ಹೊಸಪೇಟೆ, 21 ಜೂನ್ (ಹಿ.ಸ.) :
ಆ್ಯಂಕರ್ : ಆರೋಗ್ಯ ಹಿತದೃಷ್ಟಿಯಿಂದ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಘಟಕ, ಜಲಜೀವನ್ ಮಿಷನ್ ನಿಂದ ಪೂರೈಕೆಯಾಗುವ ನೀರನ್ನು ಕಡ್ಡಾಯವಾಗಿ ಕುಡಿಯಲು ಬಳಸಬೇಕು ಎಂದು ಜಿಪಂನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಕ್ರಂ ಅಲಿ ಷಾ ಅವರು ಹೇಳಿದ್ದಾರೆ.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೇಸಿಗೆ ಮುಗಿದು ಮಳೆಗಾಲ ಆರಂಭವಾದ ಹಿನ್ನಲೆಯಲ್ಲಿ ಪ್ರತಿಯೊಬ್ಬರು ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಮುಂಜಾಗೃತ ಕ್ರಮಗಳನ್ನು ಪಾಲಿಸಬೇಕಿದೆ. ಈ ವೇಳೆಯಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಆರೋಗ್ಯ ಹಿತದೃಷ್ಟಿಯಿಂದ ಕುಡಿಯುವ ನೀರಿನ ಶುದ್ಧತೆಯ ಬಗ್ಗೆ ಗಮನವಿರಲಿ. ಮನೆಗಳಲ್ಲಿ ಬಳಸುವ ನೀರಿನ ಮೂಲಗಳು ಬಾವಿ, ಕೊಳವೆ ಬಾವಿ, ಸಂಗ್ರಹ ಟ್ಯಾಂಕ್ಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಿ. ಕುಡಿಯುವ ನೀರನ್ನು ಆರ್ಓ ಪ್ಲಾಂಟ್ಗಳು ಹಾಗೂ ಜಲ ಜೀವನ್ ಮಿಷನ್ನಲ್ಲಿ ಪೂರೈಕೆಯಾಗುತ್ತಿರುವ ನೀರನ್ನು ಕಡ್ಡಾಯವಾಗಿ ಕುಡಿಯಬೇಕು.
ನೇರವಾಗಿ ಬೊರವೆಲ್ ಮೂಲಕ ಬರುವ ನೀರನ್ನು ಕುಡಿಯುವುದನ್ನು ಕೈಬಿಡಬೇಕು. ಸಾಧ್ಯವಾದರೇ ನೀರನ್ನು ಕುದಿಸಿ ಆರಿಸಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು. ಗ್ರಾಮದಲ್ಲಿ ಸರಬರಾಜು ಆಗುವ ನೀರನ್ನು ಬಳಕೆಗೆ ಬಳಸಬಹುದು. ಕಲುಷಿತ ನೀರು ಸೇವೆನೆಯಿಂದ ಕಾಲರಾದಂತಹ ಮಾರಣಾಂತಿಕ ಕಾಯಿಲೆಗಳು ಹರಡುವ ಸಾಧ್ಯತೆ ಇರುತ್ತದೆ.
ಸೊಳ್ಳೆಗಳಿಂದ ರಕ್ಷಣೆ ಪಡೆಯಿರಿ. ನಿಮ್ಮ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ಸಂಗ್ರಹವಾಗದಂತೆ, ಹೂವಿನ ಕುಂಡಗಳು, ಒಡೆದ ಪಾತ್ರೆಗಳು, ಟೈರ್ಗಳಲ್ಲಿ ನೀರು ನಿಲ್ಲದಂತೆ ನಿಲ್ಲದಂತೆ ನಿಗಾ ವಹಿಸಿ. ಸೊಳ್ಳೆಗಳ ಸಂತಾನೋತ್ಪತ್ತಿಗೆ ಅನುಕೂಲವಾಗಲಿದೆ.
ಸೊಳ್ಳೆಗಳಿಂದ ಡೆಂಗ್ಯೂ, ಮಲೇರಿಯಾ, ಚಿಕನ್ ಗುನ್ಯಾದಂತಹ ಕಾಯಿಲೆಗಳು ಹರಡುತ್ತವೆ. ರಾತ್ರಿ ಮಲಗುವಾಗ ಸೊಳ್ಳೆ ಪರದೆ, ಸೊಳ್ಳೆ ಬತ್ತಿ, ಸೊಳ್ಳೆ ನಿವಾರಕ ಕ್ರೀಂಗಳನ್ನು ಬಳಸಬೇಕು. ಕುಡಿಯುವ ನೀರು ಮತ್ತು ನೈರ್ಮಲ್ಯತೆಗೆ ಬಗ್ಗೆ ಜಾಗೃತಿ ವಹಿಸಬೇಕು. ಪ್ರತಿಯೊಬ್ಬರ ಕುಟುಂಬದ ಆರೋಗ್ಯದ ಕಾಳಜಿಯ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಆದ್ಯತೆ ವಹಿಸಲಾಗುವುದು ಎಂದರು.
ಹಂಪಿ ಗ್ರಾಪಂ ಅಧ್ಯಕ್ಷೆ ರಜನಿ ಷಣ್ಮುಖ ಗೌಡ ಮಾತನಾಡಿ, ಹಂಪಿಯ ಎಂ.ಪಿ.ಪ್ರಕಾಶ ನಗರದಲ್ಲಿ ಕುಡಿಯುವ ನೀರಿನ ಪೂರೈಕೆಗೆ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು. ಸದ್ಯದಲ್ಲಿ ವಿದ್ಯುತ್ ಸಂಪರ್ಕವಿದ್ದಾಗ ಮಾತ್ರ ನೀರು ಪೂರೈಕೆ ಮಾಡಲಾಗುತ್ತದೆ. ವಿದ್ಯುತ್ ವ್ಯತ್ಯಯವಾದಲ್ಲಿ ನೀರು ಸರಬರಾಜು ಮಾಡಲು ಸಮಸ್ಯೆಯಾಗಿದೆ. ಹಂಪಿ ಪ್ರಾಧಿಕಾರದಿಂದ ಟ್ಯಾಂಕ್ ನಿರ್ಮಾಣಕ್ಕೆ ಅನುಮತಿ ನೀಡಲು ಒಪ್ಪಲಾಗಿದೆ. ಶೀಘ್ರವೇ ಅನುದಾನ ನೀಡಿ ಭೂಮಿಪೂಜೆ ನೆರವೇರಿಸುವಂತೆ ತಿಳಿಸಿದರು.
ಈ ವೇಳೆ ಬೈಲುವದ್ದಿಗೇರಿ ಗ್ರಾಪಂ ಅಧ್ಯಕ್ಷೆ ಜೆ.ಲಕ್ಷ್ಮಿದೇವಿ, ಜಿಪಂ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ವಿಭಾಗದ ಜಿಲ್ಲಾ ಕಾರ್ಯಪಾಲಕ ಅಭಿಯಂತರರಾದ ದೀಪಾ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಜಿಲ್ಲಾ ಬುಡಕಟ್ಟು ಕಲ್ಯಾಣ ಅಧಿಕಾರಿ ರವಿಕುಮಾರ್, ಜಿಲ್ಲಾ ಐಸಿಡಿಎಸ್ ಅಧಿಕಾರಿ ಸುಭದ್ರ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್