ರಾಯಚೂರು, 23 ಜೂನ್ (ಹಿ.ಸ.) :
ಆ್ಯಂಕರ್ : 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ.11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ , ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದರು.
ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ
ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್