ಗದಗ, 21 ಜೂನ್ (ಹಿ.ಸ.) :
ಆ್ಯಂಕರ್ : ಪ್ರತಿಯೊಬ್ಬರೂ ಯೋಗದಿಂದ ಆರೋಗ್ಯಯುತ ಜೀವನ ನಿರ್ವಹಣೆ ಮಾಡಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಗದಗ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ‘’ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆ ಗದಗ ಬೆಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ 11 ನೇ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯವಂತ ದೇಹವು ಎಷ್ಟು ಮುಖ್ಯವಾಗಿದೆಯೋ ಅಷ್ಟೇ ಆರೋಗ್ಯಯುತ ಮನಸ್ಸು ಮುಖ್ಯವಾಗಿದೆ. ಪ್ರತಿಯೊಬ್ಬರೂ ಯೋಗವನ್ನು ಶಿಸ್ತಿನಿಂದ ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಬೇಕು. ಮನುಷ್ಯನು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸದೃಡತೆ ಹೊಂದಬೇಕಾದರೆ ಅದನ್ನು ಯೋಗದಿಂದ ಪಡೆಯಬಹುದಾಗಿದೆ, ಬ್ರಾಹ್ಮಿಮೂಹರ್ತದಲ್ಲಿ ಯೋಗವನ್ನು ಯೋಗಾಭ್ಯಾಸ ಮಾಡುವುದರಿಂದ ಯೋಗವು ದೈಹಿಕ ಕ್ಷಮತೆಯನ್ನು ಹಚ್ಚಿಸುತ್ತದೆ ಮತ್ತು ಆರೋಗ್ಯಯುತ ಜೀವನ ಶೈಲಿಗೆ ನಡೆಸಬಹುದಾಗಿದೆ ಎಂದರು.
ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಮನಸ್ಸು, ಮತ್ತು ದೇಹ ಸಾಮರಸ್ಯವನ್ನು ಸಾಧಿಸುವ ಒಂದು ಜೀವನ ಕಲೆ. ಇದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುತ್ತದೆ, ಎಂದು ಹೇಳಿದರು. ಯೋಗವು ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ತರುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾ ಆಯುಷ್ಯ ಇಲಾಖೆ ಅಧಿಕಾರಿ ಡಾ ಜಯಪಾಲಸಿಂಗ ಪಿ ಸಮೋರೆಕರ ಸರ್ವರನ್ನು ಸ್ವಾಗತಿಸಿ ಮಾತನಾಡಿ ಯೋಗವು ಭಾರತದ ಅಮೂಲ್ಯ ಕೊಡುಗೆಯಾಗಿದ್ದು, ಇದನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದರು.. ಯೋಗದ ಮೂಲಕ ಆರೋಗ್ಯಕರ ಜೀವನಶೈಲಿಯ ನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಡಾ. ಅಶೋಕ ಮತ್ತಿಕಟ್ಟಿ ಯೋಗ ಪ್ರಾರ್ಥನೆ ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಡಾ. ಸತೀಶ ಹೊಂಬಾಳಿ ಅವರು ಯೋಗಾಸನ ಮತ್ತು ಪ್ರಾಣಾಯಾಮ ನಡೆಸಿಕೊಟ್ಟರು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಜಯಂತಿ ಅಕ್ಕ ಅವರು ಧ್ಯಾನ, ಸಂಕಲ್ಪ ಮತ್ತು ಶಾಂತಿಮಂತ್ರವನ್ನು ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಯೋಗ ದಿನಾಚರಣೆ ನಿಮಿತ್ತ ಶಾಲಾ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆ ಯಲ್ಲಿನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಡಿವೈಎಸ್ಪಿ ಮುರ್ತುಜಾ ಖಾದ್ರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ.ಎಸ್.ನೀಲಗುಂದ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಯೋಗಾಸಕ್ತರು, ಶಾಲಾ ವಿದ್ಯಾರ್ಥಿಗಳು , ಸಂಘ ಸಂಸ್ಥೆಯವರು ಹಾಜರಿದ್ದರು.
ಶಾಲಾ ವಿದ್ಯಾರ್ಥಿಗಳು, ಯೋಗಾಸಕರು, ವಿವಿಧ ಇಲಾಖೆ ಅಧಿಕಾರಿಗಳು ಯೋಗ ಶಿಕ್ಷಕರ ಮಾರ್ಗದರ್ಶನ ದಲ್ಲಿ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ಯೋಗಾಸನಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಯೋಗಾಸನಗಳಾದ ತಾಡಾಸನ, ವೃಕ್ಷಾಸನ, ಭುಜಂಗಾಸನ ಮತ್ತು ಶವಾಸನ ಹಾಗೂ ಆಸನಗಳನ್ನು ಮಕ್ಕಳು ಸುಲಲಿತವಾಗಿ ಪ್ರದರ್ಶಿಸಿದರು, ಇಲಾಖೆಯ ಅಧಿಕಾರಿಗಳು ಸಂಘ ಸಂಸ್ಥೆಯವರು ಯೋಗದಲ್ಲಿ ಬಾಗವಹಿಸಿ ಯಶಸ್ವಿಗೂಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Lalita MP