಾಲೇಶ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರಾಜಶೇಖರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಸರಿತಾ ಹಾಗೂ ಶಿವಶಂಕರ ಹಾಗೂ ಇನ್ನೀತರರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್